×
Ad

ಪ್ರವಾಹ ಸಂತ್ರಸ್ತರಿಗೆ ಪ್ರಸ್ತುತ 5 ಸಾವಿರ ರೂ. ತುರ್ತು ಪರಿಹಾರ : ಸಚಿವ ಎಂ.ಬಿ.ಪಾಟೀಲ್‌

Update: 2025-09-29 18:51 IST

ವಿಜಯಪುರ : ಭೀಮಾ ನದಿಯ ಪ್ರವಾಹದಿಂದ ಅತೀವೃಷ್ಟಿ ಹಾಗೂ ಪ್ರವಾಹ ಸಂತ್ರಸ್ತರಿಗೆ ಪ್ರಸ್ತುತ 5 ಸಾವಿರ ರೂ. ತುರ್ತು ಪರಿಹಾರದ ಜೊತೆಗೆ ಇನ್ನೂ ಹೆಚ್ಚುವರಿಯಾಗಿ ಪರಿಹಾರ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿ ಹಾಗೂ ಪರಿಹಾರ ಕ್ರಮಗಳ ಕುರಿತು ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರಣೆ ನೀಡಿದ ಅವರು, ಪ್ರವಾಹ ಪರಿಸ್ಥಿತಿ ವೇಳೆ ತುರ್ತು ಪರಿಹಾರ ರೂಪವಾಗಿ ಐದು ಸಾವಿರ ರೂ. ನೀಡಲಾಗುತ್ತಿದೆ, ಇದನ್ನು ಹೆಚ್ಚಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿ ಈ ಪ್ರಥಮ ಹಂತದ ತುರ್ತು ಪರಿಹಾರವನ್ನು ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈಗಾಗಲೇ ಪ್ರವಾಹ ಸಂತ್ರಸ್ತರನ್ನು ಖುದ್ದು ಭೇಟಿ ಮಾಡಿ ಅವರ ಅಹವಾಲು ಆಲಿಸುವ ಕೆಲಸ ಮಾಡಿರುವೆ, ಅವರ ಜೊತೆ ಸರಕಾರವಿದೆ, ಯಾವುದೇ ಕಾರಣಕ್ಕೂ ಆತಂಕ ಪಡುವ ಅಗತ್ಯವಿಲ್ಲ ಎಂದು ಅಭಯ ನೀಡಲಾಗಿದೆ ಎಂದರು.

ಇಂಡಿ ತಾಲೂಕಿನ 8 ಗ್ರಾಮಗಳು ಮತ್ತು ಆಲಮೇಲ ತಾಲೂಕಿನ 6 ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಒಟ್ಟು 17 ಕಾಳಜಿ ಕೇಂದ್ರಗಳನ್ನು ಪ್ರಾರಂಭಿಸಿ, 185 ಕುಟುಂಬಗಳನ್ನೊಳಗೊಂಡಂತೆ (ಇಂಡಿ ತಾಲೂಕಿನಲ್ಲಿ 541 ಜನ, ಆಲಮೇಲ ತಾಲೂಕಿನಲ್ಲಿ 319 ಜನರನ್ನು) ಒಟ್ಟು 860 ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳನ್ನು ನಿಯೋಜಿಸಿ, ವಸತಿ, ಉಪಹಾರ ಹಾಗೂ ಊಟದ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದರು.

ಗೃಹ ಉಪಯೋಗಿ ವಸ್ತುಗಳ ಹಾನಿಯಾದ ಮತ್ತು ಮಳೆ ನೀರು ನುಗ್ಗಿರುವ ಒಟ್ಟು 270 ಮನೆಗಗಳಿಗೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಮಾರ್ಗಸೂಚಿ ಹಾಗೂ ಸರಕಾರದ ಆದೇಶಗಳನ್ವಯ 13.50 ಲಕ್ಷ ರೂ. ಪರಿಹಾರ ವಿತರಿಸಲಾಗಿದ್ದು, ಕಳೆದ ಎಪ್ರಿಲ್‌ನಿಂದ ಇಲ್ಲಿಯವರೆಗೆ ಒಟ್ಟು 17 ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಗಳನ್ನು ನಡೆಸಲಾಗಿರುತ್ತದೆ ಎಂದು ವಿವರಿಸಿದರು.

ಭೀಮಾ ನದಿ ಪ್ರವಾಹ ಹಾಗೂ ಮಳೆಯಿಂದಾಗಿ ದೊಡ್ಡ ಪ್ರಮಾಣದಲ್ಲಿ ಬೆಳೆಗಳು ಹಾನಿಯಾಗಿವೆ, ಹೀಗಾಗಿ ಮುಖ್ಯಮಂತ್ರಿಗಳೇ ಖುದ್ದು ನಾಳೆ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ, ಈ ಪರಿಹಾರ ಸೇರಿದಂತೆ ವಿವಿಧ ವಿಷಯಗಳ ಕುರಿತು ಅವರ ಗಮನಕ್ಕೆ ತರಲಾಗುವುದು ಎಂದರು.

6815.15 ಹೆಕ್ಟರ್ ಕೃಷಿ ಬೆಳೆಹಾನಿ ಮತ್ತು 566.71 ಹೆಕ್ಟರ್ ತೋಟಗಾರಿಕೆ ಬೆಳೆಹಾನಿ ಸೇರಿ ಒಟ್ಟು- 7381.86 ಹೆಕ್ಟರ್ ಬೆಳೆ ಹಾನಿಯಾದ ಬಗ್ಗೆ ಸrkaರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸೆಪ್ಟೆಂಬರ್ ಮಾಹೆಯಲ್ಲಿ ಮಳೆಯಿಂದ ಅಂದಾಜು ಕೃಷಿ ಬೆಳೆ ಹಾನಿ 1,31,490.00 ಹೆಕ್ಟರ್ ಹಾಗೂ ತೋಟಗಾರಿಕೆ ಬೆಳೆ ಹಾನಿ 6,749.00 ಹೆಕ್ಟರ್ ಸೇರಿ ಒಟ್ಟು 1,38,239 ಹೇಕ್ಟರ್ ಬೆಳೆ ಹಾನಿಯ ಪ್ರಾಥಮಿಕ ವರದಿಯನ್ನು ಸಲ್ಲಿಸಿದ್ದು, ಜಂಟಿ ಸಮೀಕ್ಷೆ ಪ್ರಗತಿಯಲ್ಲಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News