ಕೆಂಭಾವಿ: ಮಕ್ಕಳಲ್ಲಿ ಜ್ಞಾನದ ಜೊತೆಗೆ ಉತ್ತಮ ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಬಿತ್ತಿ, ಸಮಾಜಕ್ಕೆ ಶ್ರೇಷ್ಠ ಪ್ರಜೆಗಳನ್ನು ನೀಡುವ ಶಿಕ್ಷಕರೇ ನಾಡಿನ ನಿಜವಾದ ಶಿಲ್ಪಿಗಳು ಎಂದು ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ನೂರುದ್ದೀನ್ ನಾಸಿ ಹೇಳಿದರು.

ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿಕ್ಷಕರ ವೃತ್ತಿ ಕೇವಲ ಪಾಠ-ಪ್ರವಚನಕ್ಕೆ ಸೀಮಿತವಾಗಿಲ್ಲ. ದೇಶದ ಭವಿಷ್ಯವನ್ನು ಶಾಲೆಯ ತರಗತಿಗಳಲ್ಲಿ ರೂಪಿಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕಿ ತಹೇಸಿನ್ ಬಿ. ನಾಲತವಾಡ ಹಾಗೂ ಸಮಸ್ತ ಶಿಕ್ಷಕ ವೃಂದದವರನ್ನು ಶಾಲು ಹೊದಿಸಿ, ಉಡುಗೊರೆ ನೀಡಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಬಳಿಕ ಶಾಲಾ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಸಮಾರಂಭದಲ್ಲಿ ಎಸ್‌ಡಿಎಂಸಿ ಪದಾಧಿಕಾರಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor