×
Ad

‘ಜ್ಞಾನ ಭಾರತಂ ಮಿಷನ್’ಗೆ ವಿಜಯನಗರ ಜಿಲ್ಲೆಯಲ್ಲಿ ಚಾಲನೆ

Update: 2026-05-15 20:20 IST

ವಿಜಯನಗರ (ಹೊಸಪೇಟೆ) : ಶತಮಾನಗಳ ಇತಿಹಾಸ ಹೊಂದಿರುವ ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಹಾಗೂ ಐತಿಹಾಸಿಕ ದಾಖಲೆಗಳನ್ನು ಆಧುನಿಕ ತಂತ್ರಜ್ಞಾನದ ಮೂಲಕ ಸಂರಕ್ಷಿಸುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ‘ಜ್ಞಾನ ಭಾರತಂ ಮಿಷನ್’ ಯೋಜನೆಗೆ ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ.

ಈ ಯೋಜನೆಯಡಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಇರುವ ಪ್ರಾಚೀನ ಹಸ್ತಪ್ರತಿಗಳು, ಕೈಬರಹದ ಪಠ್ಯಗಳು ಮತ್ತು ಐತಿಹಾಸಿಕ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ಶಾಶ್ವತವಾಗಿ ಸಂರಕ್ಷಿಸುವ ಗುರಿ ಹೊಂದಲಾಗಿದೆ. ದೇಶದ ಅಮೂಲ್ಯ ಜ್ಞಾನ ಸಂಪತ್ತನ್ನು ಒಂದೇ ವೇದಿಕೆಯಡಿ ತಂದು “ರಾಷ್ಟ್ರೀಯ ಹಸ್ತಪ್ರತಿ ಭಂಡಾರ” ನಿರ್ಮಿಸುವುದು ಈ ಮಿಷನ್‌ನ ಪ್ರಮುಖ ಉದ್ದೇಶವಾಗಿದೆ.

ಹಸ್ತಪ್ರತಿಗಳ ಮಾಹಿತಿಯನ್ನು ವಿಶೇಷ ಮೊಬೈಲ್ ಅಪ್ಲಿಕೇಶನ್ ಮೂಲಕ ಅಪ್ಲೋಡ್ ಮಾಡಲಾಗುತ್ತದೆ. ಕರ್ನಾಟಕದಲ್ಲಿ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ನೋಡಲ್ ಇಲಾಖೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಸಮೀಕ್ಷೆಯ ಕ್ಲಸ್ಟರ್ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ಮಠಗಳು, ದೇವಾಲಯಗಳು, ಗ್ರಂಥಾಲಯಗಳು, ಶೈಕ್ಷಣಿಕ ಸಂಸ್ಥೆಗಳು ಹಾಗೂ ಖಾಸಗಿ ವ್ಯಕ್ತಿಗಳ ಬಳಿ ಇರುವ ಹಸ್ತಪ್ರತಿಗಳನ್ನು ಪತ್ತೆಹಚ್ಚುವ ಜವಾಬ್ದಾರಿಯನ್ನು ಸಮಿತಿ ಹೊತ್ತಿದೆ. ಸಮೀಕ್ಷೆ ಸಂಪೂರ್ಣ ತಂತ್ರಜ್ಞಾನ ಆಧಾರಿತವಾಗಿದ್ದು, ಹಸ್ತಪ್ರತಿಗಳ ಜಿಯೋಟ್ಯಾಗಿಂಗ್ ಹಾಗೂ ಮೆಟಾಡೇಟಾ ದಾಖಲೀಕರಣ ಕಾರ್ಯವೂ ನಡೆಯುತ್ತಿದೆ.

ರಾಜ್ಯದಲ್ಲಿ ಈಗಾಗಲೇ 17 ಜಿಲ್ಲೆಗಳಲ್ಲಿ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದ್ದು, ಏಪ್ರಿಲ್ 27ರವರೆಗೆ ಒಟ್ಟು 2,13,255 ಹಸ್ತಪ್ರತಿಗಳ ಮಾಹಿತಿ ಸಂಗ್ರಹಿಸಲಾಗಿದೆ. ಪ್ರಸ್ತುತ ವಿಜಯನಗರ ಜಿಲ್ಲೆಯಲ್ಲಿ ಸಮೀಕ್ಷಾ ಕಾರ್ಯ ಮುಂದುವರಿದಿದ್ದು, ಮೇ ಅಂತ್ಯದವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಲಾಗಿದೆ.

ವಿಜಯನಗರ ಜಿಲ್ಲೆಯ ಸಾರ್ವಜನಿಕರು, ಮಠಗಳು, ದೇವಸ್ಥಾನಗಳು, ವಿಶ್ವವಿದ್ಯಾನಿಲಯಗಳು ಹಾಗೂ ಖಾಸಗಿ ವ್ಯಕ್ತಿಗಳ ಬಳಿ ಪ್ರಾಚೀನ ಹಸ್ತಪ್ರತಿಗಳು, ತಾಳೆಗರಿಗಳು ಅಥವಾ ಹಳೆಯ ಬರಹಗಳಿದ್ದಲ್ಲಿ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಪುರಾತತ್ವ ಸಹಾಯಕ ಡಾ. ಆರ್. ಮಂಜನಾಯ್ಕ್ (ಮೊ: 9945415518) ಹಾಗೂ ಪ್ರವಾಸೋದ್ಯಮ ಇಲಾಖೆ ಪ್ರವಾಸಿ ಅಧಿಕಾರಿ ಶ್ರೀಹರಿ ಮಾಸನೂರು (ಮೊ: 7892722443) ಅವರನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News