Harapanahalli | ಸ್ವಾತಂತ್ರ್ಯ ಎಂದರೆ ಜವಾಬ್ದಾರಿಯುತವಾಗಿ ಬದುಕುವ ಅವಕಾಶ: ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ
ಹರಪನಹಳ್ಳಿ: ಸ್ವಾತಂತ್ರ್ಯ ಎಂದರೆ ಕೇವಲ ಬಂಧನಗಳಿಂದ ಮುಕ್ತಿಯಾಗುವುದಲ್ಲ; ಅದು ಜವಾಬ್ದಾರಿಯುತವಾಗಿ ಬದುಕುವ ಅವಕಾಶ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ಶನಿವಾರ ಆಯೋಜಿಸಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಸಂಖ್ಯಾತ ಜನರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು, ಅದರ ಮಹತ್ವವನ್ನು ಪ್ರತಿಯೊಬ್ಬರೂ ಅರಿತು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.
ಸ್ವಾತಂತ್ರ್ಯ ದೊರೆತ ಬಳಿಕ ಪ್ರಜಾಪ್ರಭುತ್ವ, ಸಮಾನತೆ ಹಾಗೂ ಸಹೋದರತ್ವದಂತಹ ಉನ್ನತ ಮೌಲ್ಯಗಳ ಆಧಾರದ ಮೇಲೆ ದೇಶ ನಿರ್ಮಾಣವಾಗಿದೆ. ಹಲವು ಭಾಷೆ, ಧರ್ಮ, ಸಂಸ್ಕೃತಿ ಹಾಗೂ ಸಂಪ್ರದಾಯಗಳ ವೈವಿಧ್ಯತೆಯ ನಡುವೆಯೂ ಭಾರತೀಯರು ಒಗ್ಗಟ್ಟಿನಿಂದ ಬದುಕುತ್ತಿರುವುದು ದೇಶದ ಹೆಮ್ಮೆ ಎಂದು ಹೇಳಿದರು.
ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸೋಣ :
ಉಪವಿಭಾಗಾಧಿಕಾರಿ ಸುರೇಶ ಕುಮಾರ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಅನೇಕರ ತ್ಯಾಗ ಮತ್ತು ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತಿದೆ. ಅವರ ಆದರ್ಶಗಳನ್ನು ಸ್ಮರಿಸಿಕೊಂಡು ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಸ್ವಾತಂತ್ರ್ಯ ಪೂರ್ವದಲ್ಲಿ ದೇಶದ ಸಾಕ್ಷರತೆ ಪ್ರಮಾಣ ಕಡಿಮೆ ಇದ್ದರೂ, ಇಂದು ಸಾಕ್ಷರತೆ ಗಣನೀಯವಾಗಿ ಹೆಚ್ಚಾಗಿದೆ. ಶಿಕ್ಷಣದ ಮೂಲಕ ದೇಶದ ಅಭಿವೃದ್ಧಿಗೆ ಮತ್ತಷ್ಟು ಕೊಡುಗೆ ನೀಡಬೇಕು ಎಂದರು.
ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ದೇಶಭಕ್ತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉದಯಶಂಕರ್, ತಹಶೀಲ್ದಾರ್ ಬಿ.ವಿ. ಗಿರೀಶ್ ಬಾಬು, ಡಿವೈಎಸ್ಪಿ ಸಂತೋಷ್ ಚವ್ಹಾಣ್, ತಾ.ಪಂ. ಇಒ ಚಂದ್ರಶೇಖರ, ನಗರಸಭೆ ಪೌರಾಯುಕ್ತೆ ರೇಣುಕಾ ಎಸ್. ದೇಸಾಯಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಲೇಪಾಕ್ಷಪ್ಪ, ತಾಲೂಕು ಆರೋಗ್ಯಾಧಿಕಾರಿ ಅರವಿಂದ, ಟಿಪಿಒ ಷಣ್ಮುಖಪ್ಪ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.