ಹುಣಸಗಿ | ಕಾರ್ಯಕರ್ತರೇ ಪಕ್ಷದ ನಿಜವಾದ ಶಕ್ತಿ: ರಾಜುಗೌಡ
ಹುಣಸಗಿ: ತಾಲೂಕಿನ ಕಚಕನೂರ, ಕನ್ನೆಳ್ಳಿ, ಮುದನೂರು, ಕರಿಬಾವಿ ಹಾಗೂ ರಾಂಪುರ ಗ್ರಾಮಗಳಿಗೆ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ನರಸಿಂಹನಾಯಕ (ರಾಜುಗೌಡ) ಅವರು ಬುಧವಾರ ಭೇಟಿ ನೀಡಿ, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಆರೋಗ್ಯ ವಿಚಾರಿಸಿದರು.
ಕಾರ್ಯಕರ್ತರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿದ ಅವರು, ಅವರ ಆರೋಗ್ಯ, ಕುಟುಂಬದ ಪರಿಸ್ಥಿತಿ ಹಾಗೂ ಸ್ಥಳೀಯ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜುಗೌಡ, “ಕಾರ್ಯಕರ್ತರೇ ಪಕ್ಷದ ನಿಜವಾದ ಶಕ್ತಿ. ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸುವುದು ನಮ್ಮ ಕರ್ತವ್ಯವಾಗಿದೆ. ಆರೋಗ್ಯವೇ ಜೀವನದ ಬಹುದೊಡ್ಡ ಸಂಪತ್ತು. ಕಾರ್ಯಕರ್ತರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಯಾವುದೇ ಸಮಸ್ಯೆ ಎದುರಾದರೂ ಧೈರ್ಯದಿಂದ ಎದುರಿಸಬೇಕು” ಎಂದು ಸಲಹೆ ನೀಡಿದರು.
ಗ್ರಾಮಗಳ ಭೇಟಿಯ ವೇಳೆ ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜುಗೌಡ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಗ್ರಾಮಗಳ ವಿವಿಧ ಸಮಸ್ಯೆಗಳ ಬಗ್ಗೆಯೂ ಮುಖಂಡರು ಅವರ ಗಮನಕ್ಕೆ ತಂದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಬಸನಗೌಡ ಯಡಿಯಾಪುರ, ಸಿದ್ದನಗೌಡ ಕರಿಬಾವಿ, ಕೃಷ್ಣಾರೆಡ್ಡಿ ಮುದನೂರು ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.