ಶಹಾಪುರ | ದೆಹಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೆ; ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

Update: 2026-07-24 21:44 IST

ಶಹಾಪುರ: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಯುವಜನರ ಮೇಲೆ ನಡೆದಿರುವ ಲಾಠಿಚಾರ್ಜ್ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸಮಾನ ಮನಸ್ಕರ ವೇದಿಕೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಗುರುವಾರ ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಸಿದ್ದಾರೂಢ ಬನ್ನಿಕಪ್ಪ ಅವರಿಗೆ ಮನವಿ ಸಲ್ಲಿಸಿದರು.

ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ತ್ರಿವರ್ಣ ಧ್ವಜ ಹಿಡಿದು ನಗರದ ತಹಶೀಲ್ದಾರ್ ಕಚೇರಿ ಎದುರು ಜಮಾಯಿಸಿ, ಬೀದರ್–ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಯುವಕರ ಮೇಲೆ ಲಾಠಿಚಾರ್ಜ್ ನಡೆಸಿರುವುದನ್ನು ಖಂಡಿಸಿದರು.

ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರಜಾಪ್ರಭುತ್ವದಲ್ಲಿ ಸರ್ಕಾರವನ್ನು ಪ್ರಶ್ನಿಸುವುದು ಮತ್ತು ಜನವಿರೋಧಿ ನೀತಿಗಳನ್ನು ವಿರೋಧಿಸುವುದು ಪ್ರತಿಯೊಬ್ಬ ನಾಗರಿಕನ ಹಕ್ಕಾಗಿದೆ. ನ್ಯಾಯಯುತ ಬೇಡಿಕೆಗಳಿಗಾಗಿ ಹೋರಾಟ ನಡೆಸುತ್ತಿರುವ ಯುವಕರ ಧ್ವನಿಯನ್ನು ಲಾಠಿ ಮೂಲಕ ಹತ್ತಿಕ್ಕುವ ಪ್ರಯತ್ನ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕಳೆದ ಹಲವು ದಿನಗಳಿಂದ ನಿರಂತರವಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳೊಂದಿಗೆ ಸರ್ಕಾರ ಸಂವಾದ ನಡೆಸದಿರುವುದು ಜನರ ಭಾವನೆಗಳಿಗೆ ಸ್ಪಂದಿಸದಿರುವುದನ್ನು ತೋರಿಸುತ್ತದೆ. ಯುವಜನರ ಧ್ವನಿಯನ್ನು ನಿರ್ಲಕ್ಷಿಸುವ ಸರ್ಕಾರಕ್ಕೆ ಉಳಿಗಾಲವಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ವೇದಿಕೆ ಮುಖಂಡರಾದ ಗಿರೆಪ್ಪಗೌಡ ಬಾಣತಿಹಾಳ, ಚೆನ್ನಪ್ಪ ಆನೇಗುಂದಿ, ಆರ್.ಚೆನ್ನಬಸ್ಸು ವನದುರ್ಗ, ಮಲ್ಲಿಕಾರ್ಜುನ ಪೂಜಾರಿ, ಭೀಮಣ್ಣ ಮೇಟಿ, ಹನುಮೇಗೌಡ ಮರಕಲ್, ಸಾಲೋಮನ್ ಆಲಫ್ರೇಡ್, ಸಯ್ಯದ ಖಾಲಿದ ಹುಸೇನ, ಅಯ್ಯಣ್ಣ ಕನ್ಯಾಕೊಳ್ಳುರ, ಶ್ರೀಶೈಲ್ ಹೊಸಮನಿ, ಸಯ್ಯದ ಸದುದ್ದೀನ ಖಾದ್ರಿ, ಶೇಖರ ದೊರೆ,ವಕೀಲರ ಸಂಘದ ಅಧ್ಯಕ್ಷ ಯೂಸೂಫ್ ಸಿದ್ದಿಕಿ,ನಯಿಮ್ ಅಫ್ಘನ್, ಸಯ್ಯದ ಚಾಂದಪಾಶ,ಎಸ್.ಎಂ.ಸಾಗರ, ರಾಜು ಅಣಬಿ, ನಾಗಣ್ಣ ಬಡಿಗೇರ, ಹೊನ್ನಪ್ಪ ಗಂಗನಾಳ, ಅಬ್ದುಲ ಬಾಷ ಶಿರವಾಳ, ಚಂದ್ರಶೇಖರ ಯಾದವ, ಭೀಮರಾಯ ತಳವಾರ, ಎಂಡಿ.ವಮಹಿಬೂಬ, ತಲಕ ಚಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News