Vijayanagara | ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕುವಂತೆ ಕರವೇ ಮನವಿ

ಕ್ರಮ ಕೈಗೊಳ್ಳದಿದ್ದರೆ ಅಬಕಾರಿ ಇಲಾಖೆ ಎದುರು ಪ್ರತಿಭಟನೆ ಎಚ್ಚರಿಕೆ

Update: 2026-07-23 22:09 IST

ಹೊಸಪೇಟೆ/ವಿಜಯನಗರ: ಜಿಲ್ಲೆಯ ಹೊಸಪೇಟೆ ಹಾಗೂ ಕಮಲಾಪುರ ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮ ಸಾರಾಯಿ ಮಾರಾಟವನ್ನು ತಕ್ಷಣವೇ ತಡೆಗಟ್ಟುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಸೇನೆ) ಪದಾಧಿಕಾರಿಗಳು ಅಬಕಾರಿ ಇಲಾಖೆಯ ಹೊಸಪೇಟೆ ಸಬ್‌ ಇನ್ಸ್‌ಪೆಕ್ಟರ್ ಅವರಿಗೆ ಮನವಿ ಸಲ್ಲಿಸಿದರು.

ಮನವಿಯಲ್ಲಿ, ಹೊಸಪೇಟೆಯ 7ನೇ ವಾರ್ಡ್‌ನ ಅನಂತಶಯನಗುಡಿಯ ಚಪ್ಪರದಳ ಪ್ರದೇಶದಲ್ಲಿ ಎರಡು ಶಾಲೆಗಳು, ಮಸೀದಿ ಹಾಗೂ ಮಾಸ್ತಮ್ಮ ದೇವಸ್ಥಾನಗಳ ಸಮೀಪವೇ ಅಕ್ರಮ ಸಾರಾಯಿ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಅಲ್ಲದೆ ಕಮಲಾಪುರದ ಜೈಭೀಮನಗರ, ವಿಜಯ ಹೋಟೆಲ್ ಸಮೀಪ, 9, 14, 15 ಹಾಗೂ 17ನೇ ವಾರ್ಡ್‌ಗಳಲ್ಲಿಯೂ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ ಎಂದು ದೂರಲಾಗಿದೆ.

ಅಕ್ರಮ ಸಾರಾಯಿ ಮಾರಾಟದಿಂದ ಯುವಕರು ಹಾಗೂ ಸಾರ್ವಜನಿಕರು ಮದ್ಯದ ವ್ಯಸನಕ್ಕೆ ಒಳಗಾಗುತ್ತಿದ್ದು, ಅನೇಕ ಕುಟುಂಬಗಳು ಸಂಕಷ್ಟ ಅನುಭವಿಸುತ್ತಿವೆ. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ, ಆರೋಗ್ಯ ಸಮಸ್ಯೆಗಳು ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಅಕ್ರಮ ಸಾರಾಯಿ ಮಾರಾಟ ತಡೆಯಲು ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಅಬಕಾರಿ ಇಲಾಖೆ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಸೇನೆ) ವತಿಯಿಂದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸಂಘಟನೆ ಎಚ್ಚರಿಕೆ ನೀಡಿದೆ.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಸೇನೆ) ವಿಜಯನಗರ ಜಿಲ್ಲಾಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ, ಹೊಸಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷೆ ಬಾನುಬಿ, ತಾಲೂಕು ಪ್ರಧಾನ ಕಾರ್ಯದರ್ಶಿ ದುರ್ಗಮ್ಮ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News