ಹದಗೆಟ್ಟ ಬೀದರ್–ಶ್ರೀರಂಗಪಟ್ಟಣ ಹೆದ್ದಾರಿ ದುರಸ್ತಿಗೆ ಕ್ರಮಕ್ಕೆ ಶಾಸಕರ ಮನವಿ
ಸುರಪುರ: ಬೀದರ್–ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯ ಹತ್ತಿಗುಡೂರಿನಿಂದ ತಿಂಥಣಿ ಬ್ರಿಡ್ಜ್ವರೆಗಿನ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ತುರ್ತಾಗಿ ದುರಸ್ತಿ ಕಾಮಗಾರಿ ಆರಂಭಿಸುವಂತೆ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವರಿಗೆ ರಸ್ತೆ ಸಮಸ್ಯೆಯ ಕುರಿತು ವಿವರಿಸಿದ ಶಾಸಕರು, ಹೆದ್ದಾರಿ ಹದಗೆಟ್ಟಿರುವುದರಿಂದ ಪದೇಪದೇ ಅಪಘಾತಗಳು ಸಂಭವಿಸಿ ಸಾವು-ನೋವುಗಳು ಉಂಟಾಗುತ್ತಿವೆ. ಈಗಾಗಲೇ ರಸ್ತೆ ದುರಸ್ತಿ ಕಾಮಗಾರಿಗೆ ಟೆಂಡರ್ ಕರೆಯಲಾಗಿದ್ದರೂ ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಇದರಿಂದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು.
ಹತ್ತಿಗುಡೂರಿನಿಂದ ತಿಂಥಣಿ ಬ್ರಿಡ್ಜ್ವರೆಗಿನ ರಸ್ತೆ ದುರಸ್ತಿಯನ್ನು ವಿಳಂಬ ಮಾಡದೇ ತಕ್ಷಣ ಆರಂಭಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಶಾಸಕರು ಸಚಿವರಲ್ಲಿ ಮನವಿ ಮಾಡಿದರು.
ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಸತೀಶ ಜಾರಕಿಹೊಳಿ ಅವರು, ಸ್ಥಳದಲ್ಲಿಯೇ ಹೆದ್ದಾರಿ ನಿಗಮದ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಕಾಮಗಾರಿಯನ್ನು ಅತಿ ಶೀಘ್ರದಲ್ಲಿ ಆರಂಭಿಸುವಂತೆ ಸೂಚನೆ ನೀಡಿದರು ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ತಿಳಿಸಿದ್ದಾರೆ.