ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಆಗ್ರಹಿಸಿ ವೆಲ್ಫೇರ್ ಪಾರ್ಟಿ ಮನವಿ
ಉಡುಪಿ, ಜು.24: ತನ್ನ ನಾಗರಿಕರ ರಕ್ಷಣೆಯಲ್ಲಿ ಸಂಪೂರ್ಣ ವಿಫಲ ವಾಗಿರುವ ಮಣಿಪುರ ಸರಕಾರವನ್ನು ಕೂಡಲೇ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಬೇಕು ಎಂದು ಆಗ್ರಹಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ನಿಯೋಗ ಇಂದು ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿತು.
ಮಹಿಳೆಯರಿಗೆ ಬೆತ್ತಲೆಗೊಳಿಸಿ ಹೀನಾಯ ಕೃತ್ಯ ಎಸಗಿದ ವ್ಯಕ್ತಿಗಳಿಗೆ ಕೂಡಲೇ ಬಂಧಿಸಬೇಕು ಮತ್ತು ಅವರ ಮೇಲೆ ಕಠಿಣ ಕ್ರಮ ಜರುಗಿಸಬೇಕು. ಸಂತ್ರಸ್ತ ಮಹಿಳೆಯರಿಗೆ ವಿಶೇಷ ರಕ್ಷಣೆ ಒದಗಿಸಬೇಕು. ಮಹಿಳೆಯರ ಮೇಲೆ ದೌರ್ಜನ್ಯ ನಡೆಯುವ ಸಂಧರ್ಭದಲ್ಲಿ ಅವರಿಗೆ ರಕ್ಷಣೆ ನೀಡುವ ಬದಲು ಮೂಕ ಪ್ರೇಕ್ಷಕರಾಗಿದ್ದ ಪೊಲೀಸ್ ಸಿಬಂದಿಯನ್ನು ವಜಾಗೊಳಿಸಬೇಕು. ಈ ಘಟನೆಯ ಪಾರದರ್ಶಕ ತನಿಖೆ ನಡೆಸಬೇಕು.
ಮಣಿಪುರದಲ್ಲಿ ಹಿಂಸಚಾರ ಕೂಡಲೇ ನಿಲಿಸಬೇಕು. ಅದಕ್ಕೆ ಸಂಬಂಧಿಸಿದಂತೆ ಅಲ್ಲಿನ ಜನರನ್ನು ವಿಶ್ವಾಸಕ್ಕೆ ಪಡೆದು ಸಮಸ್ಯೆಯನ್ನು ಕೂಡಲೇ ಬಗೆದರಿಸ ಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ನಿಯೋಗದಲ್ಲಿ ಪಾರ್ಟಿಯ ಉಡುಪಿ ಜಿಲ್ಲಾಧ್ಯಕ್ಷ ಅಬ್ದುಲ್ ಅಝೀಝ್ ಉದ್ಯಾವರ, ಜಿಲ್ಲಾ ಉಪಾಧ್ಯಕ್ಷ ವಿಜಯ, ಮಾಜಿ ಜಿಲ್ಲಾ ಉಪಾಧ್ಯಕ್ಷ ಶಹಜಹಾನ್ ತೋನ್ಸೆ, ಮಾಜಿ ಜಿಲ್ಲಾಧ್ಯಕ್ಣ ಅನ್ವರ್ ಅಲಿ ಕಾಪು ಉಪಸ್ದಿತರಿದ್ದರು.