ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಲಭಿಸಿದ ಉಮೇಶ್ ಕೆ.ಮುದ್ನಾಳ್ಗೆ ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರ್ ಸನ್ಮಾನ
ಯಾದಗಿರಿ: ಜನರ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರ ಹೋರಾಟ ನಡೆಸುತ್ತಾ, ಗ್ರಾಮೀಣ ಭಾಗದ ರೈತರು ಹಾಗೂ ವಿವಿಧ ವರ್ಗಗಳ ಜನರ ಪರವಾಗಿ ಧ್ವನಿ ಎತ್ತುತ್ತಿರುವ ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುದ್ನಾಳ ಅವರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ಯಾದಗಿರಿ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ್ ಅವರು ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ್, ಉಮೇಶ್ ಮುದ್ನಾಳ ಅವರು ಹಲವು ವರ್ಷಗಳಿಂದ ರೈತರು, ಬಡವರು ಹಾಗೂ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದಾರೆ. ಸಾಮಾಜಿಕ ನ್ಯಾಯ, ಸಾರ್ವಜನಿಕ ಹಿತಾಸಕ್ತಿ ಮತ್ತು ಮೂಲಭೂತ ಸೌಲಭ್ಯಗಳಿಗಾಗಿ ಅವರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ನೀಡಿರುವುದು ಯಾದಗಿರಿ ಜಿಲ್ಲೆಗೆ ಹೆಮ್ಮೆಯ ಸಂಗತಿ ಎಂದು ಹೇಳಿದರು.
ಜನರ ಧ್ವನಿಯಾಗಿ ನಿಂತು ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಅವರು ತೋರಿದ ಸಾಮಾಜಿಕ ಕಾಳಜಿ ಶ್ಲಾಘನೀಯವಾಗಿದ್ದು, ಇಂತಹ ಪ್ರಶಸ್ತಿಗಳು ಸಮಾಜಸೇವಕರಿಗೆ ಮತ್ತಷ್ಟು ಪ್ರೇರಣೆ ನೀಡಲಿವೆ ಎಂದು ಶಾಸಕರು ಅಭಿಪ್ರಾಯಪಟ್ಟರು.
ಸನ್ಮಾನ ಸ್ವೀಕರಿಸಿದ ಉಮೇಶ್ ಕೆ. ಮುದ್ನಾಳ ಮಾತನಾಡಿ, ಈ ಪ್ರಶಸ್ತಿ ತಮ್ಮ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದ್ದು, ಜನರು ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಂಡು ಯಾವುದೇ ಪಕ್ಷಪಾತವಿಲ್ಲದೆ ಜನಸೇವೆಯನ್ನು ಮುಂದುವರಿಸುತ್ತೇನೆ ಎಂದು ತಿಳಿಸಿದರು. ರೈತರು, ಬಡವರು ಹಾಗೂ ಎಲ್ಲಾ ವರ್ಗದ ಜನರ ಸಮಸ್ಯೆಗಳ ಪರಿಹಾರಕ್ಕಾಗಿ ಮುಂದೆಯೂ ನಿರಂತರ ಹೋರಾಟ ನಡೆಸುವ ಸಂಕಲ್ಪ ವ್ಯಕ್ತಪಡಿಸಿದರು.