ಸಿಎಂ ಸಿದ್ದರಾಮಯ್ಯ ಕೂಡ್ಲಿಗಿ ಪ್ರವಾಸ ಹಿನ್ನೆಲೆ; ಸಕಲ ಸಿದ್ಧತೆಯಲ್ಲಿ ತೊಡಗಿದ ಕಾಂಗ್ರೆಸ್ ನಾಯಕರು
ವಿಜಯನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೂಡ್ಲಿಗಿ ಪ್ರವಾಸದ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕರು ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಸ್ವಾಗತದ ಸಕಲ ಸಿದ್ಧತೆಯಲ್ಲಿ ತೊಡಗಿದ್ದಾರೆ.
ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್ ಟಿ ಶ್ರೀನಿವಾಸ್, ಮಾಜಿ ಸಚಿವ ಹಾಗೂ ಮುಸ್ಲಿಂ ಸಮಾಜದ ಹಿರಿಯ ಮುಖಂಡರಾದ ಎನ್ ಎಂ ನಬಿ ಹಾಗೂ ಅಖಂಡ ಬಳ್ಳಾರಿ ಜಿಲ್ಲೆಯ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷರಾದ ನೂರ್ ಅಹಮದ್ ಅವರು ಸ್ಥಳದಲ್ಲಿದ್ದಾರೆ.
ಈ ವೇಳೆ ಮಾತನಾಡಿದ ಮಾಜಿ ಸಚಿವ ಎನ್.ಎಂ ನಬಿ ಅವರು, ಸಿದ್ದರಾಮಯ್ಯ ಅವರು ನ.9 ರಂದು ಕೂಡ್ಲಿಗಿ ನಗರಕ್ಕೆ ಆಗಮಿಸಲಿದ್ದು, ಜಲಸಂಪನ್ಮೂಲ ಇಲಾಖೆ ಮತ್ತು ವಿಜಯನಗರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿರುವ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತು ವಿತರಣಾ ಕಾರ್ಯಕ್ರಮದ ಉದ್ಘಾಟಿಸಲಿದ್ದಾರೆ ಎಂದರು.
ನಮ್ಮ ಕ್ಷೇತ್ರದ ಸೌಭಾಗ್ಯ, ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಯೋಜನೆಗಳಿಗೆ ಚಾಲನೆ ನೀಡುತ್ತಿರುವುದು ಸಂತೋಷದ ಸಂಗತಿ. ರೈತರಿಗೆ ಮತ್ತು ಬಡವರಿಗೆ ಅನುಕೂಲ ಆಗುವ ರೀತಿಯಲ್ಲಿದೆ ಕಾಂಗ್ರೆಸ್ ಪಕ್ಷ. ಬಡವರಿಗಾಗಿ ಇರುವ ಪಕ್ಷ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದ ಪಕ್ಷ ಎಂದರು.