ಗುರಮಠಕಲ್ ಅಲೆಮಾರಿ ಜನಾಂಗಕ್ಕೆ ವಸತಿ ಸೌಲಭ್ಯ ಕಲ್ಪಿಸಲು ಶೀಘ್ರ ಸರ್ವೇ ನಡೆಸಲಾಗುವುದು: ಸಚಿವ ಝಮೀರ್ ಅಹ್ಮದ್

ಶಾಸಕ ಶರಣಗೌಡ ಕಂದಕೂರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು

Update: 2026-08-19 18:51 IST

ಯಾದಗಿರಿ: ಗುರಮಠಕಲ್ ಪಟ್ಟಣದ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅಲೆಮಾರಿ ಹಾಗೂ ಇತರೆ ವಸತಿಹೀನ ಜನರಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಸರ್ವೇ ಕಾರ್ಯ ನಡೆಸಲಾಗುವುದು ಎಂದು ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಶರಣಗೌಡ ಕಂದಕೂರ ಅವರ ಸೂಚನೆಗೆ ಉತ್ತರಿಸಿದ ಸಚಿವರು, ಪಟ್ಟಣದ ವಾರ್ಡ್‌ 14ರ ಭಿಕ್ಷುಕರ ಕಾಲೋನಿಯಲ್ಲಿ 1993ರಲ್ಲಿ ಸರ್ಕಾರದಿಂದ 48 ಮನೆಗಳನ್ನು ನಿರ್ಮಿಸಿ ಹಸ್ತಾಂತರಿಸಲಾಗಿತ್ತು. ಆದರೆ, ಸದ್ಯ ಈ ಕಟ್ಟಡಗಳು ವಾಸಕ್ಕೆ ಯೋಗ್ಯವಾಗಿಲ್ಲ ಎಂದು ತಹಶೀಲ್ದಾರ್ ವರದಿ ನೀಡಿದ್ದಾರೆ. ಕಾಲಕ್ರಮೇಣ ಬಡಾವಣೆಯಲ್ಲಿ ವಾಸಿಸುವವರ ಸಂಖ್ಯೆ 100ರಿಂದ 120ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು.

ವಾಸಕ್ಕೆ ಯೋಗ್ಯವಲ್ಲದ ಕಟ್ಟಡಗಳಿದ್ದರೂ ಭಿಕ್ಷುಕರು, ಅಲೆಮಾರಿಗಳು ಹಾಗೂ ಬುಡಗ ಜಂಗಮ ಸಮುದಾಯದವರು ಟೆಂಟ್‌ಗಳಲ್ಲಿ ಜೀವನ ನಡೆಸುತ್ತಿದ್ದಾರೆ ಎಂದು ಸಚಿವರು ಹೇಳಿದರು.

ಸರ್ಕಾರ 2024ರಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ವಾಜಪೇಯಿ ವಸತಿ ಯೋಜನೆಗಳನ್ನು ಜಾರಿಗೊಳಿಸಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದಿಂದ 1.50 ಲಕ್ಷ ರೂ. ಹಾಗೂ ರಾಜ್ಯ ಸರ್ಕಾರದಿಂದ 3 ಲಕ್ಷ ರೂ. ಸೇರಿದಂತೆ ಒಟ್ಟು 4.50 ಲಕ್ಷ ರೂ. ನೆರವು ನೀಡಲಾಗುತ್ತಿದೆ. ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಕೇಂದ್ರದಿಂದ 1.50 ಲಕ್ಷ ರೂ. ಹಾಗೂ ರಾಜ್ಯದಿಂದ 2 ಲಕ್ಷ ರೂ. ಸೇರಿದಂತೆ ಒಟ್ಟು 3.50 ಲಕ್ಷ ರೂ. ನೆರವು ನೀಡಲಾಗುತ್ತಿದೆ ಎಂದು ವಿವರಿಸಿದರು.

ಜಿಲ್ಲಾಡಳಿತವು ಬಡಾವಣೆಯಲ್ಲಿ ವಾಸಿಸುತ್ತಿರುವ ಭಿಕ್ಷುಕರು ಹಾಗೂ ಅಲೆಮಾರಿ ಜನರಿಗೆ ಮನೆ ನಿರ್ಮಿಸಲು ಸೂಕ್ತ ಭೂಮಿ ಗುರುತಿಸಿ, ಡಿಪಿಆರ್ ಸಿದ್ಧಪಡಿಸಿ ಸರ್ಕಾರಕ್ಕೆ ವರದಿ ಸಲ್ಲಿಸಿದರೆ ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ) 2.0–ಬಿಎಲ್‌ಸಿ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ನಿಯಮಾನುಸಾರ ವಸತಿ ಯೋಜನೆ ರೂಪಿಸಲು ಸರ್ಕಾರ ಸಿದ್ಧವಿದೆ ಎಂದು ಸಚಿವ ಝಮೀರ್ ಅಹ್ಮದ್ ಖಾನ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News