ವಿಜಯಪುರ | ಸೆ.3ರಿಂದ ರಾಜ್ಯಾದ್ಯಂತ ʼಸೀರತ್ ಅಭಿಯಾನʼ : ಮಹೆಬೂಬ ಅಲಿ ಬಳಗಾನೂರ
ವಿಜಯಪುರ : ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜೀವನ, ತತ್ವ, ಸಂದೇಶದ ಕುರಿತು ತಿಳಿವಳಿಕೆ ನೀಡುವ ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ಸೆ.3ರಿಂದ 14ರ ವರೆಗೆ ರಾಜ್ಯಾದ್ಯಂತ ʼಸೀರತ್ ಅಭಿಯಾನʼ ಹಮ್ಮಿಕೊಳ್ಳಲಾಗಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾ ಘಟಕದ ಅಧ್ಯಕ್ಷ ಮಹೆಬೂಬ ಅಲಿ ಬಳಗಾನೂರ ತಿಳಿಸಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜಮಾಅತೆ ಇಸ್ಲಾಮಿ ಹಿಂದ್ ನೇತೃತ್ವದಲ್ಲಿ ʼನ್ಯಾಯದ ಹರಿಕಾರ ಮುಹಮ್ಮದ್ ಪೈಗಂಬರ್ʼ ಶೀರ್ಷಿಕೆ ಅಡಿಯಲ್ಲಿ ಅಭಿಯಾನ ನಡೆಯಲಿದೆ. ಪ್ರವಾದಿ ಮುಹಮ್ಮದ್ ಪೈಗಂಬರ್ ಮತ್ತು ಇಸ್ಲಾಂ ಧರ್ಮದ ಬಗ್ಗೆ ತಪ್ಪು ಕಲ್ಪನೆಗಳು ಹರಡಲಾಗುತ್ತಿದೆ. ಇದರ ನಿವಾರಣೆಯಾಗಬೇಕಿದೆ. ಧರ್ಮ, ಧರ್ಮಗಳ ನಡುವೆ ಶಾಂತಿ, ಸೌಹಾರ್ದ, ಸಹೋದರತೆ, ಸಹಾನುಭೂತಿ ಅಗತ್ಯವಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಈ ಅಭಿಯಾನದ ಅಂಗವಾಗಿ ವಿಜಯಪುರ ನಗರವೂ ಸೇರಿದಂತೆ ಜಿಲ್ಲೆಯಲ್ಲಿ ವಿವಿಧ ಸಮಾಜ ಸೇವಾ ಚಟುವಟಿಕೆಗಳು, ಸಂವಾದ, ವಿಚಾರಗೋಷ್ಠಿ, ಸಾರ್ವಜನಿಕ ಸಭೆಗಳು, ಪ್ರಬಂಧ ಸ್ಪರ್ಧೆ ಹಾಗೂ ಅನಾಥಶ್ರಯಕ್ಕೆ ಭೇಟಿ ನೀಡಿ ಅವರರೊಂದಿಗೆ ಸಂವಾದ ಕಾರ್ಯಕ್ರಮ ಸೇರಿದಂತೆ ಹಲವಾರು ಕಾರ್ಯಕ್ರಮ ಆಯೋಜನೆ ಮಾಡಿ, ಜನರಿಗೆ ಪ್ರವಾದಿ ಸಂದೇಶಗಳನ್ನು ತಲುಪಲಾಗುತ್ತಿದೆ ಎಂದರು.
ಎರಡು ಪುಸ್ತಕ ಬಿಡುಗಡೆ: ಈ ಅಭಿಯಾನದ ಪ್ರಯುಕ್ತ ಶಾಂತಿ ಪ್ರಕಾಶನದಿಂದ ಪ್ರವಾದಿ ಜೀವನ ಮತ್ತು ಸಂದೇಶಗಳ ಬಗ್ಗೆ ಬೆಳಕು ಚೆಲ್ಲುವ ಎರಡು ಹೊಸ ಪುಸ್ತಕ ಅಭಿಯಾನದಲ್ಲಿ ಬಿಡುಗಡೆಯಾಗಲಿವೆ ಎಂದು ವಿವರಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಸದಸ್ಯರಾದ ಎಂ.ಡಿ.ಅಬ್ದುಲ್ ಕದೀರ್, ಯೂಸುಫ್ ಖಾಝಿ, ಸೋಲಿಡಾರಿಟಿ ಯೂಥ್ ಮೂವ್ಮೆಂಟ್ ಅಧ್ಯಕ್ಷ ಅಬ್ದುಲ್ ಹಮೀದ್ ಜಾವೀದ್, ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಜಿಲ್ಲಾ ಉಪಾಧ್ಯಕ್ಷ ಉಬೈದೂರ ರಹ್ಮಾನ್ ಶೈಖ್ ಮುಂತಾದವರು ಇದ್ದರು.