ಸುರಪುರ | ಶಖಾಪುರ ದಲಿತ ಹಲ್ಲೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಸ್ವಾತಂತ್ರ್ಯ ದಿನ ಸಚಿವರಿಗೆ ಘೇರಾವ್ ಎಚ್ಚರಿಕೆ

Update: 2026-08-12 19:25 IST

ಸುರಪುರ: ಶಖಾಪುರ ಎಸ್‌.ಎಚ್‌ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ನಡೆದು 12 ದಿನ ಕಳೆದರೂ ಆರೋಪಿಗಳನ್ನು ಬಂಧಿಸಿಲ್ಲ. ಸಚಿವರು ಹಾಗೂ ಜನಪ್ರತಿನಿಧಿಗಳು ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿಲ್ಲ ಎಂದು ಆರೋಪಿಸಿ, ಸ್ವಾತಂತ್ರ್ಯ ದಿನಾಚರಣೆಗೆ ಯಾದಗಿರಿಗೆ ಧ್ವಜಾರೋಹಣಕ್ಕೆ ಆಗಮಿಸುವ ಸಚಿವರಿಗೆ ಘೇರಾವ್ ಹಾಕುವುದಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣ ಎಚ್ಚರಿಕೆ ನೀಡಿದೆ.

ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂಘಟನೆಯ ರಾಜ್ಯ ಸಂಚಾಲಕ ಅರ್ಜುನ ಭದ್ರೆ, ಶಖಾಪುರ ಎಸ್‌.ಎಚ್‌ ಗ್ರಾಮದಲ್ಲಿ ದಲಿತರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಆರೋಪಿಗಳನ್ನು ಕೂಡಲೇ ಬಂಧಿಸಿ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಸಚಿವ ಶರಣಪ್ರಕಾಶ ಪಾಟೀಲರು ಇತ್ತೀಚೆಗೆ ಬರ ಅಧ್ಯಯನಕ್ಕಾಗಿ ವಣಕಿಹಾಳ ಹಾಗೂ ಖಾನಾಪುರ ಎಸ್‌.ಎಚ್‌ ಗ್ರಾಮಗಳಿಗೆ ಭೇಟಿ ನೀಡಿದ್ದರು. ಆದರೆ ಸಮೀಪದಲ್ಲಿರುವ ಶಖಾಪುರ ಎಸ್‌.ಎಚ್‌ ಗ್ರಾಮಕ್ಕೆ ತೆರಳಿ ಹಲ್ಲೆಗೊಳಗಾದ ದಲಿತ ಕುಟುಂಬಗಳಿಗೆ ಸಾಂತ್ವನ ಹೇಳದಿರುವುದು ಖಂಡನೀಯ ಎಂದು ಅವರು ಹೇಳಿದರು.

ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, ಮಹಿಳೆಯೊಬ್ಬರ ಶವ ಹೂಳಲು ಗುಂಡಿ ತೋಡುವಂತೆ ಹೇಳಿದಾಗ ದೇವಪ್ಪ ನಿರಾಕರಿಸಿದ್ದರಿಂದ ಅವರ ಹಾಗೂ ಕುಟುಂಬದ ಸದಸ್ಯರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ ಎಂದು ಆರೋಪಿಸಿದರು. ದೇವಪ್ಪ, ಅವರ ಪತ್ನಿ ಸೇರಿದಂತೆ ಐವರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಮಹಿಳೆಯ ಸಾವಿಗೆ ಕಾರಣವೇನು ಎಂಬುದನ್ನೂ ಪೊಲೀಸರು ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಈ ಕುರಿತು ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೆ ಆರೋಪಿಗಳನ್ನು ಬಂಧಿಸಬೇಕು. ಇಲ್ಲವಾದರೆ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಗೃಹ ಸಚಿವರ ಗಮನಕ್ಕೂ ಪ್ರಕರಣವನ್ನು ತರಲಾಗಿದೆ. ಆದರೂ ಅವರು ಗ್ರಾಮಕ್ಕೆ ಭೇಟಿ ನೀಡದಿರುವುದು ಹಾಗೂ ಯಾವುದೇ ಕ್ರಮ ಕೈಗೊಳ್ಳದಿರುವುದು ನೋವಿನ ಸಂಗತಿ. ಕೂಡಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಂತ್ರಸ್ತ ದಲಿತರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಮುಖಂಡ ಮಾನು ಗುರಿಕಾರ ಮಾತನಾಡಿ, ಚುನಾವಣೆಯ ಸಂದರ್ಭದಲ್ಲಿ ದಲಿತ ಸಂಘಟನೆಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದವು. ಆದರೆ ಇದೀಗ ದಲಿತರ ಮೇಲೆ ಹಲ್ಲೆ ನಡೆದಾಗ ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಖಾಪುರ ಎಸ್‌.ಎಚ್‌ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸದಿದ್ದರೆ, ಸ್ವಾತಂತ್ರ್ಯ ದಿನಾಚರಣೆಯಂದು ಯಾದಗಿರಿಗೆ ಧ್ವಜಾರೋಹಣಕ್ಕೆ ಆಗಮಿಸುವ ಸಚಿವರಿಗೆ ಘೇರಾವ್ ಹಾಕಿ ಪ್ರತಿಭಟಿಸಲಾಗುವುದು ಎಂದು ಅವರು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಚಂದ್ರಶೇಖರ ಕಟ್ಟಿಮನಿ, ಮೂರ್ತಿ ಬೊಮ್ಮನಹಳ್ಳಿ, ಬಸವರಾಜ ದೊಡ್ಡಮನಿ, ಮರೆಪ್ಪ ಕಾಂಗ್ರೆಸ್, ರಾಮಚಂದ್ರ ವಾಗಣಗೇರಿ, ರಾಜು ಶಖಾಪುರ, ಗಾಯಾಳು ದೇವಪ್ಪ, ಗಂಗಮ್ಮ, ಮಲ್ಲಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News