Vijayanagara | ಜಿಲ್ಲೆಯಲ್ಲಿ ಸೆ.14ರಿಂದ 28ರವರೆಗೆ ಡಿಜೆ ಸಂಪೂರ್ಣ ನಿಷೇಧ
ವಿಜಯನಗರ (ಹೊಸಪೇಟೆ) : ಮುಂಬರುವ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಡಿಜೆ ಸೌಂಡ್ ಸಿಸ್ಟಮ್ ಹಾಗೂ ಹೆಚ್ಚಿನ ಡೆಸಿಬಲ್ ಶಬ್ದ ಉಂಟುಮಾಡುವ ಧ್ವನಿವರ್ಧಕಗಳ ಬಳಕೆಯನ್ನು ಸೆಪ್ಟೆಂಬರ್ 14ರಿಂದ 28ರವರೆಗೆ ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ.
ಗಣೇಶ ಹಬ್ಬದ ಮೆರವಣಿಗೆಗಳು ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅತಿಯಾದ ಶಬ್ದದಿಂದ ಸಾರ್ವಜನಿಕರ ಆರೋಗ್ಯ, ಜೀವಭದ್ರತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಪೊಲೀಸ್ ಕಾಯ್ದೆ-1963, ಶಬ್ದ ಮಾಲಿನ್ಯ (ನಿಯಂತ್ರಣ) ನಿಯಮಗಳು-2000 ಹಾಗೂ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ-2023ರ ಕಲಂ 163ರಡಿ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.