×
Ad

ಉಡುಪಿ | 23ನೇ ದಿನವೂ ಮುಂದುವರಿದ ಕೊರಗರ ಅಹೋರಾತ್ರಿ ಧರಣಿ

ಸಿಎಂ ಗಮನಕ್ಕೆ ತಂದು ಬೇಡಿಕೆ ಈಡೇರಿಕೆ: ಮಂಜುನಾಥ್ ಭಂಡಾರಿ

Update: 2026-01-06 12:01 IST

ಉಡುಪಿ, ಜ.6: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ-ಕೇರಳ ನೇತೃತ್ವದಲ್ಲಿ ಕೊರಗ ಸಮುದಾಯದ ಯುವ ಜನತೆಗೆ ಸರಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಮ್ಮಿಕೊಳ್ಳಲಾಗಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 23ನೇ ದಿನವಾದ ಮಂಗಳವಾರವೂ ಮುಂದುವರಿದಿದೆ.

ಧರಣಿ ಸತ್ಯಾಗ್ರಹ ಸ್ಥಳಕ್ಕೆ ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಭೇಟಿ ನೀಡಿ, ಕೊರಗ ಸಂಘಟನೆಯ ಮುಖಂಡರೊಂದಿಗೆ ಸಮಸ್ಯೆ ಕುರಿತು ಚರ್ಚಿಸಿದರು. ಈ ವಿಚಾರ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಬೇಡಿಕೆ ಈಡೇರಿಸುವುದಾಗಿ ಹಾಗೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆದು ಸಮಸ್ಯೆಗಳ ಕುರಿತು ಪರಿಹಾರ ಒದಗಿಸುವ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ರಾಜ್ಯ ಆರ್‌ಜಿಪಿಆರ್‌ಎಸ್ ಸಂಘಟನೆಯ ಉಪಾಧ್ಯಕ್ಷೆ ರೋಶನಿ ಓಲಿವೇರಾ, ಬ್ರಹ್ಮಾವರ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷೆ ಡಾ.ಸುನಿತಾ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರಿಕಾ ಸಮಿತಿಯ ಅಧ್ಯಕ್ಷ ವಿಶ್ವಾಸ್ ಅಮೀನ್, ಪೆರ್ಡೂರು ಗ್ರಾಪಂ ಸದಸ್ಯ ನವೀನ್ ಸಾಲಿಯಾನ್, ಮೊದಲಾದವರು ಉಪಸ್ಥಿತರಿದ್ದರು.

ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡ, ಸಂಯೋಜಕ ಕೆ.ಪುತ್ರನ್ ಹೆಬ್ರಿ, ಮುಖಂಡರಾದ ಶೇಖರ್ ಕೆಂಜೂರು, ಸಂಜೀವ, ರಾಜು ಚೋರಾಡಿ, ನಾಗು ನಾಡ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News