ಬೆಳೆ ವಿಮೆ ಮಾಡಿಸಿಕೊಳ್ಳಲು ಹಳ್ಳಿಗಳಲ್ಲಿ ಡಂಗುರ ಸಾರಿ ಜಾಗೃತಿ ಮೂಡಿಸಲು ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ ಸೂಚನೆ

Update: 2026-08-06 19:36 IST

ಯಾದಗಿರಿ: ಮಳೆಯ ಕೊರತೆಯಿಂದ ತಾಲೂಕಿನಾದ್ಯಂತ ಬೆಳೆಗಳು ಒಣಗುತ್ತಿದ್ದು, ಪ್ರತಿಯೊಬ್ಬ ರೈತರೂ ಆಗಸ್ಟ್‌ 10ರೊಳಗೆ ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ ಕರೆ ನೀಡಿದರು.

ತಾಲೂಕಿನ ಮುಡಬೂಳ ಗ್ರಾಮದ ಹೊಲಗಳಿಗೆ ಗುರುವಾರ ಭೇಟಿ ನೀಡಿ ಬೆಳೆ ಪರಿಸ್ಥಿತಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 10 ಕೊನೆಯ ದಿನವಾಗಿರುವುದರಿಂದ ಪ್ರತಿ ಗ್ರಾಮದಲ್ಲೂ ಡಂಗೂರ ಸಾರಿ ರೈತರಿಗೆ ಮಾಹಿತಿ ನೀಡುವಂತೆ ತಾಲೂಕು ಪಂಚಾಯಿತಿ ಇಒ ಹಾಗೂ ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಮಳೆಯ ಅಭಾವದಿಂದ ಉಂಟಾಗಿರುವ ಬೆಳೆ ಹಾನಿಯ ಸಮಗ್ರ ವರದಿಯನ್ನು ತಕ್ಷಣ ಸಿದ್ಧಪಡಿಸಿ ಕಂದಾಯ ಇಲಾಖೆಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದರು.

ಕಳೆದ ವರ್ಷ ಕೇವಲ 1,700 ರೈತರು ಬೆಳೆ ವಿಮೆ ಮಾಡಿಸಿಕೊಂಡಿದ್ದರೆ, ಈ ಬಾರಿ ಈಗಾಗಲೇ ಸುಮಾರು 10 ಸಾವಿರ ರೈತರು ವಿಮೆ ಮಾಡಿಸಿರುವ ಮಾಹಿತಿ ಕೃಷಿ ಇಲಾಖೆಯಿಂದ ಲಭ್ಯವಾಗಿದೆ. ಉಳಿದ ರೈತರೂ ವಿಳಂಬ ಮಾಡದೆ ವಿಮೆ ಮಾಡಿಸಿಕೊಳ್ಳುವ ಮೂಲಕ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು.

ರಾಜ್ಯದ ಎಲ್ಲ ಜಿಲ್ಲೆಗಳ ಮಳೆ ಹಾಗೂ ಬೆಳೆ ಹಾನಿ ವರದಿಗಳನ್ನು ಪರಿಶೀಲಿಸಿದ ಬಳಿಕ ಆಗಸ್ಟ್‌ ಕೊನೆಯ ವಾರ ಅಥವಾ ಸೆಪ್ಟೆಂಬರ್‌ ಮೊದಲ ವಾರದಲ್ಲಿ ಬರ ಘೋಷಣೆ ಮತ್ತು ಪರಿಹಾರ ಕುರಿತು ಮುಖ್ಯಮಂತ್ರಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ರಸಗೊಬ್ಬರ ವಿತರಣೆಯಲ್ಲಿ ಅಕ್ರಮಗಳ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಟೋಕನ್ ವ್ಯವಸ್ಥೆಯ ಮೂಲಕವೇ ರಸಗೊಬ್ಬರ ವಿತರಣೆ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಕಡೆಚೂರು ದುರಂತ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ :

ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ಮೂವರು ಕಾರ್ಮಿಕರ ಸಾವಿನ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಸಚಿವರು, ಪ್ರಕರಣದ ಸಮಗ್ರ ತನಿಖೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

ಜನರ ಜೀವಕ್ಕೆ ಅಪಾಯ ಉಂಟುಮಾಡುವ ಪರಿಸ್ಥಿತಿಯನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೂ ಅಗತ್ಯ ನಿರ್ದೇಶನ ನೀಡಲಾಗುವುದು. ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಮೃತರ ಕುಟುಂಬಗಳಿಗೆ ಕಂಪನಿ ಹಾಗೂ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಡ್ಯಾಂಗಳು ಭರ್ತಿಯಾಗಿದ್ದು, ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬೆಳೆಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ತೊಂದರೆಯಾಗುವುದಿಲ್ಲ ಎಂದು ಸಚಿವರು ತಿಳಿಸಿದರು.

ಅದ್ಧೂರಿ ಸ್ವಾಗತ :

ಮುಡಬೂಳ ಗ್ರಾಮದ ಕ್ರಾಸ್ ಬಳಿ ಸಚಿವ ಶರಣಪ್ರಕಾಶ ಪಾಟೀಲ್ ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಪಟಾಕಿ ಸಿಡಿಸಿ, ಬೃಹತ್ ಹಾರ ಹಾಕುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿದರು.

ಶಹಾಪುರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಮನವಿ :

ಈ ಸಂದರ್ಭದಲ್ಲಿ ಮುಡಬೂಳ ಗ್ರಾಮದ ಅಶೋಕ ಮಲ್ಲಾಬಾದಿ ಅವರು ಶಹಾಪುರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಸಚಿವರಿಗೆ ಮನವಿ ಸಲ್ಲಿಸಿದರು. ಸಮರ್ಪಕ ಮಳೆಯಿಲ್ಲದೆ ಹತ್ತಿ, ತೊಗರಿ ಸೇರಿದಂತೆ ಮುಂಗಾರು ಬೆಳೆಗಳು ತೇವಾಂಶದ ಕೊರತೆಯಿಂದ ಬಾಡಿದ್ದು, ರೈತರು ಎಕರೆಗೆ ಸುಮಾರು 25 ಸಾವಿರ ರೂ. ವೆಚ್ಚ ಮಾಡಿದ್ದರೂ ಭಾರೀ ನಷ್ಟ ಅನುಭವಿಸಿದ್ದಾರೆ. ಆದ್ದರಿಂದ ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರ ನೀಡಬೇಕು ಹಾಗೂ ರೈತರ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ‌ ಮಾಜಿ ಸಚಿವ, ಶಾಸಕ ಶರಣಬಸಪ್ಪ ದರ್ಶನಾಪುರ, ಜಿಲ್ಲಾಧಿಕಾರಿ ಶ್ರೀ ರಾಹುಲ್ ತುಕಾರಾಮ ಪಾಂಡ್ವೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಕೃಷಿ ಜಂಟಿ ನಿರ್ದೇಶಕ ಶ್ರೀ ರತೇಂದ್ರನಾಥ ಸುಗೂರ್, ತಾಲೂಕು ಪಕ್ಷದ ಅಧ್ಯಕ್ಷ ಶಿವಮಾಂತಪ್ಪ ಸಾಹು, ಮುಖಂಡರಾದ ಸಂಗಣ್ಣಗೌಡ ಮಾಲಿಪಾಟೀಲ, ಅಶೋಕ್ ಮಲ್ಲಾಬಾದಿ, ಬಸವರಾಜ ಮುದ್ನೂರ, ಶಾಂತಗೌಡ ಮಾಲಿಪಾಟೀಲ್, ಮಲ್ಲನಗೌಡ ಮಾಲಿಪಾಟೀಲ್, ಬಸವಲಿಂಗಪ್ಪ ಹವಾಲ್ದಾರ್, ಬಸವರಾಜ ಹವಾಲ್ದಾರ್, ಕೃಷ್ಣಪ್ಪ ನಾಯ್ಕೊಡಿ, ಗುರುರಾಜ ಕುಲಕರ್ಣಿ, ಗುರಣ್ಣ ಬಡಕಲ್, ಚನ್ನಬಸಪ್ಪ, ಶ್ರೀಶೈಲಪ್ಪ ಸಾಹು, ಮಲ್ಲಿಕಾರ್ಜುನ ಹೂಸಳ್ಳಿ, ದ್ಯಾವಣ್ಣ ಕುನ್ನೂರು,‌ ಮೈಲಾರಿ ಪೂಜಾರಿ, ವೆಂಕಣ್ಣ ಯಾದವ್, ಹಣಮಂತ ಗಡಂಗ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ರೈತರು ಹಾಗೂ ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News