ಸಿದ್ದರಾಮಯ್ಯಗೂ ನನಗೂ ಯಾವುದೇ ಮುನಿಸಿಲ್ಲ: ಸಚಿವ ಝಮೀರ್ ಅಹ್ಮದ್ ಖಾನ್
ಹರಪನಹಳ್ಳಿ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನನಗೆ ಯಾವುದೇ ಭಿನ್ನಾಭಿಪ್ರಾಯ ಅಥವಾ ಮುನಿಸಿಲ್ಲ. ನನಗೆ ಸಚಿವ ಸ್ಥಾನ ನೀಡಬಾರದು ಎಂದು ಅವರು ಪಕ್ಷದ ಹೈಕಮಾಂಡ್ಗೆ ಎಂದಿಗೂ ಹೇಳಿಲ್ಲ ಎಂದು ಸಚಿವ ಝಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದರು.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬೆಣ್ಣಿಹಳ್ಳಿ ಗ್ರಾಮದಲ್ಲಿ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಸಚಿವ ಸಂಪುಟ ಸಭೆಯ ಬಳಿಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಜನ್ಮದಿನದ ಶುಭಾಶಯ ಕೋರಿದ್ದೇನೆ. ಮೈಸೂರಿನಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು ಮುಸ್ಲಿಂ ಸಮುದಾಯಕ್ಕೆ ಸಚಿವ ಸ್ಥಾನ ನೀಡುವಂತೆ ಹೇಳಿದ್ದರು. ಆದರೆ, ನನಗೆ ಸಚಿವ ಸ್ಥಾನ ನೀಡಬೇಡಿ ಎಂದು ಸಿದ್ದರಾಮಯ್ಯ ಎಲ್ಲಿಯೂ ಹೇಳಿಲ್ಲ ಎಂದು ತಿಳಿಸಿದರು.
ನಮ್ಮದು ಹೈಕಮಾಂಡ್ ನಿರ್ಧಾರವೇ ಅಂತಿಮವಾಗುವ ಪಕ್ಷ. ನನಗೆ ಸಚಿವ ಸ್ಥಾನ ನೀಡದೆ ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಿ ಎಂದರೂ ಅದಕ್ಕೂ ನಾನು ಸಿದ್ಧನಿದ್ದೇನೆ. ಸಚಿವ ಸ್ಥಾನ ಪಡೆಯಲು ಹಣ ಕೊಡುವ ಸಂಸ್ಕೃತಿ ನಮ್ಮ ಪಕ್ಷದಲ್ಲಿಲ್ಲ. ಅದು ಬಿಜೆಪಿಯಲ್ಲಿದೆ ಎಂದು ಯತ್ನಾಳ್ ಅವರೇ ಬಹಿರಂಗಪಡಿಸಿದ್ದಾರೆ ಎಂದು ಟೀಕಿಸಿದರು.
ನಮ್ಮ ಪಕ್ಷದಲ್ಲಿ ಪೌರಕಾರ್ಮಿಕನ ಪುತ್ರನಿಗೂ ಸಚಿವ ಸ್ಥಾನ ನೀಡಲಾಗಿದೆ. ಸೋಮವಾರ ಖಾತೆ ಹಂಚಿಕೆಯಾಗುವ ಸಾಧ್ಯತೆ ಇದೆ. ಈ ಹಿಂದೆ ವಸತಿ ಖಾತೆ ಹೊಂದಿದ್ದಾಗ ಮೂರು ವರ್ಷಗಳಲ್ಲಿ 798 ಮನೆಗಳನ್ನು ಹಂಚಿಕೆ ಮಾಡಿದ್ದೇನೆ. ಇನ್ನೂ 33 ಮನೆಗಳು ಸಿದ್ಧವಾಗಿದ್ದ ವೇಳೆ ಮುಖ್ಯಮಂತ್ರಿ ಬದಲಾವಣೆ ಆಯಿತು. ಈಗಲೂ ವಸತಿ ಖಾತೆ ನೀಡಿದರೆ ಉತ್ತಮ, ಆದರೂ ಮುಖ್ಯಮಂತ್ರಿ ಯಾವ ಖಾತೆ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಹೇಳಿದರು.
ಮಾಜಿ ಸಚಿವ ತಿಮ್ಮಾಪುರ ಹಾಗೂ ತಮ್ಮ ಹೆಸರಿನಲ್ಲಿ ಹರಿದಾಡುತ್ತಿರುವ ಆಡಿಯೊ ಕುರಿತು ಪ್ರತಿಕ್ರಿಯಿಸಿದ ಅವರು, ಕೆಲವರಿಗೆ ತಮ್ಮ ಬೆಳವಣಿಗೆಯನ್ನು ಸಹಿಸಿಕೊಳ್ಳಲು ಆಗದೆ ಇಂತಹ ಆಡಿಯೊಗಳನ್ನು ಸೃಷ್ಟಿಸುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಹೇಳಿದರು.
ಹಂಪಿ ಉತ್ಸವ ಇನ್ನು ಮುಂದೆ ಪ್ರತಿ ವರ್ಷ ನವೆಂಬರ್ನಲ್ಲೇ ನಡೆಯಲಿದೆ. ಹಿಂದಿನ ಹಂಪಿ ಉತ್ಸವದಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಈ ಕುರಿತು ಭರವಸೆ ನೀಡಲಾಗಿತ್ತು. ಮುಖ್ಯಮಂತ್ರಿ ಬದಲಾಗಿದ್ದರೂ ಸರ್ಕಾರ ನಮ್ಮದೇ ಆಗಿದ್ದು, ಈ ನವೆಂಬರ್ನಲ್ಲೇ ಹಂಪಿ ಉತ್ಸವ ಆಯೋಜಿಸಲಾಗುವುದು ಎಂದು ತಿಳಿಸಿದರು.
ಈ ಹಿಂದೆ ವಿಜಯನಗರ ಜಿಲ್ಲಾ ಉಸ್ತುವಾರಿಯಾಗಿ ಉತ್ತಮವಾಗಿ ಕೆಲಸ ಮಾಡಿದ್ದೇನೆ. ಈಗ ಬರ ಅಧ್ಯಯನಕ್ಕಾಗಿ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದ್ದು, ಶೀಘ್ರದಲ್ಲೇ ಖಾಯಂ ಜಿಲ್ಲಾ ಉಸ್ತುವಾರಿಗಳನ್ನೂ ನೇಮಕ ಮಾಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಅಕ್ರಮ್ ಷಾ ಅಲಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.