Kudligi | ಯುವಜನತೆಯೇ ದೇಶದ ಅಪಾರ ಶಕ್ತಿ: ಶಾಸಕ ಡಾ.ಶ್ರೀನಿವಾಸ್ ಎನ್.ಟಿ.
ನರಸಿಂಹಗಿರಿ (ಕೂಡ್ಲಿಗಿ) : ಭಾರತವು ವಿಜ್ಞಾನ, ಶಿಕ್ಷಣ, ತಂತ್ರಜ್ಞಾನ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಮುಂಚೂಣಿಯಲ್ಲಿದ್ದು, ಯುವಜನತೆಯೇ ದೇಶದ ಅಪಾರ ಶಕ್ತಿಯಾಗಿದ್ದಾರೆ ಎಂದು ಕೂಡ್ಲಿಗಿ ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಹೇಳಿದರು.
ಆಗಸ್ಟ್ 15ರಂದು ತಮ್ಮ ಸ್ವಗ್ರಾಮ ನರಸಿಂಹಗಿರಿಯ ಶ್ರೀಮತಿ ದೊಡ್ಡಮನೆ ಬೋರಮ್ಮ ತಮ್ಮಪ್ಪ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ಶಾಸಕರು, “ಪ್ರತಿಯೊಬ್ಬರೂ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು. ಸಂವಿಧಾನ ಹಾಗೂ ದೇಶದ ಕಾನೂನುಗಳನ್ನು ಗೌರವಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಪರಿಸರ ಸಂರಕ್ಷಣೆ, ದೇಶಪ್ರೇಮ, ಶಿಸ್ತು, ಶಾಂತಿ ಹಾಗೂ ಏಕತೆಯನ್ನು ಕಾಪಾಡುವ ಮೂಲಕ ಭಾರತವನ್ನು ಮತ್ತಷ್ಟು ಬಲಿಷ್ಠ ಹಾಗೂ ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ನಿರ್ಮಿಸಲು ಶ್ರಮಿಸಬೇಕು” ಎಂದು ಕರೆ ನೀಡಿದರು.
ಇದೇ ವೇಳೆ ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಶೀಘ್ರದಲ್ಲೇ ಒದಗಿಸುವುದಾಗಿ ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯ ಬಸೆಟ್ಟಪ್ಪ, ನಿವೃತ್ತ ಶಿಕ್ಷಕ ಮಂಜುನಾಥ್, ಸಹ ಶಿಕ್ಷಕರಾದ ಶಿವಪ್ರಸಾದ್, ಬಸವರಾಜ್, ತಿಮ್ಮಪ್ಪ, ಅನಿಲ್, ದೈಹಿಕ ಶಿಕ್ಷಕ ರಾಜಕುಮಾರ್ ಸೇರಿದಂತೆ ಶಾಲೆಯ ಸಿಬ್ಬಂದಿ, ವಿದ್ಯಾರ್ಥಿಗಳು, ಗ್ರಾಮದ ಹಿರಿಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.