×
Ad

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ: ಜೂ.17ರಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

Update: 2025-06-16 20:33 IST

ಕಾರವಾರ:  ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ (ರೆಡ್ ಅಲರ್ಟ್) ಹಿನ್ನೆಲೆಯಲ್ಲಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ ಮತ್ತು ಯಲ್ಲಾಪುರ ತಾಲ್ಲೂಕುಗಳಲ್ಲಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜೂ. 17ರಂದು ರಜೆಯನ್ನು ಘೋಷಿಸಲಾಗಿದೆ.

ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 (ಎಮ್) ಅಡಿಯಲ್ಲಿ ಜಿಲ್ಲಾಡಳಿತವು ಈ ಆದೇಶವನ್ನು ಹೊರಡಿಸಿದ್ದು, ಮಕ್ಕಳಿಗೆ ಯಾವುದೇ ಅನಾನುಕೂಲವಾಗದಂತೆ ಮತ್ತು ಸಂಭವನೀಯ ಅವಘಡಗಳನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಆದೇಶದಲ್ಲಿ ತಿಳಿಸಿರುವಂತೆ, ಈ ರಜೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರವಾರ ಹಾಗೂ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಕಾರವಾರ/ಶಿರಸಿ ರವರು ಕಾರ್ಯರೂಪಕ್ಕೆ ತರಲಿದ್ದಾರೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಿತ ಇಲಾಖೆಗಳಿಗೆ ಸೂಚಿಸಲಾಗಿದ್ದು, ರಜಾ ದಿನವನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವಂತೆ ತಿಳಿಸಲಾಗಿದೆ. ಜಿಲ್ಲಾಡಳಿತವು ಸಾರ್ವಜನಿಕರಿಗೆ ಮಳೆಯ ಸಂದರ್ಭದಲ್ಲಿ ಸುರಕ್ಷಿತವಾಗಿರುವಂತೆ ಕೋರಿದೆ.




Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News