×
Ad

15 ದಿನದೊಳಗೆ ಏಕವಿನ್ಯಾಸ ನಕ್ಷೆ ಸಮಸ್ಯೆ ಬಗೆಹರಿಸಿ: ಸಂಸದ ಕೋಟ ಸೂಚನೆ

Update: 2025-05-31 21:01 IST

ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಏಕವಿನ್ಯಾಸ ನಕ್ಷೆಯ ಸಮಸ್ಯೆಗಳು ಮೀತಿಮೀರಿದ್ದು, ಜನಸಾಮಾನ್ಯರಿಗೆ ಗೃಹ ನಿರ್ಮಾಣ ಹಾಗೂ ಕಟ್ಟಡಗಳನ್ನು ಕಟ್ಟಲು ತೊಂದರೆಯಾಗುತ್ತಿದೆ. ಇದನ್ನು ಹದಿನೈದು ದಿನಗಳ ಒಳಗೆ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಏಕನಿವೇಶನ ನಕ್ಷೆ ಹಾಗೂ ನಮೂನೆ 9/11ನ್ನು ಪಡೆಯುವಲ್ಲಿ ಎದುರಾಗು ತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕರೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಈ ಹಿಂದೆ ಗ್ರಾಮ ಪಂಚಾಯತ್‌ನಲ್ಲಿ ವಿತರಿಸುತ್ತಿದ್ದ 9/11 ಪ್ರಾಧಿಕಾರಕ್ಕೆ ಪ್ರತ್ಯಾಯೋಜಿಸಿದ ಬಳಿಕ ಕಾರಣಲ್ಲದೆ ವಿಳಂಬ ನೀತಿಯನ್ನು ಅನುಸರಿ ಸುತ್ತಿದ್ದು, ಇದರಿಂದ ಅರ್ಜಿದಾರರು ಬೇಸತ್ತು ಹೋಗಿದ್ದಾರೆ. ರಸ್ತೆ ಅಂಚಿನ 6 ಮೀ. ಬಿಟ್ಟು ಏಕ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡುವಂತೆ ಸರಕಾರದ ಸುತ್ತೋಲೆ ಇದ್ದರೂ ಸಹ ಪ್ರಾಧಿಕಾರದ ನಿರ್ಲಕ್ಷತನದಿಂದ ಸಾವಿರಾರು ಕಡತಗಳು ವಿಲೇವಾರಿಯಾಗದೇ ಬಾಕಿ ಇವೆ. ಪ್ರಾಧಿಕಾರದ ಅಧಿಕಾರಿಗಳು 15 ದಿನಗಳ ಒಳಗೆ ಎಲ್ಲಾ ಕಡತಗಳನ್ನು ವಿಲೇವಾರಿ ಮಾಡಬೇಕು ಎಂದು ಸಂಸದ ಕೋಟ ಸೂಚನೆ ನೀಡಿದರು.

ಸುತ್ತೋಲೆಯಲ್ಲಿ ಇರುವಂತೆ ನಗರ ಸ್ಥಳೀಯಾಡಳಿತ ಸಂಸ್ಥೆಗಳು ಇರುವ ರಸ್ತೆಗಳು ಅಗಲೀಕರಣಗೊಳ್ಳಲು ಸಾಧ್ಯವಿಲ್ಲವೆಂದು ಪ್ರಸ್ತಾಪನೆ ಕಳುಹಿಸಿದರೆ ಕೇವಲ 3.5ಮೀ.ಗೆ ಅನುಮತಿ ನೀಡುವ ಸರಕಾರದ ಆದೇಶವನ್ನು ಪಾಲಿಸಬೇಕು. ಪ್ರಾಧಿಕಾರದಲ್ಲಿ ಮಧ್ಯವರ್ತಿಗಳ ಹಾವಳಿಯನ್ನು ತಕ್ಷಣ ನಿಲ್ಲಿಸಿ ಜನಸಾಮಾನ್ಯರಿಗೆ ಆಗುವ ತೊಂದರೆಗಳನ್ನು ನಿವಾರಿಸಬೇಕು ಎಂದೂ ಕೋಟ ತಿಳಿಸಿದರು.

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಜಿಲ್ಲೆಯಲ್ಲಿ ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 11,000 ಕ್ಕೂ ಅಧಿಕ ಅರ್ಜಿಗಳು ಕಾಯುತ್ತಿದ್ದು, ಇವುಗಳ ತುರ್ತು ವಿಲೇವಾರಿಗೆ ಕೂಡಲೇ ಕ್ರಮ ವಹಿಸುವಂತೆ ಒತ್ತಾಯಿಸಿದರು.

ಕುಂದಾಪುರ ಶಾಸಕ ಕಿರಣ್‌ಕುಮಾರ್ ಕೊಡ್ಗಿ ಮಾತನಾಡಿ, ದೂರದೂರುಗಳಾದ ಕುಂದಾಪುರ ಹಾಗೂ ಬೈಂದೂರಿನಿಂದ ಅರ್ಜಿದಾರರು ನಿತ್ಯ ಪ್ರಾಧಿಕಾರಕ್ಕೆ ಬರುವ ದುಸ್ಥಿತಿ ಬಂದಿದೆ. ಜನಸಾಮಾನ್ಯರ ಸಮಸ್ಯೆಯನ್ನು ಅರಿತು ಅಧಿಕಾರಿಗಳು ತುರ್ತಾಗಿ ಸ್ಪಂದಿಸುವ ಕೆಲಸವಾಗಬೇಕು ಎಂದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಏಕ ವಿನ್ಯಾಸ ನಕ್ಷೆ ಅನುಮೋದನೆ ಸಮಸ್ಯೆಯಿಂದ ಜಿಲ್ಲಾಡಳಿತಕ್ಕೆ ಮತ್ತು ಜನಪ್ರತಿನಿಧಿಗಳಿಗೆ ಕೆಟ್ಟ ಹೆಸರು ಬರುತ್ತಿದೆ. ಅರ್ಜಿದಾರರು ಪ್ರತಿನಿತ್ಯ ವಿವಿಧ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ಸರಿಪಡಿಸಲು ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಮಾತನಾಡಿ, ಭೂಮಾಪನ ಇಲಾಖೆಯ ಸುತ್ತೋಲೆಯಿಂದ 500ಕ್ಕೂ ಅಧಿಕ ಅರ್ಜಿಗಳು ವಿಲೇವಾರಿಯಾಗದೇ ನೆನೆಗುದಿಗೆ ಬಿದ್ದಿವೆ. ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಈ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಅಪರ ಜಿಲ್ಲಾಧಿಕಾರಿ ಅಬೀದ ಗದ್ಯಾಳ ಮಾತನಾಡಿ, ದೂರದೂರಿನಿಂದ ಬರುವ ಅರ್ಜಿದಾರರಿಗೆ ತೊಂದರೆ ಯಾಗದಂತೆ ಮತ್ತು ಗ್ರಾಮ ಪಂಚಾಯತ್ ಶಿಫಾರಸ್ಸುಗಳಿರುವ ಅರ್ಜಿಗಳನ್ನು ವಿಳಂಬವಿಲ್ಲದೇ ಅನುಮೋದನೆ ನೀಡಲು ಪ್ರಾಧಿಕಾರಕ್ಕೆ ಸೂಚಿಸಿದರು.

ಸುದೀರ್ಘ ಚರ್ಚೆಯ ನಂತರ ರಸ್ತೆಯ ಅಂಚಿನ 6ಮೀ. ನಿಗದಿಗೊಳಿಸಿ, ಲೋಕೋಪಯೋಗಿ ಇಲಾಖೆ ಅನುಮತಿ ಪಡೆದು ಕಡತಗಳನ್ನು 15 ದಿನಗಳೊಳಗೆ ವಿಲೇವಾರಿ ಮಾಡುವುದಾಗಿ ಪ್ರಾಧಿಕಾರದ ಸಹಾಯಕ ನಿರ್ದೇಶಕಿ ರಮ್ಯ ತಿಳಿಸಿದರು.

ಸಭೆಯಲ್ಲಿ ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಸಭೆ ಆಯುಕ್ತ ಮಹೇಶ್, ಕುಂದಾಪುರ ಹಾಗೂ ಕಾಪು ನಗರ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನವೀನ್, ಲೋಕೋಪಯೋಗಿ ಇಲಾಖೆಯ ಕಾರ್ಯ ನಿರ್ವಾಹಕ ಅಭಿಯಂತರ ಕಿರಣ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಜ್ಞಾನಮೂರ್ತಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.


 



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News