ಹರಪನಹಳ್ಳಿ| ಬಾಣಂತಿ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ
ದುರ್ಗಮ್ಮ
ಹರಪನಹಳ್ಳಿ: ಸರಕಾರಿ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು, ಮಹಿಳೆಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಕುಟುಂಬಸ್ಥರು ಆಸ್ಪತ್ರೆ ಆವರಣದಲ್ಲಿ ಕುಟುಂಬಸ್ಥರು ಪ್ರತಿಭಟಿಸಿದ ಘಟನೆ ನಡೆದಿದೆ.
ಹರಪನಹಳ್ಳಿ ತಾಲೂಕಿನ ರಾಮಘಟ್ಟ ಗ್ರಾಮದ ನಿವಾಸಿ ದುರ್ಗಮ್ಮ (20) ಮೃತಪಟ್ಟವರು.
ದುರ್ಗಮ್ಮ ಜೂನ್ 11ರಂದು ಹರಪನಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು, ಜೂನ್ 11ರಂದು ಸಿಸೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ರಾತ್ರಿಯಿಡೀ ನೋವಿನಿಂದ ನರಳುತ್ತಿದ್ದರೂ ವೈದ್ಯರು ಚಿಕಿತ್ಸೆ ನೀಡಿಲ್ಲ ಎಂದು ಆರೋಪಿಸಲಾಗಿದೆ. ನಂತರ ಅವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯಲು ಸೂಚಿಸಿದ್ದಾರೆ ಎನ್ನಲಾಗಿದೆ.
ಆದರೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ದುರ್ಗಮ್ಮ ಮೃತಪಟ್ಟಿದ್ದಾರೆ.
ಹರಪನಹಳ್ಳಿ ತಾಲೂಕು ಆಸ್ಪತ್ರೆ ವೈದ್ಯರ ವಿರುದ್ಧ ಕ್ರಮಕ್ಕೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.