×
Ad

ಹಂಪಿಯ ಕೀರ್ತಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಿರಿ: ಡಿಸಿ ಕವಿತಾ ಮನ್ನಿಕೇರಿ ಕರೆ

ಪ್ರವಾಸಿ ಮಾರ್ಗದರ್ಶಿಗಳಿಗೆ ವಿದೇಶಿ ಭಾಷಾ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

Update: 2026-06-16 19:47 IST

ವಿಜಯನಗರ/ಹೊಸಪೇಟೆ (ಕಮಲಾಪುರ): ಪ್ರವಾಸೋದ್ಯಮ ಇಲಾಖೆಯು ಮಾರ್ಗದರ್ಶಿಗಳ ಕಲ್ಯಾಣಕ್ಕೆ ಸದಾ ಬದ್ಧವಾಗಿದ್ದು, ವಿದೇಶಿ ಭಾಷಾ ತರಬೇತಿಯ ಸದುಪಯೋಗ ಪಡೆದು ವಿಜಯನಗರ ಸಾಮ್ರಾಜ್ಯದ ಗತವೈಭವ ಹಾಗೂ ಹಂಪಿಯ ಕೀರ್ತಿಯನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಕರೆ ನೀಡಿದರು.

ಪ್ರವಾಸೋದ್ಯಮ ಇಲಾಖೆ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಕನ್ನಡ ವಿಶ್ವವಿದ್ಯಾಲಯದ ಭುವನವಿಜಯ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರವಾಸಿ ಮಾರ್ಗದರ್ಶಿಗಳ ವಿದೇಶಿ ಭಾಷಾ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದೇಶಿ ಪ್ರವಾಸಿಗರು ಜಿಲ್ಲೆಗೆ ಆಗಮಿಸಿದಾಗ ಮೊದಲು ಸಂಪರ್ಕಿಸುವವರು ಮಾರ್ಗದರ್ಶಿಗಳೇ ಆಗಿದ್ದಾರೆ. ಅವರ ನಡವಳಿಕೆ, ಪ್ರಾಮಾಣಿಕತೆ ಮತ್ತು ಆತ್ಮೀಯತೆ ಈ ನೆಲ, ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಪ್ರವಾಸಿಗರ ಅಭಿಪ್ರಾಯವನ್ನು ರೂಪಿಸುತ್ತದೆ. ಹೀಗಾಗಿ ವೃತ್ತಿಪರತೆ ಕಾಪಾಡಿಕೊಂಡು ಪ್ರವಾಸಿಗರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಹಂಪಿಯ ಇತಿಹಾಸ, ಕಲೆ, ವಾಸ್ತುಶಿಲ್ಪ ಹಾಗೂ ಸಂಸ್ಕೃತಿಯನ್ನು ಪರಿಚಯಿಸುವಾಗ ಸಂಶೋಧನಾಧಾರಿತ ಮತ್ತು ಅಧಿಕೃತ ಮಾಹಿತಿಯನ್ನಷ್ಟೇ ನೀಡಬೇಕು. ಯಾವುದೇ ಕಾಲ್ಪನಿಕ ಕಥೆಗಳಿಗೆ ಆಸ್ಪದ ನೀಡಬಾರದು ಎಂದು ಅವರು ಸೂಚಿಸಿದರು.

ಫ್ರಾನ್ಸ್, ಜರ್ಮನಿ, ಸ್ಪೇನ್, ರಷ್ಯಾ ಸೇರಿದಂತೆ ವಿವಿಧ ದೇಶಗಳಿಂದ ಪ್ರವಾಸಿಗರು ಹಂಪಿಗೆ ಆಗಮಿಸುತ್ತಾರೆ. ಅವರಿಗೆ ಅವರ ಭಾಷೆಯಲ್ಲಿಯೇ ಮಾಹಿತಿ ನೀಡಿದಾಗ ಪ್ರವಾಸದ ಅನುಭವ ಮತ್ತಷ್ಟು ಅರ್ಥಪೂರ್ಣವಾಗುತ್ತದೆ. ಈ ತರಬೇತಿಯನ್ನು ಉದ್ಯೋಗದ ಅವಕಾಶವಾಗಿ ಮಾತ್ರವಲ್ಲದೆ ಜ್ಞಾನಾರ್ಜನೆಯ ಅವಕಾಶವಾಗಿಯೂ ಬಳಸಿಕೊಳ್ಳಬೇಕು ಎಂದು ಹೇಳಿದರು.

ಪ್ರವಾಸಿ ಮಾರ್ಗದರ್ಶಿಗಳು ಕೇವಲ ಮಾಹಿತಿ ನೀಡುವವರಲ್ಲ, ದೇಶದ ಸಾಂಸ್ಕೃತಿಕ ರಾಯಭಾರಿಗಳಾಗಿದ್ದಾರೆ. ವಿದೇಶಿ ಭಾಷಾ ಜ್ಞಾನದಿಂದ ಸ್ಥಳೀಯ ಮಾರ್ಗದರ್ಶಿಗಳ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ ಜಿಲ್ಲೆಯ ಪ್ರವಾಸೋದ್ಯಮಕ್ಕೂ ಹೊಸ ಉತ್ತೇಜನ ದೊರೆಯಲಿದೆ ಎಂದು ಅಭಿಪ್ರಾಯಪಟ್ಟರು.

ಇಂದಿನ ಡಿಜಿಟಲ್ ಯುಗದಲ್ಲಿ ಮಾರ್ಗದರ್ಶಿಗಳು ಭಾಷಾ ಕೌಶಲ್ಯದ ಜೊತೆಗೆ ಡಿಜಿಟಲ್ ಪಾವತಿ, ಆನ್‌ಲೈನ್ ಬುಕ್ಕಿಂಗ್ ಹಾಗೂ ಪ್ರವಾಸಿ ಆ್ಯಪ್‌ಗಳ ಬಳಕೆಯ ಬಗ್ಗೆಯೂ ಅರಿವು ಹೊಂದಿರಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ವಿಭಾಗದ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕ ಡಾ. ಎಸ್. ತಿಪ್ಪೇಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಅಧ್ಯಕ್ಷತೆ ವಹಿಸಿದ್ದರು.

ಹೈದರಾಬಾದ್‌ನ ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ತಾರಕೇಶ್ವರ್, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಪ್ರಭುಲಿಂಗ ತಳಕೇರಿ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ವಿರೂಪಾಕ್ಷ ಪೂಜಾರಹಳ್ಳಿ, ವಿದೇಶಿ ಭಾಷಾ ತರಬೇತಿ ಸಂಚಾಲಕ ಎಸ್.ವೈ. ಸೋಮಶೇಖರ್ ಸೇರಿದಂತೆ ವಿವಿಧ ಜಿಲ್ಲೆಗಳ ಪ್ರವಾಸಿ ಮಾರ್ಗದರ್ಶಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News