Vijayanagara | ಗಣೇಶ ಹಬ್ಬ : ಶಾಂತಿ, ಸೌಹಾರ್ದತೆ ಕಾಪಾಡಲು ಪೊಲೀಸರ ಮನವಿ
ಪರವಾನಗಿ ಪಡೆದು ಸರ್ಕಾರದ ಮಾರ್ಗಸೂಚಿ ಪಾಲಿಸಲು ಸೂಚನೆ
ಕೊಟ್ಟೂರು (ವಿಜಯನಗರ) : ಮುಂಬರುವ ಗೌರಿ-ಗಣೇಶ ಚತುರ್ಥಿ ಹಬ್ಬವನ್ನು ಶಾಂತಿ, ಸೌಹಾರ್ದಯುತವಾಗಿ ಹಾಗೂ ಸರ್ಕಾರದ ಮಾರ್ಗಸೂಚಿಯಂತೆ ಆಚರಿಸುವಂತೆ ಕೊಟ್ಟೂರು ಪೊಲೀಸ್ ಠಾಣೆ ವತಿಯಿಂದ ಹಮ್ಮಿಕೊಂಡಿದ್ದ ಶಾಂತಿ ಪಾಲನಾ ಸಭೆಯಲ್ಲಿ ಸಾರ್ವಜನಿಕರಿಗೆ ಸೂಚನೆ ನೀಡಲಾಯಿತು.
ತಾಲೂಕಿನ ಹರಾಳು ಗ್ರಾಮದ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಸಂಜೆ ನಡೆದ ಸಭೆಯ ನೇತೃತ್ವವನ್ನು ವಹಿಸಿದ್ದ ಪೊಲೀಸ್ ನಿರೀಕ್ಷಕ ದುರುಗಪ್ಪ ಮಾತನಾಡಿ, ಹಬ್ಬದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಎಲ್ಲರೂ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು ಎಂದರು.
ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ ಹಾಗೂ ಇತರೆ ಧಾರ್ಮಿಕ ಕಾರ್ಯಕ್ರಮಗಳನ್ನು ಸರ್ಕಾರದ ನಿಯಮಗಳು ಮತ್ತು ಪೊಲೀಸ್ ಇಲಾಖೆಯ ಸೂಚನೆಗಳಂತೆ ನಡೆಸಬೇಕು. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಪರಸ್ಪರ ಸೌಹಾರ್ದತೆ ಕಾಪಾಡುವಂತೆ ಅವರು ಮನವಿ ಮಾಡಿದರು.
ಪೊಲೀಸ್ ಉಪನಿರೀಕ್ಷಕಿ ಗೀತಾಂಜಲಿ ಶಿಂಧೆ ಮಾತನಾಡಿ, ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ಕೆಇಬಿ ಹಾಗೂ ಪೊಲೀಸ್ ಇಲಾಖೆಯಿಂದ ಕಡ್ಡಾಯವಾಗಿ ಅಗತ್ಯ ಪರವಾನಗಿ ಪಡೆದುಕೊಂಡು ಮಾತ್ರ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ತಿಳಿಸಿದರು.
ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳು ಅಥವಾ ಗೊಂದಲಗಳಿಗೆ ಅವಕಾಶ ಕೊಡಬಾರದು. ಸಮಸ್ಯೆಗಳು ಎದುರಾದರೆ ತಕ್ಷಣ ಪೊಲೀಸ್ ಇಲಾಖೆಯ ಗಮನಕ್ಕೆ ತರಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಗ್ರಾಮದ ಮುಖಂಡರು, ವಿವಿಧ ಗಣೇಶ ಮಂಡಳಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.