ಭಟ್ಕಳ| ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಜಾಗೃತಿಯಿಂದ ಪಾಲ್ಗೊಳ್ಳುವಂತೆ ತಂಝೀಮ್ ಕರೆ
ಭಟ್ಕಳ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯದಲ್ಲಿ ಪ್ರತಿಯೊಬ್ಬ ನಾಗರಿಕರು ಜವಾಬ್ದಾರಿಯಿಂದ ಪಾಲ್ಗೊಳ್ಳಬೇಕು ಎಂದು ಮಜ್ಲಿಸೆ ಇಸ್ಲಾಹ್ ವ ತಂಝೀಮ್ ಹಾಗೂ ಭಟ್ಕಳ ಮುಸ್ಲಿಂ ಯೂತ್ ಫೆಡರೇಶನ್ (ಬಿಎಂವೈಎಫ್) ವತಿಯಿಂದ ಆಯೋಜಿಸಿದ್ದ ಜನಜಾಗೃತಿ ಸಭೆಯಲ್ಲಿ ಕರೆ ನೀಡಲಾಯಿತು.
ಸೋಮವಾರ ರಾತ್ರಿ ನವಾಯತ್ ಕಾಲೋನಿಯ ರಾಬಿತಾ ಸೂಸೈಟಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ತಂಝೀಮ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮೌಲಾನ ಅಝೀಝರ್ರಹ್ಮಾನ್ ನದ್ವಿ, ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮತದಾರರ ಪಟ್ಟಿ ಮತ್ತು ಪೌರತ್ವಕ್ಕೆ ಸಂಬಂಧಿಸಿದ ಸಮಸ್ಯೆಗಳು ಎದುರಾಗಿರುವ ಹಿನ್ನೆಲೆಯಲ್ಲಿ, ಭಟ್ಕಳದ ಜನರು ಎಚ್ಚರಿಕೆಯಿಂದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.
ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮನೆ ಮನೆಗೆ ಭೇಟಿ ನೀಡಿ ನಮೂನೆಗಳನ್ನು ವಿತರಿಸಲಿದ್ದು, ಮನೆಯಲ್ಲಿರುವ ಒಬ್ಬ ಜವಾಬ್ದಾರಿಯುತ ಸದಸ್ಯ ಇಡೀ ಕುಟುಂಬದ ಮಾಹಿತಿಯನ್ನು ಭರ್ತಿ ಮಾಡಬಹುದು ಎಂದು ಹೇಳಿದರು. ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗದಲ್ಲಿರುವ ಕುಟುಂಬ ಸದಸ್ಯರ ಹೆಸರುಗಳು ಪಟ್ಟಿಯಿಂದ ಕೈಬಿಡದಂತೆ ವಿಶೇಷ ಗಮನ ಹರಿಸುವಂತೆ ಸೂಚಿಸಲಾಯಿತು.
ಮಸೀದಿಗಳ ಇಮಾಮರು ನಮಾಜಿನ ಬಳಿಕ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜನರಲ್ಲಿ ಅರಿವು ಮೂಡಿಸ ಬೇಕು ಎಂದು ಸಭೆಯಲ್ಲಿ ಮನವಿ ಮಾಡಲಾಯಿತು. ಧಾರ್ಮಿಕ ಮುಖಂಡರ ಮಾತುಗಳಿಗೆ ಸಮಾಜದಲ್ಲಿ ಹೆಚ್ಚಿನ ಪ್ರಭಾವ ಇರುವುದರಿಂದ ಅವರು ಜನಜಾಗೃತಿಯಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ತಿಳಿಸಲಾಯಿತು.
ಸಾರ್ವಜನಿಕರ ಅನುಕೂಲಕ್ಕಾಗಿ ಬಂದರ್ ರಸ್ತೆಯಲ್ಲಿ ವಿಶೇಷ ಸಹಾಯ ಕೇಂದ್ರ ಆರಂಭಿಸಲಾಗಿದ್ದು, ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ಸ್ವಯಂಸೇವಕರು ಸೇವೆ ನೀಡಲಿದ್ದಾರೆ. ಪ್ರತಿ ಮೊಹಲ್ಲಾದಲ್ಲಿ ಯುವಕರ ಸಹಕಾರದಿಂದ ಸಹಾಯ ಕೇಂದ್ರಗಳನ್ನು ಸ್ಥಾಪಿಸಿ ಫಾರ್ಮ್ ಭರ್ತಿ ಮಾಡಲು ನೆರವು ನೀಡುವಂತೆ ಸೂಚಿಸಲಾಯಿತು.
ಎಸ್.ಐ.ಆರ್. ಸಂಬಂಧ ಪ್ರಾಯೋಗಿಕವಾಗಿ ಪಿಪಿಟಿ ಮೂಲಕ ಮಾಹಿತಿ ನೀಡಿದ ಭಟ್ಕಳ ಮುಸ್ಲಿಮ್ ಯೂತ್ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಮುಬಶ್ಶಿರ್ ಹಲ್ಲಾರೆ, ಹಳೆಯ ದಾಖಲೆಗಳಲ್ಲಿರುವ ತಪ್ಪುಗಳನ್ನು ಸರಿಪಡಿಸಲು ಹಾಗೂ ಮೃತರಾದವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಇದು ಉತ್ತಮ ಅವಕಾಶ.
ಮತದಾರರ ಪಟ್ಟಿಯಲ್ಲಿ ಉಂಟಾಗುವ ಗೊಂದಲಗಳನ್ನು ನಿವಾರಿಸಲು ಬೂತ್ ಮಟ್ಟದ ಏಜೆಂಟ್ಗಳನ್ನು (ಬಿಎಲ್ಎ) ನೇಮಿಸಲಾಗಿದ್ದು, ಅಗತ್ಯ ದಾಖಲೆಗಳನ್ನು ಸಂಬಂಧಿತ ಅಧಿಕಾರಿಗಳ ಮುಂದೆ ಸಲ್ಲಿಸಿ ಜನರ ಹಕ್ಕುಗಳನ್ನು ಕಾಪಾಡುವ ಕೆಲಸವನ್ನು ಅವರು ನಿರ್ವಹಿಸಲಿದ್ದಾರೆ ಎಂದರು.
ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮಾತನಾಡಿ, ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ಕೆಲವೊಂದು ಲೋಪದೋಷಗಳಾಗಿರುವ ಸಾಧ್ಯತೆ ಇದ್ದರೂ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಹಳೆಯ ಮತದಾರರ ಪಟ್ಟಿಯ ಕ್ರಮ ಸಂಖ್ಯೆ ಮತ್ತು ಭಾಗ ಸಂಖ್ಯೆಯನ್ನು ಪರಿಶೀಲಿಸಿ ಸರಿಯಾದ ಮಾಹಿತಿಯನ್ನು ನೀಡಬೇಕು ಎಂದು ಸಭೆಯಲ್ಲಿ ಸಲಹೆ ನೀಡಿದರು.
ಯಾವುದೇ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಕಾರ್ಯದಲ್ಲಿ ಎಲ್ಲರೂ ಸಕ್ರಿಯವಾಗಿ ಸಹಕರಿಸುವಂತೆ ಸಭೆಯಲ್ಲಿ ಮನವಿ ಮಾಡಲಾಯಿತು.
ಈ ಸಂದರ್ಭ ತಂಝೀಮ್ ಉಪಾಧ್ಯಕ್ಷ ಮುಹಮ್ಮದ್ ಸಾದಿಕ್ ಪಿಲ್ಲೂರ್, ನ್ಯಾಯವಾದಿ ಇಮ್ರಾನ್ ಲಂಕಾ ಸೇರಿದಂತೆ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.