Vijayanagara | ದೇಶಕ್ಕಾಗಿ ತ್ಯಾಗ- ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಿದ ಶಾಸಕ ಕೆ.ನೇಮಿರಾಜ ನಾಯ್ಕ್

Update: 2026-08-15 19:11 IST

ಕೊಟ್ಟೂರು (Vijayanagara): ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ಮಾಡಿದ ತ್ಯಾಗ, ಬಲಿದಾನದ ಫಲವಾಗಿ ಇಂದು ನಾವು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದೇವೆ ಎಂದು ಹಗರಿಬೊಮ್ಮನಹಳ್ಳಿ ಶಾಸಕ ಕೆ. ನೇಮಿರಾಜ ನಾಯ್ಕ್ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಬಳಿಕ ರಾಷ್ಟ್ರಗೀತೆ ಮೊಳಗಿಸಲಾಯಿತು. ಶಾಸಕರು ಹಾಗೂ ತಾಲೂಕು ದಂಡಾಧಿಕಾರಿಗಳು ಗಣ್ಯರೊಂದಿಗೆ ಪಥಸಂಚಲನದಲ್ಲಿ ಪಾಲ್ಗೊಂಡರು.

ದೇಶದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ರೈತರಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಜಗತ್ತಿನ ಇತಿಹಾಸದಲ್ಲಿ ಭಾರತೀಯ ಸ್ವಾತಂತ್ರ್ಯ ಹೋರಾಟಕ್ಕೆ ವಿಶಿಷ್ಟ ಸ್ಥಾನವಿದೆ. ನೂರು ವರ್ಷಗಳ ಕಾಲ ಲಕ್ಷಾಂತರ ಭಾರತೀಯರು ನಡೆಸಿದ ನಿರಂತರ ಹೋರಾಟ, ತ್ಯಾಗ ಮತ್ತು ಬಲಿದಾನದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ ಎಂದರು.

ಸ್ವಾತಂತ್ರ್ಯದ ಮೌಲ್ಯಗಳಾದ ರಾಷ್ಟ್ರಾಭಿಮಾನ, ದೇಶಕ್ಕಾಗಿ ಸಮರ್ಪಣಾ ಮನೋಭಾವ, ಕಾಯಕಶೀಲತೆ, ಪ್ರಾಮಾಣಿಕತೆ, ಸತ್ಯ, ಶಾಂತಿ ಹಾಗೂ ಅಹಿಂಸೆಯಂತಹ ಆದರ್ಶಗಳನ್ನು ಇಂದಿನ ಯುವಜನತೆಗೆ ತಿಳಿಸುವ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ. ಆನಂದ್ ಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಸರುಲ್ಲಾ, ಪಿಐ ಡಿ. ದುರುಗಪ್ಪ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸೋಮಶೇಖರ್, ಸರ್ಕಾರಿ ಬಾಲಕರ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಕೊಟ್ರಮ್ಮ, ಇಸಿಒ ನಿಂಗಪ್ಪ, ಪ.ಪಂ. ಎಂಜಿನಿಯರ್ ಸಿದ್ದಯ್ಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಯೋಗೇಶ್ವರ್ ದಿನ್ನೆ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ದೇವರಮನೆ ಕೊಟ್ರೇಶ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಶಾಲಾ-ಕಾಲೇಜುಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

15 ಸಾಧಕರಿಗೆ ಸನ್ಮಾನ :

ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ತಾಲೂಕು ಉಪಾಧ್ಯಕ್ಷ ಎಚ್. ದಾದಾಪೀರ್, ಹೊಸಪೇಟೆ ಧ್ವನಿಯ ಎಂ.ಜಿ. ಪ್ರಸಾದ್, ಕಾನಿಪ ಸಂಘದ ವತಿಯಿಂದ ಉದಯವಾಣಿ ರವಿ ಹಾಗೂ ವಿಜಯನಗರ ವಾಣಿಯ ಎಚ್. ನಾಗರಾಜ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 15 ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಶಾಲಾ ವಿದ್ಯಾರ್ಥಿಗಳಿಂದ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದವರ ಗಮನ ಸೆಳೆದವು. ಕಾರ್ಯಕ್ರಮವನ್ನು ಜಗದೀಶ್ ಚಂದ್ರಬೋಸ್ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News