ಭಟ್ಕಳದಲ್ಲಿ ಗಣೇಶ ವಿಸರ್ಜನೆಗೆ ಬಿಗಿ ಪೊಲೀಸ್ ಬಂದೋಬಸ್ತ್
ಭಟ್ಕಳ: ಗಣೇಶೋತ್ಸವದ ಅಂತಿಮ ದಿನವಾದ ಶುಕ್ರವಾರ ಭಟ್ಕಳದಲ್ಲಿ ಪೊಲೀಸ್ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದ್ದು, ಹಿಂಸಾಚಾರ ನಿಯಂತ್ರಣಕ್ಕಾಗಿ ವಿಶೇಷ ಪಡೆಯನ್ನೂ ನಿಯೋಜಿಸಲಾಗಿದೆ.
ಇಲ್ಲಿನ ಗುಲ್ಮಿ ಪ್ರದೇಶದ ರೈಲು ನಿಲ್ದಾಣ ರಸ್ತೆಯಲ್ಲಿ ಬುಧವಾರ ರಾತ್ರಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಾಗುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿದ್ದು, ಮಸೀದಿಯೊಂದರ ಕಿಟಕಿ ಗಾಜುಗಳು ಒಡೆದಿವೆ. ಇದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಗಣೇಶೋತ್ಸವದ ಪೆಂಡಾಲ್ ಮೇಲೆಯೂ ಕಲ್ಲು ತೂರಾಟ ನಡೆಸಲಾಗಿದೆ ಎಂದು ಆರೋಪಿಸಿ ತಾಲಾಂದ್ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಜು ಶಂಕಪ್ಪ ನಾಯ್ಕ್ ಅವರು ಭಟ್ಕಳ ನಗರ ಠಾಣೆಗೆ ದೂರು ನೀಡಿದ್ದು, ಈ ಕುರಿತು ಕ್ರೈಂ ನಂ. 167/2026ರಂತೆ ಪ್ರಕರಣ ದಾಖಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ನಗರ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾರುಕಟ್ಟೆಯಲ್ಲಿ ಪೊಲೀಸ್ ಪಥಸಂಚಲನ
ಬುಧವಾರದ ಘಟನೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಉಂಟಾಗಿರುವ ಆತಂಕ ನಿವಾರಿಸುವ ಹಾಗೂ ಶಾಂತಿ–ಸುವ್ಯವಸ್ಥೆಯ ಬಗ್ಗೆ ಭರವಸೆ ಮೂಡಿಸುವ ಉದ್ದೇಶದಿಂದ ಶುಕ್ರವಾರ ಪೊಲೀಸರು ಹಾಗೂ ವಿಶೇಷ ಪಡೆ ಭಟ್ಕಳದ ಪ್ರಮುಖ ಮಾರುಕಟ್ಟೆ ಪ್ರದೇಶಗಳಲ್ಲಿ ಪಥಸಂಚಲನ ನಡೆಸಿತು.
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಭಟ್ಕಳ ಎಎಸ್ಪಿ ರಾನು ಗುಪ್ತಾ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪಥಸಂಚಲನದಲ್ಲಿ ಭಾಗವಹಿಸಿದ್ದರು. ಮಾರುಕಟ್ಟೆ ಮೂಲಕ ಸಾಗಿದ ಪಥಸಂಚಲನದ ಮೂಲಕ ಯಾವುದೇ ರೀತಿಯ ಆತಂಕಕ್ಕೆ ಒಳಗಾಗದಂತೆ ಸಾರ್ವಜನಿಕರಿಗೆ ಭರವಸೆ ನೀಡಲಾಯಿತು.
ಉನ್ನತ ಅಧಿಕಾರಿಗಳ ಭೇಟಿ, ಬಿಗಿ ಭದ್ರತೆ
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಹಾಗೂ ಡಿವೈಎಸ್ಪಿ ಕಾರವಾರದಿಂದ ಭಟ್ಕಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದ್ದರು.
ಗಣೇಶ ವಿಸರ್ಜನಾ ಮೆರವಣಿಗೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪಟ್ಟಣದಾದ್ಯಂತ ಪೊಲೀಸ್ ಬಂದೋ ಬಸ್ತ್ ಮತ್ತಷ್ಟು ಬಿಗಿಗೊಳಿಸಲಾಗಿದೆ. ಪ್ರಮುಖ ರಸ್ತೆಗಳು, ವೃತ್ತಗಳು, ಸೂಕ್ಷ್ಮ ಪ್ರದೇಶಗಳು ಹಾಗೂ ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಭದ್ರತಾ ಕ್ರಮವಾಗಿ ಡಿಎಆರ್ ಮತ್ತು ಕೆಎಸ್ಆರ್ಪಿ ಸ್ಟ್ರೈಕಿಂಗ್ ಫೋರ್ಸ್ನ ಐದು ತುಕಡಿಗಳು, ಎಸ್ಎಎಫ್ನ 21 ಸಿಬ್ಬಂದಿ ಹಾಗೂ ಆರ್ಎಫ್ನ 136 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಎಸ್ಪಿ ಮೊಕ್ಕಾಂ, ಶಾಂತಿಗೆ ಮನವಿ
ಜಿಲ್ಲಾ ಎಸ್ಪಿ ದೀಪನ್ ಎಂ.ಎನ್. ಅವರು ಭಟ್ಕಳದಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿಯ ಕುರಿತು ಮಾಹಿತಿ ಪಡೆಯು ತ್ತಿದ್ದು, ಕಟ್ಟುನಿಟ್ಟಿನ ನಿಗಾ ವಹಿಸುವಂತೆ ಕರ್ತವ್ಯನಿರತ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ಕೃತ್ಯಗಳಿಗೆ ಅವಕಾಶ ನೀಡುವುದಿಲ್ಲ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ ಶಾಂತಿ ಮತ್ತು ಸೌಹಾರ್ದ ಕಾಪಾಡಲು ಸಹಕರಿಸುವಂತೆ ಮನವಿ ಮಾಡಲಾಗಿದೆ.