Vijayanagara | ಪ್ರಜಾಸೇವೆ ಆಂದೋಲನದಲ್ಲಿ 52 ಅರ್ಜಿಗಳ ಸ್ವೀಕಾರ; ಕಾಲಮಿತಿಯಲ್ಲಿ ವಿಲೇವಾರಿಗೆ ಸೂಚನೆ
ವಿಜಯನಗರ (ಹೊಸಪೇಟೆ) : ಸಾರ್ವಜನಿಕರು ತಮ್ಮ ದಿನನಿತ್ಯದ ಸಮಸ್ಯೆಗಳ ಪರಿಹಾರಕ್ಕಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಪ್ರಜಾಸೇವೆ ಆಂದೋಲನ ಆರಂಭಿಸಿದೆ ಎಂದು ತಹಶೀಲ್ದಾರ್ ಶೃತಿ ಎಂ.ಮಾಳಪ್ಪಗೌಡರ ಹೇಳಿದರು.
ಹೊಸಪೇಟೆ ತಾಲೂಕಿನ ಕಮಲಾಪುರ ರೈತ ಭವನದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರವೇ ಜನರ ಬಳಿಗೆ ತೆರಳಿ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಐತಿಹಾಸಿಕ ತೀರ್ಮಾನದ ಭಾಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ 15, ಶಿಕ್ಷಣ ಇಲಾಖೆಗೆ 4, ಸರ್ವೇ ಇಲಾಖೆಗೆ 2, ಕಮಲಾಪುರ ಪುರಸಭೆಗೆ 19 ಹಾಗೂ ತಾಲೂಕು ಪಂಚಾಯಿತಿಗೆ 5 ಸೇರಿ ಒಟ್ಟು 52 ಅರ್ಜಿಗಳು ಸಲ್ಲಿಕೆಯಾಗಿವೆ. ಎಲ್ಲ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರಿಗೆ ರವಾನಿಸಿ ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಪ್ರಜಾಸೇವೆ ಆಂದೋಲನವು ಪ್ರಜೆಗಳಿಂದ, ಪ್ರಜೆಗಳಿಗಾಗಿ ಮತ್ತು ಪ್ರಜೆಗಳಿಗೋಸ್ಕರ ರೂಪಿಸಲಾದ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರ ಪ್ರತಿಯೊಂದು ಅಹವಾಲನ್ನು ಕಾನೂನುಬದ್ಧವಾಗಿ ಪರಿಹರಿಸಲು ತಾಲೂಕು ಆಡಳಿತ ಬದ್ಧವಾಗಿದೆ ಎಂದು ಶೃತಿ ಮಾಳಪ್ಪಗೌಡರ ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ದೂರುಗಳನ್ನು ಸ್ವೀಕರಿಸಿದ ತಹಶೀಲ್ದಾರ್, ಕಳೆದ ಮೂರು ವರ್ಷಗಳಿಂದ ಪೋಡಿ ಪ್ರಕ್ರಿಯೆ ಬಾಕಿಯಿರುವ ರೈತನ ಮನವಿಗೆ ತಕ್ಷಣ ಸ್ಪಂದಿಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಶೀಘ್ರದಲ್ಲೇ ಪೋಡಿ ಪ್ರಕ್ರಿಯೆ ಪೂರ್ಣಗೊಳಿಸುವ ಭರವಸೆ ನೀಡಿದರು.
ಸರ್ವೇ ನಂ. 901/2 ಜಮೀನಿಗೆ ಮೀಸಲಾದ ಸರ್ಕಾರಿ ರಸ್ತೆಯನ್ನು ಖಾಸಗಿ ವ್ಯಕ್ತಿ ತಡೆಗೋಡೆ ನಿರ್ಮಿಸಿ ಬಂದ್ ಮಾಡಿರುವ ಕುರಿತು ಮತ್ತೊಬ್ಬ ರೈತ ಸಲ್ಲಿಸಿದ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಸೆಪ್ಟೆಂಬರ್ 17ರಂದು ಸ್ಥಳ ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಈ ವೇಳೆ ವಿಧವಾ ವೇತನ, ವೃದ್ಧಾಪ್ಯ ವೇತನ ಹಾಗೂ ವಿಶೇಷಚೇತನರ ಪಿಂಚಣಿ ಆದೇಶ ಪತ್ರಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.
ಸಭೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆಲಂ ಪಾಷಾ, ಪುರಸಭೆ ಮುಖ್ಯಾಧಿಕಾರಿ ಡಿ.ಬಿ. ವೀರಣ್ಣ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ನಜೀಮಾ ಬಾನು ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.