ಮೀಸಲಾತಿ ವಿಚಾರದಲ್ಲಿ ಸರಕಾರಗಳ ವಿರುದ್ಧ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಆಕ್ರೋಶ
ಹೊಸಪೇಟೆ/ವಿಜಯನಗರ: ಮೀಸಲಾತಿ ವಿಚಾರದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬೇಜವಾಬ್ದಾರಿತನ ತೋರಿವೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಹೊಸಪೇಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳ ಪರವಾಗಿ ಹಲವು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿರುವುದಾಗಿ ತಿಳಿಸಿದರು. ವಿವಿಧ ಜಿಲ್ಲೆಗಳಲ್ಲಿ ಸುದ್ದಿಗೋಷ್ಠಿ ಹಾಗೂ ಸಂವಾದ ಕಾರ್ಯಕ್ರಮಗಳನ್ನು ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ಹೇಳಿದರು.
2011ರ ಜನಗಣತಿಯ ಪ್ರಕಾರ ರಾಜ್ಯದಲ್ಲಿ ಎಸ್ಸಿ ಸಮುದಾಯದವರು 17.01 ಶೇಕಡಾ, ಎಸ್ಟಿ ಸಮುದಾಯದವರು 7 ಶೇಕಡಾ ಹಾಗೂ ಓಬಿಸಿ ವರ್ಗದವರು 32 ಶೇಕಡಾ ಇದ್ದಾರೆ. ಈ ಮೂರು ವರ್ಗಗಳ ಜನಸಂಖ್ಯೆ ಒಟ್ಟಾರೆ ನಾಲ್ಕು ಕೋಟಿಗೂ ಅಧಿಕವಾಗಿದೆ ಎಂದು ತಿಳಿಸಿದರು.
ಎಸ್ಸಿಗಳಲ್ಲಿ 101 ಜಾತಿಗಳು ಹಾಗೂ ಎಸ್ಟಿಗಳಲ್ಲಿ 51 ಜಾತಿಗಳಿದ್ದು, ರಾಜ್ಯದಲ್ಲಿ ಮೂರೂವರೆ ಲಕ್ಷಕ್ಕೂ ಹೆಚ್ಚು ನಕಲಿ ಜಾತಿ ಪ್ರಮಾಣಪತ್ರಗಳು ಇರುವುದಾಗಿ ಆರೋಪಿಸಿದರು.
ತಳವಾರ ಮತ್ತು ಪರಿವಾರ ಸಮುದಾಯಗಳನ್ನು ಸೇರಿಸಿದ ಬಳಿಕ ಎಸ್ಟಿ ಜನಸಂಖ್ಯೆ ಹೆಚ್ಚಳವಾಗಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ರಚನೆ ಮಾಡಲಾಗಿತ್ತು. ಸಮಿತಿಯ ವರದಿಯಲ್ಲಿ ಎಸ್ಸಿ, ಎಸ್ಟಿ ಹಾಗೂ ಓಬಿಸಿ ವರ್ಗಗಳಿಗೆ ಅನ್ಯಾಯವಾಗಿರುವುದನ್ನು ಉಲ್ಲೇಖಿಸಲಾಗಿದೆ ಎಂದು ಹೇಳಿದರು.
ಜನಸಂಖ್ಯೆಗೆ ಅನುಗುಣವಾಗಿ ಉದ್ಯೋಗ ಮೀಸಲಾತಿ ನೀಡಲಾಗಿಲ್ಲ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮೀಸಲಾತಿ ಜಾರಿಗೆ ಕ್ರಮ ಕೈಗೊಂಡಿದ್ದರೂ, ಅದನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸುವ ಕುರಿತು ಕೇಂದ್ರ ಸರ್ಕಾರದಿಂದ ಸ್ಪಷ್ಟ ಉತ್ತರ ಬಂದಿಲ್ಲ ಎಂದು ಆರೋಪಿಸಿದರು.
“56 ಶೇಕಡಾ ಮೀಸಲಾತಿ ಇದೀಗ ಸ್ಥಗಿತಗೊಂಡಿದೆ. 56 ಸಾವಿರ ಉದ್ಯೋಗ ಭರ್ತಿಗೆ ಸರ್ಕಾರ ಮುಂದಾಗಿದೆ. ಸರಿಯಾದ ರೀತಿಯಲ್ಲಿ ಮೀಸಲಾತಿ ಜಾರಿಯಾದರೆ ಎಸ್ಸಿ, ಎಸ್ಟಿ ಹಾಗೂ ಓಬಿಸಿ ವರ್ಗದವರಿಗೆ ಹೆಚ್ಚಿನ ಉದ್ಯೋಗ ಅವಕಾಶ ಸಿಗುತ್ತದೆ,” ಎಂದು ಹೇಳಿದರು.
“ನಮಗೆ ತಟ್ಟೆಯಲ್ಲಿ ಅನ್ನ ಇಟ್ಟು ಮೂರು ವರ್ಷ ತಿನ್ನಲು ಬಿಟ್ಟು ಈಗ ಸ್ಟೇ ತಂದಿದ್ದಾರೆ. ಪ್ರಧಾನಿ ಹಾಗೂ ಮುಖ್ಯಮಂತ್ರಿ ಮತ ಕೇಳುತ್ತಾರೆ, ಆದರೆ ಸಂವಿಧಾನ ಜಾರಿಗೆ ತರುವಲ್ಲಿ ವಿಫಲರಾಗಿದ್ದಾರೆ,” ಎಂದು ಕಿಡಿಕಾರಿದರು.
ಕೆಲವು ಸಮುದಾಯಗಳನ್ನು ಎಸ್ಟಿ ಪಟ್ಟಿಗೆ ಸೇರಿಸುವ ವಿಚಾರವಾಗಿ ಮಾತನಾಡಿದ ಅವರು, “ಯಾವ ಸಮುದಾಯವನ್ನಾದರೂ ಸೇರಿಸುವ ಮೊದಲು ಸಾಮಾಜಿಕ ಹಾಗೂ ಕುಲಶಾಸ್ತ್ರೀಯ ಅಧ್ಯಯನ ನಡೆಯಬೇಕು,” ಎಂದು ಎಚ್ಚರಿಸಿದರು.
ಈ ವೇಳೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಾಯಕರಿಗೆ ಎಚ್ಚರಿಕೆ ನೀಡಿದ ಉಗ್ರಪ್ಪ, “ನಮ್ಮ ಜೀವನಗಳ ಜೊತೆ ಆಟವಾಡಬೇಡಿ,” ಎಂದು ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಎಸ್ಸಿ, ಎಸ್ಟಿ ಸಮುದಾಯದ ಜನಪ್ರತಿನಿಧಿಗಳು ಸಮುದಾಯದ ಪರವಾಗಿ ಪರಿಣಾಮಕಾರಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.