Hosapete | ರೈಲು ಹರಿದು ವ್ಯಕ್ತಿ ಮೃತ್ಯು; ಗುರುತು ಪತ್ತೆಗೆ ಪೊಲೀಸರ ಶೋಧ
ಹೊಸಪೇಟೆ/ವಿಜಯನಗರ : ಜಿಲ್ಲೆಯ ಹೊಸಪೇಟೆ ನಗರದ ಹೊರವಲಯದ ಭಟ್ರಳ್ಳಿ ಆಂಜನೇಯ ದೇಗುಲದ ಸಮೀಪದ ರೈಲ್ವೇ ಹಳಿಯಲ್ಲಿ ವ್ಯಕ್ತಿಯೊಬ್ಬರು ರೈಲು ಹರಿದು ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ರೈಲು ಹರಿದ ಪರಿಣಾಮ ಮೃತರ ದೇಹವು ಎರಡು ತುಂಡಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನಾ ಸ್ಥಳದ ದೃಶ್ಯ ನೋಡುಗರಲ್ಲಿ ಆತಂಕ ಮೂಡಿಸಿತು.
ಮಾಹಿತಿ ತಿಳಿಯುತ್ತಿದ್ದಂತೆಯೇ ಹೊಸಪೇಟೆ ರೈಲ್ವೇ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಗುರುತು ಪತ್ತೆ ಕಾರ್ಯವನ್ನು ಆರಂಭಿಸಿದ್ದಾರೆ.
ಘಟನೆಯ ಕುರಿತು ಮಾಹಿತಿ ಪಡೆದ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಅವರು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಕುರಿತು ಹೊಸಪೇಟೆ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.