Vijayanagara | ಹಂಪಿ ಸ್ಮಾರಕ ಸಂರಕ್ಷಣೆ, ಪ್ರವಾಸಿ ಸೌಲಭ್ಯ ಅಭಿವೃದ್ಧಿಗೆ ಆದ್ಯತೆ : ಸಂಸದ ಈ.ತುಕಾರಾಮ್
ವಿಜಯನಗರ (ಹೊಸಪೇಟೆ) : ವಿಶ್ವವಿಖ್ಯಾತ ಪ್ರವಾಸಿ ತಾಣ ಹಂಪಿಯ ಸ್ಮಾರಕಗಳ ಸಂರಕ್ಷಣೆ, ಪ್ರವಾಸಿಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಕನ್ನಡ ವಿಶ್ವವಿದ್ಯಾಲಯದ ಸರ್ವತೋಮುಖ ಬೆಳವಣಿಗೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಂಸದ ಈ. ತುಕಾರಾಮ್ ಭರವಸೆ ನೀಡಿದರು.
ಬುಧವಾರ ಕಮಲಾಪುರ ಪುರಾತತ್ವ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿದ ಅವರು, ಹಂಪಿ ವೃತ್ತದ ವಿವಿಧ ಐತಿಹಾಸಿಕ ಪ್ರದೇಶಗಳನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಕಮಲಾಪುರದ ಪುರಾತತ್ವ ವಸ್ತುಸಂಗ್ರಹಾಲಯ, ಮಹಾನವಮಿ ದಿಬ್ಬ, ಹಜಾರರಾಮ ದೇವಾಲಯ, ದಾನಾಯಕ ಆವರಣ ಹಾಗೂ ವಿರೂಪಾಕ್ಷ ದೇವಾಲಯಕ್ಕೆ ಭೇಟಿ ನೀಡಿದ ಸಂಸದರು, ಪ್ರವಾಸಿಗರ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಸ್ತುಸಂಗ್ರಹಾಲಯದಲ್ಲಿ ಹಂಪಿಯ ವಿಶ್ವ ಪಾರಂಪರಿಕ ಇತಿಹಾಸವನ್ನು ಬಿಂಬಿಸುವ ವಿಡಿಯೋ ಪ್ರದರ್ಶನ ವೀಕ್ಷಿಸಿದ ಅವರು, ಪ್ರಸ್ತುತ ಇಂಗ್ಲಿಷ್ನಲ್ಲಿ ಲಭ್ಯವಿರುವ ಇತಿಹಾಸದ ವಿಡಿಯೋವನ್ನು ಕನ್ನಡ ಭಾಷೆಯಲ್ಲಿಯೂ ಪ್ರದರ್ಶಿಸುವಂತೆ ಸೂಚಿಸಿದರು. ಸ್ಥಳೀಯರು ಹಾಗೂ ರಾಜ್ಯದ ಪ್ರವಾಸಿಗರಿಗೆ ಇದು ಅನುಕೂಲವಾಗಲಿದೆ ಎಂದು ಹೇಳಿದರು.
ಪ್ರಸ್ತುತ ಹಂಪಿ ವೀಕ್ಷಣೆಗೆ ಬಳಸಲಾಗುತ್ತಿರುವ ಒಂದು ಓಪನ್ ಅಂಬಾರಿ ಬಸ್ ಜೊತೆಗೆ ಪ್ರವಾಸಿಗರ ಹೆಚ್ಚುತ್ತಿರುವ ಒತ್ತಡವನ್ನು ನಿರ್ವಹಿಸಲು ಇನ್ನೂ ಮೂರು ಹೊಸ ಅಂಬಾರಿ ಬಸ್ಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.
ಹಂಪಿಯ ವಿವಿಧ ಐತಿಹಾಸಿಕ ಸ್ಮಾರಕಗಳ ಬಳಿ ಇರುವ ನಾಗರಿಕ ಸಮಸ್ಯೆಗಳ ಕುರಿತೂ ಸಂಸದರು ಮಾಹಿತಿ ಪಡೆದರು. ಮಹಾನವಮಿ ದಿಬ್ಬ ಪ್ರದೇಶದಲ್ಲಿ ಕುಡಿಯುವ ನೀರು ಹಾಗೂ ಶೌಚಾಲಯದ ಸಮಸ್ಯೆಯನ್ನು ಖುದ್ದಾಗಿ ಪರಿಶೀಲಿಸಿದ ಅವರು, ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹಜಾರರಾಮ ದೇವಾಲಯ ಹಾಗೂ ದಾನಾಯಕ ಆವರಣ ಪ್ರದೇಶಗಳಿಗೂ ಭೇಟಿ ನೀಡಿ ಸ್ಥಳೀಯ ಸಮಸ್ಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ವಿರೂಪಾಕ್ಷ ದೇವಾಲಯದ ಮುಂಭಾಗದಲ್ಲಿರುವ ಕುಡಿಯುವ ನೀರು ಹಾಗೂ ಚರಂಡಿ ವ್ಯವಸ್ಥೆಯನ್ನು ಪ್ರವಾಸಿಗರು ಮತ್ತು ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ತ್ವರಿತವಾಗಿ ದುರಸ್ತಿಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಂತರ ಹಂಪಿಯ ಕನ್ನಡ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಸಂಸದರು, ಕುಲಪತಿ ಹಾಗೂ ಕುಲಸಚಿವರೊಂದಿಗೆ ಚರ್ಚಿಸಿದರು. ವಿಶ್ವವಿದ್ಯಾಲಯ ಎದುರಿಸುತ್ತಿರುವ ಆರ್ಥಿಕ ಸಂಕಷ್ಟ ಮತ್ತು ಬೋಧಕ ಸಿಬ್ಬಂದಿಯ ಕೊರತೆಯ ಬಗ್ಗೆ ಕುಲಪತಿಗಳು ಸಂಸದರ ಗಮನಕ್ಕೆ ತಂದರು.
ಇದಕ್ಕೆ ಸ್ಪಂದಿಸಿದ ಸಂಸದ ಈ. ತುಕಾರಾಮ್, ಕನ್ನಡ ವಿಶ್ವವಿದ್ಯಾಲಯ ನಾಡಿನ ಹೆಮ್ಮೆಯ ಸಂಸ್ಥೆಯಾಗಿದೆ. ಶೈಕ್ಷಣಿಕ ಹಿತದೃಷ್ಟಿಯಿಂದ ಶಿಕ್ಷಕರ ನೇಮಕಾತಿಗೆ ಮೊದಲ ಆದ್ಯತೆ ನೀಡಲಾಗುವುದು. ವಿಶ್ವವಿದ್ಯಾಲಯಕ್ಕೆ ಅಗತ್ಯವಿರುವ ವಿಶೇಷ ಅನುದಾನ ಬಿಡುಗಡೆ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಹಂಪಿ ಎಎಸ್ಐ, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.