Vijayanagara | 4.55 ಕೋಟಿ ರೂ. ವೆಚ್ಚದಲ್ಲಿ ಬಾಲಕಿಯರ ವಸತಿ ನಿಲಯಕ್ಕೆ ಭೂಮಿಪೂಜೆ ನೆರವೇರಿಸಿದ ಶಾಸಕ ಗವಿಯಪ್ಪ

Update: 2026-08-23 19:16 IST

ಹೊಸಪೇಟೆ/ವಿಜಯನಗರ: ಹೊಸಪೇಟೆ ವಿಧಾನಸಭಾ ಕ್ಷೇತ್ರದ ಜಂಬುನಾಥಹಳ್ಳಿಯಲ್ಲಿ ಬಾಲಕಿಯರ ಮೆಟ್ರಿಕ್ ಪೂರ್ವ ವಸತಿ ನಿಲಯ ನಿರ್ಮಾಣಕ್ಕೆ ಶಾಸಕ ಎಚ್.ಆರ್. ಗವಿಯಪ್ಪ ಭೂಮಿಪೂಜೆ ನೆರವೇರಿಸಿದರು.

ಸುಮಾರು 4.55 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಸತಿ ನಿಲಯದಲ್ಲಿ 150 ಬಾಲಕಿಯರಿಗೆ ವಸತಿ ಸೌಲಭ್ಯ ದೊರೆಯಲಿದೆ. ಅಗತ್ಯ ಮೂಲಸೌಕರ್ಯಗಳೊಂದಿಗೆ ವಸತಿ ನಿಲಯವನ್ನು ಶೀಘ್ರ ನಿರ್ಮಿಸಿ ವಿದ್ಯಾರ್ಥಿನಿಯರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಶಾಸಕ ಗವಿಯಪ್ಪ ತಿಳಿಸಿದರು.

ಭೂಮಿಪೂಜೆ ಬಳಿಕ ಮಾತನಾಡಿದ ಅವರು, ಕ್ಷೇತ್ರದ ವಿವಿಧ ಗ್ರಾಮಗಳು ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹಾರ ಕಲ್ಪಿಸಲಾಗುತ್ತಿದೆ ಎಂದರು.

ಬಾಲಾಜಿನಗರ, ಪಟೇಲ್ ನಗರ, ಶಿರಸಿನಕಲ್ಲು ಸೇರಿದಂತೆ ವಿವಿಧ ಪ್ರದೇಶಗಳ ಜನರಿಗೆ ಅನುಕೂಲವಾಗುವಂತೆ 10 ಲಕ್ಷ ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ನಿರ್ಮಿಸಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಲಾಗಿದೆ. ಈಶ್ವರ ನಗರ, ಹರಿಜನಕೇರಿ ಸೇರಿದಂತೆ ಅಗತ್ಯವಿರುವ ಪ್ರದೇಶಗಳಲ್ಲೂ ಮತ್ತಷ್ಟು ನೀರಿನ ಘಟಕಗಳನ್ನು ನಿರ್ಮಿಸಲು ಯೋಜಿಸಲಾಗಿದೆ ಎಂದು ಹೇಳಿದರು.

ಸ್ಥಳೀಯರು ಕುಡಿಯುವ ನೀರು, ಸಮುದಾಯ ಭವನ ಸೇರಿದಂತೆ ಹಲವು ಬೇಡಿಕೆಗಳನ್ನು ಶಾಸಕರ ಮುಂದಿಟ್ಟರು. ಜನರ ಬೇಡಿಕೆಗಳನ್ನು ಸಚಿವರ ಗಮನಕ್ಕೆ ತಂದು ಹಂತ ಹಂತವಾಗಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ಗವಿಯಪ್ಪ ಭರವಸೆ ನೀಡಿದರು.

ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಎಚ್.ಆರ್. ಗವಿಯಪ್ಪ ತಿಳಿಸಿದರು.

ಈಗಾಗಲೇ ಒಂದು ಕಂಪನಿ ಕಾರ್ಖಾನೆ ಸ್ಥಾಪನೆಗೆ ಆಸಕ್ತಿ ತೋರಿಸಿದ್ದು, ರೈತರನ್ನು ಪುಣೆಗೆ ಕರೆದೊಯ್ದು ಅಲ್ಲಿನ ಸಕ್ಕರೆ ಕಾರ್ಖಾನೆಯನ್ನು ವೀಕ್ಷಿಸುವ ಕಾರ್ಯಕ್ರಮ ರೂಪಿಸಲಾಗಿತ್ತು. ವಿಧಾನಸಭಾ ಅಧಿವೇಶನದ ಹಿನ್ನೆಲೆಯಲ್ಲಿ ಪ್ರವಾಸವನ್ನು ಮುಂದೂಡಲಾಗಿದೆ ಎಂದು ಹೇಳಿದರು.

ಮೊದಲು ಪುಣೆಯಲ್ಲಿರುವ ಸಂಬಂಧಿತ ಕಾರ್ಖಾನೆಗೆ ಭೇಟಿ ನೀಡಿ ಅದರ ಕಾರ್ಯವೈಖರಿ ಹಾಗೂ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆಯಲಾಗುವುದು. ಬಳಿಕ ಕಂಪನಿಯ ಪ್ರತಿನಿಧಿಗಳನ್ನು ಹೊಸಪೇಟೆಗೆ ಕರೆಸಿ ಚರ್ಚೆ ನಡೆಸಿ, ಸಚಿವರೊಂದಿಗೆ ಸಮಾಲೋಚನೆ ನಡೆಸಿದ ನಂತರ ಕಾರ್ಖಾನೆ ಸ್ಥಾಪನೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಸಕ್ಕರೆ ಕಾರ್ಖಾನೆ ಸ್ಥಾಪನೆಯಾದರೆ ಹೊಸಪೇಟೆ ಭಾಗದ ರೈತರಿಗೆ ಅನುಕೂಲವಾಗಲಿದೆ. ಕಬ್ಬು ಸಾಗಾಣಿಕೆ ಸೇರಿದಂತೆ ರೈತರಿಗೆ ಎದುರಾಗುವ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಕಾರಿಯಾಗಲಿದೆ. ಯೋಜನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲೂ ಚರ್ಚೆ ನಡೆಸಲಾಗುವುದು ಎಂದು ಗವಿಯಪ್ಪ ಭರವಸೆ ನೀಡಿದರು.

ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಜನರ ಬೇಡಿಕೆಗಳನ್ನು ಆಲಿಸಿ, ಕುಡಿಯುವ ನೀರು, ವಸತಿ, ಶಿಕ್ಷಣ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News