×
Ad

Vijayanagara | ಅಮೃತ್ 2.0 ಕಾಮಗಾರಿ ವಿಳಂಬ ಸಹಿಸುವುದಿಲ್ಲ: ಡಿಸಿ ಕವಿತಾ ಮನ್ನಿಕೇರಿ

ಎಫ್‌ಎಸ್‌ಟಿಪಿ, ಎಸ್‌ಟಿಪಿ, ಕುಡಿಯುವ ನೀರಿನ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಸೂಚನೆ

Update: 2026-07-14 19:22 IST

ವಿಜಯನಗರ (ಹೊಸಪೇಟೆ) : ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಾಕಿ ಇರುವ ಎಫ್‌ಎಸ್‌ಟಿಪಿ (FSTP), ಎಸ್‌ಟಿಪಿ (STP) ಹಾಗೂ ಅಮೃತ್ 2.0 ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಅಮೃತ್ 2.0 ಯೋಜನೆ ಹಾಗೂ ಒಳಚರಂಡಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ. ಗುಣಮಟ್ಟ ಕಾಪಾಡಿಕೊಂಡು ಕಾಮಗಾರಿ ಪೂರ್ಣಗೊಳಿಸಬೇಕು. ಗುತ್ತಿಗೆದಾರರು ವಿಳಂಬ ಮಾಡಿದರೆ ಅಥವಾ ಕಳಪೆ ಕಾಮಗಾರಿ ನಡೆಸಿದರೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವುದರ ಜೊತೆಗೆ ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪೈಪ್‌ಲೈನ್ ಅಳವಡಿಕೆಗೆ ರಸ್ತೆ ಬದಿಯ ಅತಿಕ್ರಮಣ ಅಡ್ಡಿಯಾಗುತ್ತಿರುವುದರಿಂದ ಸ್ಥಳೀಯರೊಂದಿಗೆ ಸಮನ್ವಯ ಸಾಧಿಸಿ ಜಾಗ ತೆರವುಗೊಳಿಸಿ, ಆಗಸ್ಟ್ ಒಳಗೆ ಕಾಮಗಾರಿ ಪೂರ್ಣಗೊಳಿಸಬೇಕು. ಡಿಸೆಂಬರ್ ವೇಳೆಗೆ ಯೋಜನೆಯನ್ನು ಸಂಪೂರ್ಣವಾಗಿ ಮುಕ್ತಾಯಗೊಳಿಸುವಂತೆ ಸೂಚಿಸಿದರು.

ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ (ಎನ್‌ಜಿಟಿ) ಹಾಗೂ ಘನತ್ಯಾಜ್ಯ ನಿರ್ವಹಣಾ ನಿಯಮಗಳ ಅನುಷ್ಠಾನದಲ್ಲಿ ಕೇವಲ ಕಾಗದದ ಮೇಲಿನ ಪ್ರಗತಿ ತೋರಿಸದೆ, ಪ್ರಾಯೋಗಿಕವಾಗಿ ಸುಧಾರಣೆ ಕಾಣಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಯುಜಿಡಿ ಯೋಜನೆಯ ಬಾಕಿ ಇರುವ ‘ಮಿಸ್ಸಿಂಗ್ ಲಿಂಕ್’ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ, ಮುಂದಿನ ವಾರವೇ ಪ್ರಗತಿ ವರದಿ ಸಲ್ಲಿಸಬೇಕು. ನೀರು ಶುದ್ಧೀಕರಣ ಘಟಕ ಹಾಗೂ ಓವರ್‌ಹೆಡ್ ಟ್ಯಾಂಕ್ ಕಾಮಗಾರಿ ಪೂರ್ಣಗೊಂಡ ಬಳಿಕವೇ ಮನೆಗಳಿಗೆ ನಳ ಸಂಪರ್ಕ ವಿಸ್ತರಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿ, ಅಮೃತ್ 2.0 ಯೋಜನೆಯಡಿ ಜಿಲ್ಲೆಯ ಏಳು ಪಟ್ಟಣಗಳಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು. ಮರಿಯಮ್ಮನಹಳ್ಳಿ ಪಟ್ಟಣದಲ್ಲಿ 2023ರಲ್ಲಿ ಕಾರ್ಯಾದೇಶ ನೀಡಲಾಗಿದ್ದು, ನೀರು ಶುದ್ಧೀಕರಣ ಘಟಕದ ಸಿವಿಲ್ ಕಾಮಗಾರಿ ಪೂರ್ಣಗೊಂಡಿದ್ದು, ಎಲೆಕ್ಟ್ರೋ-ಮೆಕ್ಯಾನಿಕಲ್ ಕೆಲಸ ನಡೆಯುತ್ತಿದೆ ಎಂದು ವಿವರಿಸಿದರು.

ಮರಿಯಮ್ಮನಹಳ್ಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೂರು ಓವರ್‌ಹೆಡ್ ಟ್ಯಾಂಕ್‌ಗಳ ಪೈಕಿ ಎರಡು ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, 10 ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕ್ ಸ್ಥಳ ಸಮಸ್ಯೆಯಿಂದ ವಿಳಂಬವಾಗಿದೆ. 4,488 ನಳ ಸಂಪರ್ಕಗಳ ಪೈಕಿ 4,400ಕ್ಕೂ ಹೆಚ್ಚು ಮನೆಗಳಿಗೆ ಸಂಪರ್ಕ ಕಲ್ಪಿಸಲಾಗಿದೆ. 102 ಕಿ.ಮೀ ಪೈಪ್‌ಲೈನ್ ಜಾಲದಲ್ಲಿ 80 ಕಿ.ಮೀ ಕಾಮಗಾರಿ ಪೂರ್ಣಗೊಂಡಿದ್ದು, ಒಟ್ಟು 6,500 ಮನೆಗಳ ಪೈಕಿ 4,300 ಮನೆಗಳಿಗೆ ನಳ ಸಂಪರ್ಕ ಒದಗಿಸಲಾಗಿದೆ. ಜಿಲ್ಲೆಯ ಎಲ್ಲಾ ಯೋಜನೆಗಳು ಆಗಸ್ಟ್ ಅಂತ್ಯದೊಳಗೆ ಪೂರ್ಣಗೊಳ್ಳಲಿವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮನೋಹರ್, ನಗರಸಭೆ ಪೌರಾಯುಕ್ತ ಎರಗುಡಿ ಶಿವಕುಮಾರ್, ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News