ಪಠ್ಯದ ಜೊತೆಗೆ ಕ್ರೀಡೆಗೂ ಆದ್ಯತೆ ನೀಡಿ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು
ಯಾದಗಿರಿ : ವಿದ್ಯಾರ್ಥಿಗಳು ನಾಲ್ಕು ಗೋಡೆಗಳ ನಡುವೆ ಪಾಠಕ್ಕೆ ಮಾತ್ರ ಸೀಮಿತವಾಗದೆ, ಶಿಕ್ಷಣದ ಜೊತೆಗೆ ಕ್ರೀಡೆಗೂ ಸಮಾನ ಆದ್ಯತೆ ನೀಡಬೇಕು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಜವಾಹರ ಸಂಯುಕ್ತ ಪದವಿ ಪೂರ್ವ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ 2026–27ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕ್ರೀಡೆ ದೇಹದ ಆರೋಗ್ಯ, ಆತ್ಮವಿಶ್ವಾಸ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಪ್ರಮುಖ ಸಾಧನವಾಗಿದೆ. ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಕರೆ ನೀಡಿದರು.
ಪುಸ್ತಕದ ಜ್ಞಾನ ಮಾತ್ರ ಸಾಕಾಗುವುದಿಲ್ಲ. ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಅಗತ್ಯವಾಗಿವೆ. ಸದೃಢ ದೇಹದಲ್ಲೇ ಸದೃಢ ಮನಸ್ಸು ನೆಲೆಸಿರುತ್ತದೆ. ವಿದ್ಯಾರ್ಥಿಗಳು ದೈಹಿಕವಾಗಿ ಸಬಲರಾಗಲು ಹಾಗೂ ವಿವಿಧ ಮಟ್ಟದ ಪ್ರಶಸ್ತಿಗಳನ್ನು ಗೆಲ್ಲಲು ಸರ್ಕಾರ ಕ್ರೀಡಾಕೂಟಗಳನ್ನು ಆಯೋಜಿಸಿ ಪ್ರೋತ್ಸಾಹಿಸುತ್ತಿದೆ ಎಂದು ಹೇಳಿದರು.
ಕ್ರೀಡೆ ಶಿಕ್ಷಣದ ಅವಿಭಾಜ್ಯ ಅಂಗವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದಲ್ಲೊಂದು ಪ್ರತಿಭೆ ಅಡಗಿದ್ದು, ಅದನ್ನು ಗುರುತಿಸಿ ಬೆಳೆಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಅವರು ತಿಳಿಸಿದರು.
ಅಂತರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಗೆಲ್ಲುವ ಗುರಿ ಹೊಂದಬೇಕು. ಕ್ರೀಡೆಯಲ್ಲಿ ಸೋಲು–ಗೆಲುವು ಸಹಜ. ಗೆದ್ದವರು ವಿನಯದಿಂದ ಇರಬೇಕು, ಸೋತವರು ಹತಾಶರಾಗದೆ ಮುಂದಿನ ಬಾರಿ ಗೆಲುವಿನತ್ತ ಪ್ರಯತ್ನಿಸಬೇಕು ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಯುಡಾ ಅಧ್ಯಕ್ಷ ಬಾಬುರಾವ ಕಾಡ್ಲೂರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುದೀಪ್ ಟಿ.ಸಿ.,ವಿವಿಧ ಕಾಲೇಜುಗಳ ಪ್ರಾಚಾರ್ಯರಾದ ರುದ್ರಗೌಡ ಮಾಲಿಪಾಟೀಲ್, ಮಲ್ಲಣ್ಣಗೌಡ ಪಾಟೀಲ್, ಶರಣಪ್ಪ ರಾಹುಲ್,ದಶರಥ ಕೆ., ಶ್ರೀಶೈಲ್, ಓಂಕಾರರೆಡ್ಡಿ, ಜಿ.ಎಸ್ ವಿಶ್ವಕರ್ಮ ಮತ್ತು ಮಹಾಂತೇಶ ಕಲಾಲ, ಡಾ.ರವೀಂದ್ರನಾಥ ಹೊಸಮನಿ ಭಾಗವಹಿಸಿದ್ದರು.