ಜನಪರ ಹಾಗೂ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ರಾಜ್ಯ ಬಜೆಟ್: ಬಾಬುರಾವ್ ಚಿಂಚನಸೂರ್
ಯಾದಗಿರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಹುನಿರೀಕ್ಷಿತ ರಾಜ್ಯ ಬಜೆಟ್ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ಜನರ ಅಗತ್ಯಗಳನ್ನು ಸೂಕ್ಷ್ಮವಾಗಿ ಪರಿಗಣಿಸಿ ರೂಪಿಸಲಾಗಿದೆ ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಹೇಳಿದ್ದಾರೆ.
ಬಜೆಟ್ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ರಾಜ್ಯದ ಎಲ್ಲಾ ವರ್ಗಗಳು, ಎಲ್ಲ ಪ್ರದೇಶಗಳು ಹಾಗೂ ವಿವಿಧ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಿರುವುದು ಐತಿಹಾಸಿಕ ಕ್ರಮವಾಗಿದೆ ಎಂದು ಅಭಿಪ್ರಾಯಪಟ್ಟರು.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮೂಲಕ ಯಾದಗಿರಿ ಜಿಲ್ಲೆಯ ಕಕ್ಕೇರಾ ಗ್ರಾಮದಲ್ಲಿ 18 ಕೋಟಿ ರೂ. ವೆಚ್ಚದಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜು ಸ್ಥಾಪಿಸಲು ನಿರ್ಧರಿಸಿರುವುದು ಶಿಕ್ಷಣ ಕ್ಷೇತ್ರಕ್ಕೆ ಉತ್ತೇಜನ ನೀಡಲಿದೆ ಎಂದು ಹೇಳಿದರು.
ಇದರ ಜೊತೆಗೆ ಯಾದಗಿರಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಬಜೆಟ್ನಲ್ಲಿ ಘೋಷಣೆ ಮಾಡಿರುವುದು ಜಿಲ್ಲೆಯ ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಅವರು ತಿಳಿಸಿದರು.
ರಾಜ್ಯದ ನಗರಗಳ ಸ್ವಚ್ಛತೆ ಹಾಗೂ ಮೂಲಸೌಕರ್ಯ ಸುಧಾರಣೆಗೆ ಒತ್ತು ನೀಡಲಾಗಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ಯಾದಗಿರಿ ಹಾಗೂ ಸುರಪುರ ಪಟ್ಟಣಗಳಲ್ಲಿ ಒಳಚರಂಡಿ ಕಾಮಗಾರಿಗಳನ್ನು ಕೈಗೊಳ್ಳುವುದು. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ಯಾದಗಿರಿ ಜಿಲ್ಲೆಯಲ್ಲಿ ನಾಲ್ಕು ಕೋಟಿ ರೂ. ವೆಚ್ಚದಲ್ಲಿ ತಾರಾಲಯ ಸ್ಥಾಪಿಸಲು ಸರ್ಕಾರ ಮುಂದಾಗಿದೆ ಎಂದು ಅವರು ತಿಳಿಸಿದರು.
ಯಾದಗಿರಿ ಜಿಲ್ಲೆಯ ಕರ್ನಾಳ್ ಏತ ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿರುವುದು ಹಾಗೂ ಸಣ್ಣ ನೀರಾವರಿ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡಿರುವುದು ರೈತರಿಗೆ ಅನುಕೂಲವಾಗಲಿದೆ. ಕಕ್ಕೇರಾ ಪಟ್ಟಣದಲ್ಲಿ ಹೊಸ ಪೊಲೀಸ್ ಠಾಣೆ ಆರಂಭಿಸುವ ನಿರ್ಧಾರ ಕೈಗೊಂಡಿರುವುದು ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ಹೇಳಿದರು.
ಇದಲ್ಲದೆ ಶಹಾಪುರ, ಸುರಪುರ ಹಾಗೂ ಗುರುಮಠಕಲ್ ತಾಲೂಕುಗಳಲ್ಲಿ 6ರಿಂದ 12ನೇ ತರಗತಿ ವರೆಗೆ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ 2025–26ನೇ ಸಾಲಿನಲ್ಲಿ ಶ್ರಮಿಕ ವಸತಿ ಶಾಲೆಗಳನ್ನು ಬಜೆಟ್ ನಲ್ಲಿ ಅನುಮೋದಿಸಲಾಗಿದೆ ಎಂದು ತಿಳಿಸಿದರು.
ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಲಾಗಿದ್ದು, 3,900 ಕೋಟಿ ರೂಪಾಯಿ ಅನುದಾನದಲ್ಲಿ ‘ಉತ್ತಮ ಕಲಿಕೆ–ಉಜ್ವಲ ಭವಿಷ್ಯ’ ಯೋಜನೆಯಡಿ ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸುವ ಯೋಜನೆ ರೂಪಿಸಲಾಗಿದೆ. ಇದರ ಮೂಲಕ ಗುಣಮಟ್ಟದ ಶಿಕ್ಷಣ ಒದಗಿಸುವಲ್ಲಿ ಸರ್ಕಾರ ಹೊಸ ಮೈಲಿಗಲ್ಲು ಸ್ಥಾಪಿಸಲು ಬದ್ಧವಾಗಿದೆ ಎಂದು ಅವರು ಹೇಳಿದರು.
ರಾಜ್ಯದ ಕಟ್ಟಕಡೆಯ ವ್ಯಕ್ತಿಯ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಜನಪರ ಬಜೆಟ್ ಮಂಡಿಸಿದೆ ಎಂದು ಬಾಬುರಾವ್ ಚಿಂಚನಸೂರ್ ಅಭಿಪ್ರಾಯಪಟ್ಟರು.