ಸುರಪುರ | ನಕಲಿ ಪಿಎಚ್‌ಡಿ ಪ್ರಮಾಣ ಪತ್ರ ಸಲ್ಲಿಸಿ ಸೇವೆಗೆ ಸೇರಿರುವ ಆರೋಪ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ

Update: 2026-08-11 19:49 IST

ಸುರಪುರ: ಸರ್ಕಾರಿ ಪದವಿ ಕಾಲೇಜುಗಳಲ್ಲಿ ನಕಲಿ ಪಿಎಚ್‌ಡಿ ಪ್ರಮಾಣ ಪತ್ರಗಳನ್ನು ಸಲ್ಲಿಸಿ ಅತಿಥಿ ಉಪನ್ಯಾಸಕರಾಗಿ ಸೇವೆಗೆ ಸೇರಿರುವ ಆರೋಪದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಡಿ.ಜಿ. ಸಾಗರ ಬಣದ ವತಿಯಿಂದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗ ಹಸನಾಪುರ ಮಾತನಾಡಿ, ರಾಜ್ಯದಲ್ಲಿ ಸುಮಾರು 285 ಮಂದಿ ಅತಿಥಿ ಉಪನ್ಯಾಸಕರು ನಕಲಿ ಪಿಎಚ್‌ಡಿ ಪ್ರಮಾಣ ಪತ್ರಗಳನ್ನು ಸಲ್ಲಿಸಿ ಪದವಿ ಕಾಲೇಜುಗಳಲ್ಲಿ ಸೇವೆಗೆ ಸೇರಿರುವುದು ಕಾಲೇಜು ಶಿಕ್ಷಣ ಇಲಾಖೆ ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ ಎಂದು ಹೇಳಿದರು.

ಅತಿಥಿ ಉಪನ್ಯಾಸಕರ ದಾಖಲೆಗಳನ್ನು ಪರಿಶೀಲಿಸಲು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಎಸ್‌ಒಪಿ ಸಮಿತಿ ರಚಿಸಿ ಪ್ರಮಾಣ ಪತ್ರಗಳನ್ನು ಪರಿಶೀಲಿಸಲಾಗಿದೆ. ಆದರೂ ಕೆಲವು ಕಾಲೇಜುಗಳ ಪ್ರಾಂಶುಪಾಲರು ಆಮಿಷಕ್ಕೆ ಒಳಗಾಗಿ ನಕಲಿ ಪ್ರಮಾಣ ಪತ್ರಗಳಿದ್ದರೂ ಅವುಗಳನ್ನು ಬಹಿರಂಗಪಡಿಸದೆ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ ಎಂದು ಹೇಳಿದರು.

ಆದ್ದರಿಂದ ಕಾಲೇಜು ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರ ಪಿಎಚ್‌ಡಿ ಹಾಗೂ ಎಂಫಿಲ್ ಪ್ರಮಾಣ ಪತ್ರಗಳನ್ನು ಮತ್ತೊಮ್ಮೆ ಸಮಗ್ರವಾಗಿ ಪರಿಶೀಲಿಸಬೇಕು. ನಕಲಿ ಪ್ರಮಾಣ ಪತ್ರಗಳನ್ನು ಸಲ್ಲಿಸಿರುವುದು ದೃಢಪಟ್ಟರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಹಿಂದಿನ ವರ್ಷಗಳಲ್ಲಿಯೇ ಅಕ್ರಮದ ಬಗ್ಗೆ ಮಾಹಿತಿ ಇದ್ದರೂ ಅದನ್ನು ಮರೆಮಾಚಿರುವ ಪ್ರಾಂಶುಪಾಲರ ವಿರುದ್ಧವೂ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.

ಯುಜಿಸಿ ಮಾನ್ಯತೆಯ ಹೆಸರಿನಲ್ಲಿ ನೇಮಕಗೊಂಡಿರುವ ಉಪನ್ಯಾಸಕರ ಪಿಎಚ್‌ಡಿ ಪ್ರಮಾಣ ಪತ್ರಗಳ ಬಗ್ಗೆಯೂ ಸರ್ಕಾರ ಪ್ರತ್ಯೇಕ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ನಂತರ ಮುಖ್ಯಮಂತ್ರಿ, ಕಾಲೇಜು ಶಿಕ್ಷಣ ಇಲಾಖೆಯ ಸಚಿವರು ಹಾಗೂ ಗೃಹ ಸಚಿವರಿಗೆ ಬರೆದ ಮನವಿಯನ್ನು ತಹಶೀಲ್ದಾರ್ ಕಚೇರಿಯ ಸಿರಸ್ತೆದಾರರ ಮೂಲಕ ಸಲ್ಲಿಸಲಾಯಿತು.

ಪ್ರಾಂಶುಪಾಲರಿಗೆ ಮನವಿ :

ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ನಕಲಿ ಪಿಎಚ್‌ಡಿ ಪ್ರಮಾಣ ಪತ್ರ ಸಲ್ಲಿಸಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರ ದಾಖಲೆಗಳನ್ನು ಸಮರ್ಪಕವಾಗಿ ಪರಿಶೀಲಿಸಬೇಕು. ನಕಲಿ ಪ್ರಮಾಣ ಪತ್ರ ಸಲ್ಲಿಸಿರುವುದು ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಡಿಎಸ್‌ಎಸ್ ಮುಖಂಡರು ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಉಪ ವಿಭಾಗಿಯ ಸಂಚಾಲಕ ರಮೇಶ ಬಡಿಗೇರ,ತಾಲೂಕ ಸಂಚಾಲಕ ತಿಪ್ಪಣ್ಣ ಶೆಳ್ಳಗಿ, ಎಮ್.ಪಟೇಲ್, ಚನ್ನಬಸಪ್ಪ ತಳವಾರ, ವೆಂಕಟೇಶ ದೇವಪುರ, ಶೇಖರ ಮಂಗಳೂರ, ರಾಜು ಬಡಿಗೇರ, ಖಾಜಾ ಅಜ್ಮೀರ ಖುರೇಷಿ, ಪಾರಪ್ಪ ದೇವತ್ಕಲ್, ಮೌನೇಶ ದೇವತ್ಕಲ್, ಹಣಮಂತ ರತ್ತಾಳ, ದೇವು ಬಡಿಗೇರ, ಯಲ್ಲಪ್ಪ ರತ್ತಾಳ, ಹಣಮಂತ ದೊಡ್ಡಮನಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News