Vijayanagara | ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣ ಕುರಿತು ನಿಖರ ದತ್ತಾಂಶ ನೀಡಬೇಕು : ಯು.ನಿಸಾರ್ ಅಹ್ಮದ್
ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚನೆ
ವಿಜಯನಗರ (ಹೊಸಪೇಟೆ), ಜೂ.29: ರಾಜ್ಯದಲ್ಲಿ ಜನಸಂಖ್ಯೆಯ ಆಧಾರದ ಮೇಲೆ ಸುಮಾರು 2.7 ಲಕ್ಷ ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಶಿಕ್ಷಣ ಪಡೆಯಬೇಕಿದ್ದರೂ, ಪ್ರಸ್ತುತ ಕೇವಲ 1.7 ಲಕ್ಷ ಮಕ್ಕಳು ಮಾತ್ರ ವಿದ್ಯಾಭ್ಯಾಸ ಮಾಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಈ ಕುರಿತು ಇಲಾಖೆಗಳ ಬಳಿ ನಿಖರ ಮತ್ತು ಸ್ಪಷ್ಟ ದತ್ತಾಂಶದ ಕೊರತೆಯಿದ್ದು, ಅಧಿಕಾರಿಗಳು ತಕ್ಷಣವೇ ಸಮಗ್ರ ಮಾಹಿತಿ ಒದಗಿಸಬೇಕು ಎಂದು ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
2011ರ ಶೈಕ್ಷಣಿಕ ಸರ್ವೇ ವರದಿಯನ್ನು ಉಲ್ಲೇಖಿಸಿದ ಅವರು, ಅಲ್ಪಸಂಖ್ಯಾತ ಸಮುದಾಯದಲ್ಲಿ ಕೇವಲ ಶೇ.42.73ರಷ್ಟು ವಿದ್ಯಾರ್ಥಿಗಳು ಮಾತ್ರ ಸಾಕ್ಷರತೆ ಹೊಂದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಪೋಷಕರಲ್ಲಿ ಶಿಕ್ಷಣದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಜಿಲ್ಲೆಯ ಯಾವುದೇ ವಿದ್ಯಾರ್ಥಿ ಶಾಲೆಯಿಂದ ಹೊರಗುಳಿಯದಂತೆ ಸಂಬಂಧಿತ ಇಲಾಖೆಗಳು ಕಟ್ಟೆಚ್ಚರ ವಹಿಸಬೇಕು ಎಂದು ತಾಕೀತು ಮಾಡಿದರು.
ಶಿಕ್ಷಕರ ಕೊರತೆ ನೀಗಿಸಲು ಸೂಚನೆ :
ಜಿಲ್ಲೆಯ ಹಲವು ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇರುವುದು ಗಮನಕ್ಕೆ ಬಂದಿದ್ದು, ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗದಂತೆ ಅಗತ್ಯಕ್ಕೆ ಅನುಗುಣವಾಗಿ ತಕ್ಷಣವೇ ಹೊರಗುತ್ತಿಗೆ ಆಧಾರದ ಮೇಲೆ ಶಿಕ್ಷಕರನ್ನು ನೇಮಕ ಮಾಡಿಕೊಂಡು ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ಸೂಚಿಸಿದರು.
ಶಾಲಾ ಮೂಲಸೌಕರ್ಯ ವೃದ್ಧಿಗೆ ಆದ್ಯತೆ :
ಜಿಲ್ಲೆಯಲ್ಲಿ ಒಟ್ಟು 748 ಶಾಲೆಗಳಿದ್ದು, ಅವುಗಳಲ್ಲಿ 46 ಸರ್ಕಾರಿ ಉರ್ದು ಶಾಲೆಗಳು, ಎರಡು ಅನುದಾನಿತ ಹಾಗೂ ಎರಡು ಅನುದಾನ ರಹಿತ ಉರ್ದು ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಶಾಲಾ-ಕಾಲೇಜುಗಳಲ್ಲಿ ಕುಡಿಯುವ ನೀರು, ಸುಸಜ್ಜಿತ ಶೌಚಾಲಯ, ಉತ್ತಮ ತರಗತಿ ಕೊಠಡಿಗಳು ಹಾಗೂ ಆಟದ ಮೈದಾನಗಳಂತಹ ಮೂಲಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಕಲ್ಪಿಸಬೇಕು ಎಂದು ಸೂಚಿಸಿದರು.
ಸಾಲ ಸೌಲಭ್ಯ ಸಕಾಲಕ್ಕೆ ವಿತರಣೆ :
ಲೀಡ್ ಬ್ಯಾಂಕ್ ಹಾಗೂ ವಿವಿಧ ನಿಗಮ-ಸಂಸ್ಥೆಗಳ ಮೂಲಕ ಅರ್ಹ ಫಲಾನುಭವಿಗಳಿಗೆ ಶೈಕ್ಷಣಿಕ, ವಸತಿ ಹಾಗೂ ಕೃಷಿ ಸಂಬಂಧಿತ ಸಾಲಗಳನ್ನು ಸಕಾಲದಲ್ಲಿ ವಿತರಿಸಬೇಕು. ಜೊತೆಗೆ ಬೀದಿ ಬದಿ ವ್ಯಾಪಾರಿಗಳಿಗೂ ಸಾಲ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆ ಮನೆಗಳನ್ನು ಶೀಘ್ರ ಪೂರ್ಣಗೊಳಿಸಿ :
ಜಿಲ್ಲೆಯ ನಿರ್ಗತಿಕರು ಮತ್ತು ಅಶಕ್ತರಿಗೆ ವಿವಿಧ ಇಲಾಖೆಗಳ ಮೂಲಕ ಮಂಜೂರಾಗಿರುವ ಮನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ವಾಸಕ್ಕೆ ಒದಗಿಸಬೇಕು. ಕಾಮಗಾರಿಗಳ ವಿಳಂಬವನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದು ಎಚ್ಚರಿಸಿದರು.
ಈ ವೇಳೆ ಅಧಿಕಾರಿಗಳು ಮಾಹಿತಿ ನೀಡಿ, ಕಳೆದ ವರ್ಷ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 772 ಮನೆಗಳು ಮಂಜೂರಾಗಿದ್ದು, ಅವುಗಳಲ್ಲಿ 561 ಮನೆಗಳು ಪೂರ್ಣಗೊಂಡಿವೆ. ಉಳಿದ 211 ಮನೆಗಳ ಕಾಮಗಾರಿ ಪ್ರಗತಿಯಲ್ಲಿದ್ದು, ಸೆಪ್ಟೆಂಬರ್ ವೇಳೆಗೆ ಪೂರ್ಣಗೊಳ್ಳಲಿವೆ ಎಂದು ತಿಳಿಸಿದರು.
ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಧೋರಣೆಯನ್ನು ಸಹಿಸಲಾಗುವುದಿಲ್ಲ. ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಗುರಿ ಸಾಧಿಸಬೇಕು ಎಂದು ಯು. ನಿಸಾರ್ ಅಹಮದ್ ಹೇಳಿದರು.
ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾತನಾಡಿ, ಅಲ್ಪಸಂಖ್ಯಾತರ ಕಲ್ಯಾಣ, ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ವಸತಿ ನಿಲಯಗಳು ಹಾಗೂ ಇತರ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಭೆ ಆರಂಭಕ್ಕೂ ಮುನ್ನ ಅಲ್ಪಸಂಖ್ಯಾತ ಸಮುದಾಯದವರಿಂದ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಉರ್ದು ಶಾಲೆಗಳ ಮುಚ್ಚುವಿಕೆ, ಶಿಕ್ಷಕರ ನೇಮಕಾತಿ ಕೊರತೆ, ಸ್ಥಳೀಯ ಉದ್ಯೋಗಾವಕಾಶ, ಒಬಿಸಿ ಜಾತಿ ಪ್ರಮಾಣ ಪತ್ರ ವಿತರಣೆ ಹಾಗೂ ಕ್ರಿಶ್ಚಿಯನ್ ಸಮುದಾಯಕ್ಕೆ ಪ್ರತ್ಯೇಕ ರುದ್ರಭೂಮಿ ಕಲ್ಪಿಸುವಂತೆ ಮನವಿಗಳು ಸಲ್ಲಿಸಲಾಯಿತು.
ಅಹವಾಲುಗಳಿಗೆ ಪ್ರತಿಕ್ರಿಯಿಸಿದ ಆಯೋಗದ ಅಧ್ಯಕ್ಷರು, ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಅಲ್ಪಸಂಖ್ಯಾತ ಆಯೋಗದ ವಿಶೇಷ ಕಾರ್ಯದರ್ಶಿ ಮುಜೀಬುಲ್ಲಾ ಖಾನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಜಾವೀದ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.