×
Ad

Vijayanagara | ತುಂಗಭದ್ರಾ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆಗೆ ಭರದ ಸಿದ್ಧತೆ

Update: 2026-06-24 16:45 IST

ಹೊಸಪೇಟೆ/ವಿಜಯನಗರ : ತುಂಗಭದ್ರಾ ಜಲಾಶಯದ ನವೀಕರಣಗೊಂಡ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆಗೆ ಸಕಲ ಸಿದ್ಧತೆಗಳು ಭರದಿಂದ ಸಾಗಿದ್ದು, ಜೂ.25ರಂದು ನಡೆಯಲಿರುವ ಐತಿಹಾಸಿಕ ಕಾರ್ಯಕ್ರಮಕ್ಕಾಗಿ ಜಲಾಶಯ ಪ್ರದೇಶ ಸಂಪೂರ್ಣ ಸಿಂಗಾರಗೊಂಡಿದೆ. ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಆಡಳಿತ ಯಂತ್ರ ಅಂತಿಮ ಹಂತದ ಸಿದ್ಧತೆಗಳಲ್ಲಿ ತೊಡಗಿದೆ.

ಜಲಾಶಯದ ಮುಂಭಾಗವನ್ನು ಹೂವಿನ ಅಲಂಕಾರದಿಂದ ಸಜ್ಜುಗೊಳಿಸಲಾಗಿದ್ದು, ಮದುವಣಗಿತ್ತಿಯಂತೆ ಕಂಗೊಳಿಸುತ್ತಿದೆ. ಜಲಾಶಯದ ಪ್ರವೇಶ ದ್ವಾರ ಸೇರಿದಂತೆ ಸಂಪೂರ್ಣ ಪ್ರದೇಶದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಗಣ್ಯರ ಆಗಮನದ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಸಾರ್ವಜನಿಕರ ಜಲಾಶಯ ವೀಕ್ಷಣೆಗೆ ನಿರ್ಬಂಧ ಹೇರಲಾಗಿದ್ದು, ತುಂಗಭದ್ರಾ ಅಣೆಕಟ್ಟು ಸುತ್ತಮುತ್ತ ಪೊಲೀಸ್ ಕಣ್ಗಾವಲು ಹೆಚ್ಚಿಸಲಾಗಿದೆ.

ವಿಜಯನಗರ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಸ್ಥಳಕ್ಕೆ ಭೇಟಿ ನೀಡಿ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದರು. ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದ ಮುಂಭಾಗ ಹಾಗೂ ಹೊಸಪೇಟೆ ನಗರ ಪ್ರವೇಶ ರಸ್ತೆಯಲ್ಲಿ ತುರ್ತು ಡಾಂಬರೀಕರಣ ಕಾಮಗಾರಿ ನಡೆಸಿರುವುದು ಸಾರ್ವಜನಿಕರ ಗಮನ ಸೆಳೆದಿದೆ. ಹಲವು ತಿಂಗಳುಗಳಿಂದ ತೆಗ್ಗು-ಗುಂಡಿಗಳಿಂದ ಹಾಳಾಗಿದ್ದ ರಸ್ತೆಗಳಿಗೆ ಇದೀಗ ಡಾಂಬರ್ ಹಾಸಿರುವುದಕ್ಕೆ ಕೆಲವರು ಸ್ವಾಗತ ವ್ಯಕ್ತಪಡಿಸಿದರೆ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳು ಗಣ್ಯರ ಭೇಟಿಯ ಸಂದರ್ಭದಲ್ಲಿ ಮಾತ್ರ ರಸ್ತೆ ಅಭಿವೃದ್ಧಿಗೆ ಮುಂದಾಗಿದ್ದಾರೆ ಎಂದು ಕೆಲ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ದಿನನಿತ್ಯ ಸಾರ್ವಜನಿಕರು ಸಂಚರಿಸುವ ರಸ್ತೆಗಳ ದುರಸ್ತಿಗೆ ಗಮನಹರಿಸದ ಅಧಿಕಾರಿಗಳು, ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ರಾತ್ರೋರಾತ್ರಿ ಕಾಮಗಾರಿ ಕೈಗೊಂಡಿರುವುದು ವಿಷಾದನೀಯ” ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನಡೆಯಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮವು ಜಲ ಸಂಪನ್ಮೂಲ ಸಹಕಾರದ ಸಂಕೇತವಾಗಿ ರೂಪುಗೊಳ್ಳಲಿದ್ದು, ಈ ಐತಿಹಾಸಿಕ ಕ್ಷಣಕ್ಕೆ ವಿಜಯನಗರ ಜಿಲ್ಲೆ ಸಾಕ್ಷಿಯಾಗಲು ಸಜ್ಜಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News