ಸಾಲ್ಮರ : ವಿಶ್ವ ಛಾಯಾಗ್ರಾಹಕರ ದಿನಾಚರಣೆ ಪ್ರಯುಕ್ತ ಆರೋಗ್ಯ ತಪಾಸಣಾ ಶಿಬಿರ
ಕಾರ್ಕಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ, ಕಾರ್ಕಳ ವಲಯದ ವತಿಯಿಂದ ವಿಶ್ವ ಛಾಯಾಗ್ರಾಹಕರ ದಿನಾಚರಣೆಯ ಪ್ರಯುಕ್ತ ಕಾರ್ಕಳ ಸಾಲ್ಮರದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.
ಕಸ್ತೂರ್ಬಾ ಮೆಡಿಕಲ್ ಹಾಸ್ಪಿಟಲ್, ಮಣಿಪಾಲ ಹಾಗೂ ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ಕಾರ್ಕಳ ಇವರ ಸಹಯೋಗದಲ್ಲಿ ನಡೆದ ಶಿಬಿರದಲ್ಲಿ ಸುಮಾರು 80 ಮಕ್ಕಳಿಗೆ ಸಾಮಾನ್ಯ ಆರೋಗ್ಯ ತಪಾಸಣೆ, ಕಣ್ಣಿನ ತಪಾಸಣೆ ಹಾಗೂ ದಂತ ತಪಾಸಣೆ ನಡೆಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದ ಎಸ್.ಕೆ.ಪಿ.ಎ. ಕಾರ್ಕಳ ವಲಯದ ಅಧ್ಯಕ್ಷ ಪ್ರಮೋದ್ ಚಂದ್ರ ಪೈ, ಸುಮಾರು 118 ವರ್ಷಗಳ ಇತಿಹಾಸ ಹೊಂದಿರುವ ಈ ಶಾಲೆಯು ಕಾರ್ಕಳದ ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಸ್ಥಾನ ಹೊಂದಿದೆ ಎಂದು ಹೇಳಿದರು. ಶಾಲೆಯ ಹಳೆ ವಿದ್ಯಾರ್ಥಿಗಳಲ್ಲಿ ಓರ್ವರು ಜಿಲ್ಲಾಧಿಕಾರಿಯಾಗಿ ಹಾಗೂ ಮತ್ತೋರ್ವರು ಎಂ.ಎಲ್.ಸಿ.ಯಾಗಿ ಸೇವೆ ಸಲ್ಲಿಸಿರುವುದನ್ನು ಸ್ಮರಿಸಿದ ಅವರು, ಹಳೆ ವಿದ್ಯಾರ್ಥಿಗಳು, ಎಸ್.ಡಿ.ಎಂ.ಸಿ. ಸದಸ್ಯರು, ಶಿಕ್ಷಕ ವೃಂದ ಹಾಗೂ ಪೋಷಕರ ಸಹಕಾರದಿಂದ ಶಾಲೆಯು ಉತ್ತಮವಾಗಿ ಮುನ್ನಡೆಯುತ್ತಿರುವುದು ಶ್ಲಾಘನೀಯ ಎಂದರು. ಸುಮಾರು 80 ಮಕ್ಕಳು ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿಯೂ ಶಾಲೆಯಲ್ಲಿ ಇನ್ನಷ್ಟು ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸುವ ಅವಕಾಶ ನಮಗೆ ದೊರೆಯಲಿ ಎಂದು ಆಶಿಸಿದರು.
ಕಾರ್ಯಕ್ರಮವನ್ನು ಜಮಾತುಲ್ ಫಲಾ ಕಾರ್ಕಳ ಹಾಗೂ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಕಾರ್ಕಳ ತಾಲೂಕು ಯೂನಿಟ್ ಮತ್ತು ಸುನ್ನೀ ಜಾಮಿಯಾ ಮಸ್ಜಿದ್ ಮಿಯಾರು ಅಧ್ಯಕ್ಷ ಮೊಹಮ್ಮದ್ ಗೌಸ್ ಮೀಯಾರು ಉದ್ಘಾಟಿಸಿದರು.
ಗೌರವ ಉಪಸ್ಥಿತರಾಗಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಹುಸೇನ್, ಎಸ್.ಡಿ.ಎಂ.ಸಿ. ಅಧ್ಯಕ್ಷ ರಿಯಾಜ್, ಪ್ರಭಾರ ಮುಖ್ಯ ಶಿಕ್ಷಕಿ ಗುಣಮತಿ, ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳದ ಡಾ. ಶಿಭಾ, ಎಸ್.ಕೆ.ಪಿ.ಎ. ಕಾರ್ಕಳ ವಲಯದ ಪ್ರಧಾನ ಕಾರ್ಯದರ್ಶಿ ಶೇಖರ್ ಕುಕ್ಕುಜೆ ಹಾಗೂ ಕೋಶಾಧಿಕಾರಿ ವಿ.ಆರ್. ಸತೀಶ್ ಆಚಾರ್ಯ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಎಸ್.ಕೆ.ಪಿ.ಎ. ಕಾರ್ಕಳ ವಲಯದ ಹಿರಿಯ ಸದಸ್ಯರು ಹಾಗೂ ಮಾಜಿ ಅಧ್ಯಕ್ಷರಾಗಿರುವ, ಕಳೆದ ಸುಮಾರು 20 ವರ್ಷಗಳಿಂದ V4 ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿರುವ ಕೆ.ಎಂ. ಖಲೀಲ್ ಅವರಿಗೆ ವಲಯದ ವತಿಯಿಂದ ‘ಛಾಯಾ ಸಾಧಕ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.
ಶಿಬಿರದಲ್ಲಿ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಇಜಾಜ್ ಶರೀಫ್, ಶಾಲೆಯ ಶಿಕ್ಷಕ ವೃಂದ, ಪೋಷಕರು, ಎಸ್.ಡಿ.ಎಂ.ಸಿ. ಸದಸ್ಯರು, ಎಸ್.ಕೆ.ಪಿ.ಎ. ಪದಾಧಿಕಾರಿಗಳು ಹಾಗೂ ಸದಸ್ಯರು, ಕಸ್ತೂರ್ಬಾ ಮೆಡಿಕಲ್ ಹಾಸ್ಪಿಟಲ್ ಮಣಿಪಾಲ ಮತ್ತು ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳದ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಎಸ್.ಕೆ.ಪಿ.ಎ. ಕಾರ್ಕಳ ವಲಯದ ಮಾಜಿ ಅಧ್ಯಕ್ಷ ಪ್ರಸಾದ್ ಐಸಿರ ಕಾರ್ಯಕ್ರಮವನ್ನು ನಿರೂಪಿಸಿ ಧನ್ಯವಾದಗೈದರು.