×
Ad

ಸೈದಾಪುರ | ದಲಿತರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: ಎಸ್‌ಪಿ ಪೃಥ್ವಿಕ್ ಶಂಕರ್

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆಗಳ ಸಭೆ

Update: 2026-05-16 18:12 IST

ಸೈದಾಪುರ: ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮೇಲಿನ ದೌರ್ಜನ್ಯಗಳು, ಆರ್ಥಿಕ ಹಾಗೂ ಸಾಮಾಜಿಕ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರ ನೀಡುವುದೇ ಕುಂದುಕೊರತೆ ಸಭೆಯ ಪ್ರಮುಖ ಉದ್ದೇಶವಾಗಿದೆ ಎಂದು ಪೃಥ್ವಿಕ್ ಶಂಕರ್ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ದಲಿತರ ಮೇಲಿನ ದೌರ್ಜನ್ಯಗಳನ್ನು ತಡೆಯಲು ಪ್ರತಿ ತಿಂಗಳು ಜನರ ಬಳಿ ನೇರವಾಗಿ ತೆರಳಿ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡಲಾಗುತ್ತಿದೆ ಎಂದರು.

ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರೆ ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದು ತಕ್ಷಣ ಸ್ಪಂದಿಸುವಂತೆ ಸೂಚಿಸಲಾಗುವುದು. ಕಾನೂನು ಕ್ರಮ ಅಗತ್ಯವಿದ್ದರೆ ಅದನ್ನೂ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

“ಯಾರ ಭಯದಲ್ಲೂ ಬದುಕಬೇಡಿ. ಪ್ರತಿಯೊಬ್ಬರಿಗೂ ತಮ್ಮ ಆಸಕ್ತಿ ಮತ್ತು ಆದಾಯಕ್ಕೆ ಅನುಗುಣವಾಗಿ ಸ್ವತಂತ್ರ ಹಾಗೂ ನ್ಯಾಯಯುತ ಜೀವನ ಸಾಗಿಸುವ ಹಕ್ಕನ್ನು ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ನೀಡಿದ್ದಾರೆ. ಆದ್ದರಿಂದ ಇಂತಹ ಸಭೆಗಳಲ್ಲಿ ಭಾಗವಹಿಸಿ ನಿಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಹೇಳಬೇಕು” ಎಂದು ಸಲಹೆ ನೀಡಿದರು.

ದೌರ್ಜನ್ಯ ಸಲಹಾ ಸಮಿತಿಯ ಸದಸ್ಯ ಮರೆಪ್ಪ ಚಟ್ಟೇರಕರ್ ಮಾತನಾಡಿ, ಸಮಾಜದಲ್ಲಿ ಎಲ್ಲರೂ ಸಮಾನರು. ಮೇಲು-ಕೀಳು ಭಾವನೆ ಇರಬಾರದು. ದಲಿತರ ಹಕ್ಕುಗಳಿಗಾಗಿ ಅಂಬೇಡ್ಕರ್ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ ಎಂದು ಹೇಳಿದರು.

ಸಭೆಯಲ್ಲಿ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ಪರಿಶೀಲನೆ, ಜಮೀನು ಸಮಸ್ಯೆಗಳು, ಅಂಬೇಡ್ಕರ್ ಭವನ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯಗಳ ಕುರಿತು ಚರ್ಚೆ ನಡೆಯಿತು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕ ಚೆನ್ನಬಸಪ್ಪ, ಡಿವೈಎಸ್ಪಿ ಸುರೇಶ, ಪಿಐ ರಾಜಶೇಖರ ಹಳಿಗೇರಾ, ಶಿವಾನಂದ ಎಂ.ಮರಡಿ, ಪಿಎಸ್ಐ ಭೀಮರಾಯ ಕೂಡ್ಲೂರು, ಪೇದೆ ರಾಜಕುಮಾರ್ , ಕಂದಾಯ ಇಲಾಖೆಯ ಉಪ ತಹಶೀಲ್ದಾರ್ ದಸ್ತಗಿರಿ ನಾಯಕ, ಪಿಡಿಓ ವಿಜಯಲಕ್ಷ್ಮೀ ಸೇರಿದಂತೆ ವಿವಿಧ ಗ್ರಾಮಗಳ ಸಾರ್ವಜನಿಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News