ಅಂಗನವಾಡಿ ಕಾರ್ಯಕರ್ತೆಯರು ಬಾಲ್ಯ ವಿವಾಹ ನಡೆಯದಂತೆ ಎಚ್ಚರಿಕೆ ವಹಿಸಿ : ಶಾಸಕ ಶರಣಗೌಡ ಕಂದಕೂರ
ಯಾದಗಿರಿ : ದೇಶ ಸ್ವಾತಂತ್ರಗೊಂಡು 78 ವರ್ಷ ಕಳೆದರು, ಇನ್ನೂ ಸಮಾಜದಲ್ಲಿ ಅನಕ್ಷರತೆಯ ಪರಿಣಾಮ ಬಾಲ್ಯ ವಿವಾಹಗಳು ನಡೆಯುತ್ತಿವೆ, ಮಹಿಳೆಯರ ಹಾಗೂ ಮಕ್ಕಳ ಆರೋಗ್ಯ ದೃಷ್ಟಿಯಿಂದ ಅಂಗನವಾಡಿ ಕಾರ್ಯಕರ್ತೆಯರ ತಂಡ ತಮ್ಮ-ತಮ್ಮ ಭಾಗದಲ್ಲಿ ಜನರಲ್ಲಿ ಜಾಗೃತಿ ಮೂಡಿಸಿ, ಘಟನೆಗಳು ಜರುಗದಂತೆ ಎಚ್ಚರಿಕೆ ವಹಿಸಬೇಕೆಂದು ಗುರುಮಿಠಕಲ್ ಮತಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಸೂಚಿಸಿದರು.
ನಗರದ ತಮ್ಮ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಗುರುಮಿಠಕಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯಾದಗಿರಿ, ಶಿಶು ಅಭಿವೃದ್ಧಿ ಯೋಜನೆ ಗುರುಮಿಠಕಲ್ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ನೂತನವಾಗಿ ನೇಮಕಗೊಂಡಿರುವ 17 ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ 54 ಸಹಾಯಕಿಯರಿಗೆ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದರು.
ಸಮುದಾಯದ ಪ್ರಗತಿಯಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಕಾರ್ಯ ಮಹತ್ವದಾಗಿದೆ. ಕಳೆದ 7 ವರ್ಷಗಳಲ್ಲಿ ಗುರುಮಿಠಕಲ್ ಮತಕ್ಷೇತ್ರದ ಬಹುತೇಕ ಗ್ರಾಮಗಳಲ್ಲಿ ಹಾಗೂ ತಾಂಡಾಗಳಲ್ಲಿ ಅಗತ್ಯಕ್ಕನುಸಾರವಾಗಿ ಅಂಗನವಾಡಿ ಕೇಂದ್ರಗಳ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿದೆ. ಇನ್ನೂ ಕೆಲವು ಕಡೆ ನಿವೇಶನದ ಕೊರತೆಯಿಂದ ನೆನೆಗುದಿಗೆ ಬಿದ್ದೀವೆ. ಅಲ್ಲಿನ ಸ್ಥಳೀಯ ಮುಖಂಡರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಚರ್ಚಿಸಿ, ನಿವೇಶನ ದೊರಕಿಸಿಕೊಟ್ಟಲ್ಲಿ, ಸಮಸ್ಯೆ ಪರಿಹಾರವಾಗುತ್ತದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ವೀರಣ್ಣಗೌಡ ಪಾಟೀಲ್ ಮಾತನಾಡಿ, ಜಿಲ್ಲೆಯಲ್ಲಿ ನಮ್ಮ ಇಲಾಖೆ ಕ್ರೀಯಾಶೀಲವಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಸಾಗುತ್ತೀದೆ. ಶಾಸಕರು ಈ ಹಿಂದೆ ಸದನದ ಒಳಗೆ- ಹೊರಗೆ ಮಾನವೀಯ ಕಳಕಳಿಯಿಂದ ಮಹಿಳೆಯರ ಹಾಗೂ ಮಕ್ಕಳ ಸಮಸ್ಯೆಗಳ ಪರಿಹಾರಕ್ಕೆ ಯತ್ನಿಸಿದ್ದಾರೆ. ಅವರ ಸೂಚನೆಯಂತೆ ನಮ್ಮ ಸಿಬ್ಬಂಧಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ವೇದಿಕೆ ಮೇಲೆ ತಾಲ್ಲೂಕು ಸಿಡಿಪಿಓ ಶರಣಬಸವ, ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಕಟಕಟಿ ಹೊನಗೇರಾ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಶಾಸಕರು ಕೊವೀಡ್ ಸಮಯದಲ್ಲಿ ಮೃತಪಟ್ಟ ಹತ್ತಿಕುಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೌಧಾಗರ ತಾಂಡಾದ ನೀರು ಬಿಡುವ ಪಂಪ್ ಆಪರೇಟರ್ ಮಿಟ್ಟು ನಾಯಕ್ ಪತ್ನಿಗೆ 5 ಲಕ್ಷ ರೂ. ಚೆಕ್ನ್ನು ವಿತರಿಸಿದರು. ಮೇಲ್ವಿಚಾರಕಿ ಉಷಾ ಸ್ವಾಗತಿಸಿದರು, ರೇಣುಕಾ ನಿರೂಪಿಸಿದರು, ಶರಣಮ್ಮ ವಂದಿಸಿದರು.