Vijayanagara | CITU ನೇತೃತ್ವದಲ್ಲಿ ʼಜೈಲ್‌ಭರೋʼ ಚಳವಳಿ; 150ಕ್ಕೂ ಹೆಚ್ಚು ಮುಖಂಡರು ವಶಕ್ಕೆ

Update: 2026-08-10 21:05 IST

ಹೊಸಪೇಟೆ/ವಿಜಯನಗರ: ಕ್ವಿಟ್ ಇಂಡಿಯಾ ಚಳವಳಿಯ ಸ್ಮರಣಾರ್ಥವಾಗಿ ‘ಅಂದು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ, ಇಂದು ಕಾರ್ಪೊರೇಟ್ ಬಂಡವಾಳಶಾಹಿಗಳೇ ದೇಶ ಬಿಟ್ಟು ತೊಲಗಿ’ ಎಂಬ ಘೋಷಣೆಯೊಂದಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಾರ್ಮಿಕ, ರೈತ, ಯುವಜನ ಮತ್ತು ಜನವಿರೋಧಿ ನೀತಿಗಳನ್ನು ಖಂಡಿಸಿ CITU ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಜೈಲ್‌ಭರೋ ಚಳವಳಿ ನಡೆಯಿತು.

ಹೊಸಪೇಟೆ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿರುವ BSNL ಕಚೇರಿ ಎದುರು ನಡೆದ ಪ್ರತಿಭಟನಾ ಸಭೆಯಲ್ಲಿ ನೂರಾರು ರೈತರು, ಕಾರ್ಮಿಕರು, ಯುವಜನರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರವು ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುತ್ತಿದ್ದ 29 ಕಾರ್ಮಿಕ ಕಾಯ್ದೆಗಳನ್ನು ರದ್ದುಪಡಿಸಿ ನಾಲ್ಕು ಲೇಬರ್ ಕೋಡ್‌ಗಳಾಗಿ ಪರಿವರ್ತಿಸಿರುವುದು ಕಾರ್ಮಿಕ ವಿರೋಧಿ ನೀತಿಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ರೈತರ ಭೂಮಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ಅವಕಾಶ ಕಲ್ಪಿಸುವ ಭೂಸ್ವಾಧೀನ ನೀತಿಗಳು, ಯುವಜನರು ಹಾಗೂ ವಿದ್ಯಾರ್ಥಿಗಳ ಹಿತಾಸಕ್ತಿಗೆ ವಿರುದ್ಧವಾಗಿರುವ ನೂತನ ಶಿಕ್ಷಣ ನೀತಿ ಸೇರಿದಂತೆ ಹಲವು ನೀತಿಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಸಾರಿಗೆ ಕ್ಷೇತ್ರದಲ್ಲಿಯೂ ಕಾರ್ಮಿಕರು ಹಾಗೂ ಚಾಲಕರ ಮೇಲೆ ಹೊರೆಯಾಗುವ ನಿಯಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, 2019ರ ಮೋಟಾರು ವಾಹನ ತಿದ್ದುಪಡಿ ಕಾಯ್ದೆಯಡಿ ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ GPS ಮತ್ತು ಪ್ಯಾನಿಕ್ ಬಟನ್ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿದರು.

ರಾಜ್ಯದಲ್ಲಿ ಓಲಾ, ಉಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಸೇರಿದಂತೆ ಖಾಸಗಿ ಕಂಪನಿಗಳ ಆಪ್ ಆಧಾರಿತ ಸೇವೆಗಳನ್ನು ನಿಯಂತ್ರಿಸಬೇಕು ಹಾಗೂ ರಾಜ್ಯಾದ್ಯಂತ ಬೈಕ್ ಟ್ಯಾಕ್ಸಿ ಸೇವೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು. ಜೊತೆಗೆ ಕರ್ನಾಟಕದಾದ್ಯಂತ ವೈಜ್ಞಾನಿಕ ಕನಿಷ್ಠ ವೇತನವನ್ನು ಜಾರಿಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

►ಸರ್ಕಾರಗಳ ವಿರುದ್ಧ ಘೋಷಣೆ

ಪ್ರತಿಭಟನೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮುಖಂಡರು ಹಾಗೂ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ಕಾರ್ಮಿಕರ ಹಕ್ಕುಗಳ ರಕ್ಷಣೆ, ರೈತರ ಭೂಮಿ ಮತ್ತು ಜೀವನೋಪಾಯದ ಸಂರಕ್ಷಣೆ, ಯುವಜನರಿಗೆ ಉದ್ಯೋಗ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಹಕ್ಕುಗಳ ರಕ್ಷಣೆಗೆ ಸರ್ಕಾರಗಳು ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.

CITU ರಾಜ್ಯ ಉಪಾಧ್ಯಕ್ಷ ಆರ್.ಎಸ್. ಬಸವರಾಜ್, ವಿಜಯನಗರ ಜಿಲ್ಲಾ ಸಂಚಾಲಕಿ ಕೆ.ಎಂ. ಸ್ವಪ್ನ, ರಾಜ್ಯ ಕಾರ್ಯದರ್ಶಿ ಎಲ್. ಮಂಜುನಾಥ್, CPIM ಜಿಲ್ಲಾ ಕಾರ್ಯದರ್ಶಿ ಆರ್. ಭಾಸ್ಕರ್ ರೆಡ್ಡಿ, DHS ರಾಜ್ಯ ಉಪಾಧ್ಯಕ್ಷ ಎಂ. ಜಂಬಯ್ಯ ನಾಯಕ್, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ಕೆ. ನಾಗರತ್ನಮ್ಮ, FKARDU ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರ ಸಂಘದ ರಾಜ್ಯ ಸಂಚಾಲಕ ಕೆ.ಎಂ. ಸಂತೋಷ್ ಕುಮಾರ್, CITU ಜಿಲ್ಲಾ ಮುಖಂಡ ಹಾಗೂ ಹೊರಗುತ್ತಿಗೆ ಕಾರ್ಮಿಕರ ಸಂಘದ ಮುಖಂಡ ಎಂ. ಗೋಪಾಲ್, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಮುಖಂಡ ಎನ್. ಯಲ್ಲಾಲಿಂಗ, ಸರ್ಕಾರಿ ನೌಕರರ ಒಕ್ಕೂಟದ ಜಿಲ್ಲಾ ಮುಖಂಡ ತಾಯಪ್ಪ ನಾಯಕ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕರ್ನಾಟಕ ರಾಜ್ಯ ರೈತ ಸಂಘ, ದೇವದಾಸಿ ವಿಮೋಚನ ಸಂಘ, ವಿದ್ಯಾರ್ಥಿ ಹಾಗೂ ಯುವಜನ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಕೂಡ ಚಳವಳಿಗೆ ಬೆಂಬಲ ವ್ಯಕ್ತಪಡಿಸಿದರು.

BSNL ಕಚೇರಿ ಮುತ್ತಿಗೆಗೆ ಯತ್ನ; 150ಕ್ಕೂ ಹೆಚ್ಚು ಮುಖಂಡರ ಪೊಲೀಸ್‌ ವಶಕ್ಕೆ

ಪ್ರತಿಭಟನಾ ಸಭೆ ಮುಕ್ತಾಯಗೊಂಡ ಬಳಿಕ ಪ್ರತಿಭಟನಾಕಾರರು BSNL ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪಟ್ಟಣ ಠಾಣೆ ಪೊಲೀಸರು 150ಕ್ಕೂ ಹೆಚ್ಚು ಮುಖಂಡರು ಹಾಗೂ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಬಳಿಕ ಅವರನ್ನು ಬಿಡುಗಡೆಗೊಳಿಸಲಾಯಿತು.

ಜೈಲ್‌ಭರೋ ಚಳವಳಿಯಲ್ಲಿ 500ಕ್ಕೂ ಹೆಚ್ಚು ರೈತರು, ಕಾರ್ಮಿಕರು, ಯುವಜನರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಚಳವಳಿಯನ್ನು ಯಶಸ್ವಿಗೊಳಿಸಿದರು.



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News