ಸುರಪುರ | ಗುಣಮಟ್ಟದ ರಸ್ತೆ, ಚರಂಡಿ ನಿರ್ಮಾಣಕ್ಕೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ
ಕಳಪೆ ಕಾಮಗಾರಿ ಆರೋಪ; ಜಿಲ್ಲಾಧಿಕಾರಿಗಳಿಗೆ ಮನವಿ
ಸುರಪುರ: ಪಟ್ಟಣದ ಸರ್ಕಾರಿ ಬಾಲಕರ ಪ್ರೌಢಶಾಲೆಯ ಹಿಂಭಾಗದಲ್ಲಿರುವ ರಸ್ತೆಯನ್ನು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಿ, ರಸ್ತೆ ಬದಿಯಲ್ಲಿ ಚರಂಡಿ ಕಾಮಗಾರಿ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ವತಿಯಿಂದ ಬುಧವಾರ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ, ಸರ್ಕಾರಿ ಬಾಲಕರ ಪ್ರೌಢಶಾಲೆಯ ಹಿಂಭಾಗದಲ್ಲಿರುವ ಸಾಹೇಬಣ್ಣ ಅಂಗಡಿಯಿಂದ ಬುಧವಾರದವರೆಗೆ ಕನಿಷ್ಠ 15ರಿಂದ 20 ಅಡಿ ಅಗಲದ ಸಿಸಿ ರಸ್ತೆ ನಿರ್ಮಿಸಬೇಕು. ರಸ್ತೆ ಎರಡೂ ಬದಿಗಳಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಈ ಹಿಂದೆ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಈ ರಸ್ತೆಗೆ ಅನುದಾನ ಮಂಜೂರು ಮಾಡಿದ್ದರು. ಆದರೆ ಪ್ರಸ್ತುತ ನಡೆಯುತ್ತಿರುವ ಕಾಮಗಾರಿ ಅದೇ ಅನುದಾನದಲ್ಲಿ ನಡೆಯುತ್ತಿದೆಯೇ ಎಂಬ ಕುರಿತು ಯಾವುದೇ ಮಾಹಿತಿ ನೀಡಲಾಗುತ್ತಿಲ್ಲ. ನಿರ್ಮಿತಿ ಕೇಂದ್ರ ಹಾಗೂ ಕರ್ನಾಟಕ ಭೂಸೇನಾ ನಿಗಮಕ್ಕೆ ಕಾಮಗಾರಿ ನೀಡಲಾಗಿದ್ದು, ನಿರ್ಮಿತಿ ಕೇಂದ್ರದಿಂದ ನಡೆಯುತ್ತಿರುವ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು, ಚರಂಡಿಯನ್ನೂ ನಿರ್ಮಿಸಲಾಗಿಲ್ಲ ಎಂದು ಆರೋಪಿಸಿದರು.
ಅಂಬೇಡ್ಕರ್ ನಗರ ಸೇರಿದಂತೆ ಇತರೆ ಪ್ರದೇಶಗಳಲ್ಲಿಯೂ ರಸ್ತೆ ನಿರ್ಮಾಣ ಅಗತ್ಯವಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬಳಿಕ ಜಿಲ್ಲಾಧಿಕಾರಿಗಳಿಗೆ ಉದ್ದೇಶಿಸಿದ ಮನವಿ ಪತ್ರವನ್ನು ನಿರ್ಮಿತಿ ಕೇಂದ್ರದ ಕಿರಿಯ ಅಭಿಯಂತರ ಪವನ್ ನಾಗನಹಳ್ಳಿ ಅವರ ಮೂಲಕ ಸಲ್ಲಿಸಿದರು. ನಂತರ ಪ್ರತಿಭಟನಾಕಾರರು ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಕಾಮಗಾರಿ ಗುಣಮಟ್ಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆ ಪಿಎಸ್ಐ ಕೃಷ್ಣ ಸುಬೇದಾರ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಉಪಾಸಕ ಭೀಮರಾಯ ಸಿಂದಗೇರಿ, ಮಾನು ಗುರಿಕಾರ, ಆನಂದ ಹೇಮನೂರ, ಮೂರ್ತಿ ಬೊಮ್ಮನಹಳ್ಳಿ, ಚಂದ್ರಶೇಖರ ಕಟ್ಟಿಮನಿ, ಸಿದ್ದಪ್ಪ ಸುರಪುರಕರ್, ಖಾಜಾ ಹುಸೇನ ಗುಡಗುಂಟಿ, ರಾಮಣ್ಣ ಶೆಳ್ಳಗಿ, ಬಸವರಾಜ ಶೆಳ್ಳಗಿ, ಮಾನಪ್ಪ ಶೆಳ್ಳಗಿ, ಮಹೇಶ ಸುಂಗಲಕರ, ಗಣಪತಿ ದೇವಿಕೇರ ಸೇರಿದಂತೆ ಅನೇಕರು ಭಾಗವಹಿಸಿದ್ದರು.