ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ʼಸ್ಥಳ ಶುದ್ದೀಕರಣʼ; ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

Update: 2026-08-19 14:31 IST

ಯಾದಗಿರಿ: ಉತ್ತರಾಖಂಡ ರಾಜ್ಯದ ಹಲ್ದಾನಿಯಲ್ಲಿ ಆಗಸ್ಟ್ 8ರಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿ ಭಾಷಣ ಮಾಡಿದ ಸ್ಥಳವನ್ನು ʼಶುದ್ಧೀಕರಣʼ ಮಾಡಿರುವ ಘಟನೆಯನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ದಲಿತ ಮುಖಂಡ ಶ್ಯಾಮಸನ್ ಮಾಳಿಕೇರಿ ಅವರು ದೇಶದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿರುವುದಕ್ಕೆ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡಿರುವ ಘಟನೆಯೇ ಸಾಕ್ಷಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಂಬೇಡ್ಕರ್ ಅವರ ಕಾಲದಿಂದಲೂ ಜಾತಿ ತಾರತಮ್ಯದ ವಿರುದ್ಧ ಹೋರಾಟ ನಡೆಯುತ್ತಿದ್ದರೂ, ಇಂದಿಗೂ ದಲಿತರಿಗೆ ಹೋಟೆಲ್, ದೇವಸ್ಥಾನ, ಸಭೆ ಸಮಾರಂಭ ಗಳಲ್ಲಿಯೂ ಅವಕಾಶ ನೀಡದಂತಹ ಘಟನೆಗಳು ನಡೆಯುತ್ತಿವೆ. ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ ಮಾಡುವ ಮೂಲಕ ಅವರನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟೇರಕರ್ ಮಾತನಾಡಿ, ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳವನ್ನು ಶುದ್ಧೀಕರಣ ಮಾಡಿದ ಘಟನೆ ಅತ್ಯಂತ ವಿಕೃತ ಹಾಗೂ ಖಂಡನಾರ್ಹವಾಗಿದ್ದು, 21ನೇ ಶತಮಾನದ ಪ್ರಜಾಪ್ರಭುತ್ವದ ಭಾರತದಲ್ಲೂ ಜಾತಿ ತಾರತಮ್ಯದ ಮನಸ್ಥಿತಿ ಜೀವಂತವಾಗಿರುವುದು ಶೋಚನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಂತಹ ಜಾತಿವಾದಿ ಮನಸ್ಥಿತಿಗೆ ಕಡಿವಾಣ ಹಾಕಬೇಕು. ಘಟನೆಯಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಅಗತ್ಯವಿದ್ದಲ್ಲಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಅಧ್ಯಕ್ಷ ಬಾಬುರಾವ್ ಕಾಡ್ಲೂರ್ಗೋಪಾಲ ತೇಳಗೇರಿ, ಸೈದಪ್ಪ ಕೂಲೂರ್, ಭೀಮರಾಯ ಹೊಸ್ಮನಿ, ಪರಶುರಾಮ ಒಡೆಯರ್, ನಿಂಗಪ್ಪ ಬೀರನಾಳ್, ಹೊನ್ನಪ್ಪ ನಾಟೇಕಾರ್, ಲಾಲಪ್ಪ ತಲಾರಿ, ಸೇರಿದಂತೆ ಅನೇಕರು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News