Harapanahalli | ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಹಾರಕನಾಳು ಸಣ್ಣ ತಾಂಡದ 280 ಕುಟುಂಬಗಳು

ಬೋರ್‌ವೆಲ್‌ಗಳೇ ಆಸರೆ; ಶಾಶ್ವತ ಪರಿಹಾರಕ್ಕೆ ಗ್ರಾಮಸ್ಥರ ಆಗ್ರಹ

Update: 2026-08-19 20:45 IST

ಹರಪನಹಳ್ಳಿ: ತಾಲೂಕಿನ ಹಾರಕನಾಳು ಸಣ್ಣ ತಾಂಡದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಗ್ರಾಮಸ್ಥರು ಪ್ರತಿನಿತ್ಯ ಊರಿನ ಹೊರವಲಯದಲ್ಲಿರುವ ರೈತರ ಬೋರ್‌ವೆಲ್‌ಗಳಿಂದ ಬಂಡಿ ಗಾಡಿಗಳ ಮೂಲಕ ನೀರು ತರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಗ್ರಾಮದಲ್ಲಿ ಅನುಸೂಚಿತ ಜಾತಿ ಹಾಗೂ ಅಲೆಮಾರಿ ಜನಾಂಗದವರು ಸೇರಿದಂತೆ ಸುಮಾರು 280 ಕುಟುಂಬಗಳು ಹಾಗೂ ಎರಡು ಸಾವಿರಕ್ಕೂ ಅಧಿಕ ಜನಸಂಖ್ಯೆ ಇದೆ. ಇಷ್ಟೊಂದು ದೊಡ್ಡ ಜನಸಂಖ್ಯೆ ಹೊಂದಿರುವ ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಶಾಶ್ವತ ಪರಿಹಾರ ಕಲ್ಪಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮದಲ್ಲಿ ಕೊರೆಸಲಾಗಿದ್ದ ಮೂರು ಬೋರ್‌ವೆಲ್‌ಗಳ ಪೈಕಿ ನೀರಿನ ಪ್ರಮಾಣ ಕಡಿಮೆಯಾಗಿ ಎರಡು ಬೋರ್‌ವೆಲ್‌ಗಳು ಬಳಕೆಗೆ ಬಾರದಂತಾಗಿವೆ. ಮತ್ತೊಂದು ಬೋರ್‌ವೆಲ್‌ನಲ್ಲಿ ನೀರು ಲಭ್ಯವಿದ್ದರೂ ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಗ್ರಾಮಸ್ಥರು ಖಾಸಗಿ ರೈತರ ಬೋರ್‌ವೆಲ್‌ಗಳನ್ನು ಅವಲಂಬಿಸುವಂತಾಗಿದೆ. ರೈತರು ನೀರು ನೀಡದ ಪರಿಸ್ಥಿತಿ ನಿರ್ಮಾಣವಾದರೆ ಗ್ರಾಮಸ್ಥರ ಬದುಕೇ ಅತಂತ್ರವಾಗುವ ಆತಂಕ ಎದುರಾಗಿದೆ.

ಇದರೊಂದಿಗೆ ಗ್ರಾಮದಲ್ಲಿ ಸಾರ್ವಜನಿಕರಿಗಾಗಿ ಅಳವಡಿಸಲಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕವೂ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದು, ಕೂಡಲೇ ದುರಸ್ತಿಪಡಿಸಿ ಬಳಕೆಗೆ ಮುಕ್ತಗೊಳಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕುಡಿಯುವ ನೀರಿನ ಸಮಸ್ಯೆಯಿಂದ ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೂ ತೊಂದರೆಯಾಗುತ್ತಿದೆ.

ಸಮಸ್ಯೆ ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಿದರೂ ಇದುವರೆಗೆ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ಐದಾರು ತಿಂಗಳಿಂದ ಸಮಸ್ಯೆ ಉಲ್ಬಣಗೊಂಡಿದ್ದು, ಕೂಡಲೇ ಪರಿಹಾರ ಕಲ್ಪಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಉಗ್ರ ಹೋರಾಟ ನಡೆಸುವುದಾಗಿ ಹಾರಕನಾಳು ಸಣ್ಣ ತಾಂಡದ ಮುಖಂಡ ಎಲ್.ಬಿ. ಹಾಲೇಶನಾಯ್ಕ್ ಎಚ್ಚರಿಸಿದ್ದಾರೆ.

ಗ್ರಾಮ ಪಂಚಾಯಿತಿ ಪಿಡಿಓ ಎಂ.ಕೆ. ರಮೇಶ್ ಮಾತನಾಡಿ, ಗ್ರಾಮದಲ್ಲಿ ಕೊರೆದ ಬೋರ್‌ವೆಲ್‌ಗಳಲ್ಲಿ ನೀರು ಲಭ್ಯವಾಗಿಲ್ಲ. ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ನೀರು ಸಿಗುವ ಸಾಧ್ಯತೆ ಇರುವುದರಿಂದ ಅನುಮತಿ ಪಡೆದು ಬೋರ್‌ವೆಲ್ ಕೊರೆಸಲು ಕ್ರಮ ಕೈಗೊಳ್ಳಲಾಗುವುದು. ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ತಕ್ಷಣ ದುರಸ್ತಿಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹರಪನಹಳ್ಳಿ ಎಇಇ ಮಂಜ್ಯಾನಾಯ್ಕ್ ಮಾತನಾಡಿ, ಗ್ರಾಮದಲ್ಲಿರುವ ಮೂರು ಕೊಳವೆಬಾವಿಗಳ ಪೈಕಿ ಎರಡರಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ನೀರು ಲಭ್ಯವಿರುವ ಕೊಳವೆಬಾವಿಯಲ್ಲಿ ಹೆಚ್ಚಿನ ಆಳಕ್ಕೆ ಪೈಪ್ ಇಳಿಸಿ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಖಾಸಗಿ ಬೋರ್‌ವೆಲ್‌ನಿಂದಲೂ ತಕ್ಷಣ ನೀರು ಪೂರೈಸಲಾಗುವುದು ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News