ಯಾದಗಿರಿ ನಗರದ ರಸ್ತೆ, ಪಾದಚಾರಿ ಮಾರ್ಗ ಪರಿಶೀಲಿಸಿದ ಡಿಸಿ ರಾಹುಲ್ ಪಾಂಡ್ವೆ

Update: 2026-08-12 18:20 IST

ಯಾದಗಿರಿ: ನಗರದ ವಿವಿಧೆಡೆ ಬುಧವಾರ ಬೆಳಂಬೆಳಗ್ಗೆ ಮಿಂಚಿನ ಸಂಚಾರ ನಡೆಸಿದ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಅವರು ರಸ್ತೆ, ಪಾದಚಾರಿ ಮಾರ್ಗ, ಮಾರುಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆ ಮತ್ತು ಮೂಲಸೌಕರ್ಯಗಳನ್ನು ಪರಿಶೀಲಿಸಿದರು.

ನಗರದ ಡಿಗ್ರಿ ಕಾಲೇಜಿನಿಂದ ಕನಕ ಸರ್ಕಲ್‌ವರೆಗೆ ತೆರಳಿದ ಜಿಲ್ಲಾಧಿಕಾರಿಗಳು ರಸ್ತೆ ಹಾಗೂ ಪಾದಚಾರಿ ಮಾರ್ಗಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಒಳರಸ್ತೆಗಳನ್ನು ಪರಿಶೀಲಿಸಿದ ಅವರು, ರಸ್ತೆಯ ಅಗಲ ಹಾಗೂ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಅಂಶಗಳ ಕುರಿತು ನಗರಸಭೆ ಪೌರಾಯುಕ್ತ ಉಮೇಶ ಚವ್ಹಾಣ ಅವರಿಂದ ಮಾಹಿತಿ ಪಡೆದರು. ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ಅಂಶಗಳನ್ನು ಕೂಡಲೇ ತೆರವುಗೊಳಿಸುವಂತೆ ಸೂಚಿಸಿದರು.

ಪಾದಚಾರಿ ಮಾರ್ಗದ ಕಾಮಗಾರಿ ಪರಿಶೀಲಿಸಿದ ಅವರು, ಅಲ್ಲಿನ ಎಲ್ಲ ಒತ್ತುವರಿಗಳನ್ನು ತೆರವುಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ಅನುವು ಮಾಡಿಕೊಡಬೇಕು. ರಸ್ತೆಯಲ್ಲಿ ಸಂಗ್ರಹಿಸಿರುವ ನಿರ್ಮಾಣ ಸಾಮಗ್ರಿಗಳನ್ನು ತಕ್ಷಣ ತೆರವುಗೊಳಿಸುವಂತೆ ನಿರ್ದೇಶನ ನೀಡಿದರು.

ರಸ್ತೆ ತನ್ನ ಪೂರ್ಣ ಅಗಲದಲ್ಲಿ ಯಾವುದೇ ಅಡೆತಡೆಯಿಲ್ಲದೆ ಸಾರ್ವಜನಿಕರ ಬಳಕೆಗೆ ಮುಕ್ತವಾಗಿರುವಂತೆ ನೋಡಿಕೊಳ್ಳಬೇಕು. ರಸ್ತೆ ಬದಿಗಳಲ್ಲಿ ಸಂಗ್ರಹವಾಗಿರುವ ಕಸವನ್ನು ತೆರವುಗೊಳಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ನಿಯಮಾನುಸಾರ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ತರಕಾರಿ ಮಾರುಕಟ್ಟೆಯನ್ನು ಸ್ವಚ್ಛ ಹಾಗೂ ವ್ಯವಸ್ಥಿತವಾಗಿ ನಿರ್ವಹಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಚರಂಡಿಗಳಿಗೆ ಸ್ಲ್ಯಾಬ್‌ಗಳಿಲ್ಲದ ಸ್ಥಳಗಳನ್ನು ಗುರುತಿಸಿ ಅಗತ್ಯ ಸ್ಲ್ಯಾಬ್‌ಗಳನ್ನು ಕೂಡಲೇ ಅಳವಡಿಸುವಂತೆ ಸೂಚಿಸಿದರು.

ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ನಿರ್ವಹಿಸಬೇಕು. ರಸ್ತೆಗಳನ್ನು ನಿಯಮಿತವಾಗಿ ಗುಡಿಸುವುದರ ಜೊತೆಗೆ ಸ್ಕ್ರಬ್ಬಿಂಗ್ ಮೂಲಕ ಕೊಳಕು ಹಾಗೂ ಮಣ್ಣನ್ನು ಸಂಪೂರ್ಣವಾಗಿ ತೆರವುಗೊಳಿಸಿ, ಬಿಟುಮಿನ್ ಪದರ ಸ್ಪಷ್ಟವಾಗಿ ಕಾಣುವಂತೆ ಸ್ವಚ್ಛತೆ ಕಾಪಾಡಬೇಕು ಎಂದು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ಅವರ ಸಮಸ್ಯೆ ಹಾಗೂ ಅಹವಾಲುಗಳನ್ನು ಆಲಿಸಿ ದಾಖಲಿಸಿಕೊಂಡರು. 

ಉದ್ಯಾನವನ ಪರಿಶೀಲನೆ :

ಜವಾಹರ್ ಕಾಲೇಜಿನ ಪಕ್ಕದಲ್ಲಿರುವ ಮಹಾತ್ಮ ಗಾಂಧಿ ಉದ್ಯಾನವನಕ್ಕೂ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ ಭೇಟಿ ನೀಡಿ ಪರಿಶೀಲಿಸಿದರು. ಉದ್ಯಾನವನವನ್ನು ಸಮರ್ಪಕವಾಗಿ ನಿರ್ವಹಿಸುವುದರ ಜೊತೆಗೆ ಸಾರ್ವಜನಿಕರ ಬಳಕೆಗೆ ಸಂಪೂರ್ಣವಾಗಿ ಸಿದ್ಧವಾಗುವಂತೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ನಗರಸಭೆ ಪೌರಾಯುಕ್ತ ಉಮೇಶ ಚವ್ಹಾಣ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News