ಯಾದಗಿರಿ | ಪಂಚ ಗ್ಯಾರಂಟಿ ಯೋಜನೆಗಳ ಜಾಗೃತಿಯ ಸಂಚಾರಿ ವಾಹನಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ
ಯಾದಗಿರಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಮೂಡಿಸುವ ಎಲ್ಇಡಿ ಸಂಚಾರ ವಾಹನಕ್ಕೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಇಂದು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ರಾಜ್ಯ ಸರಕಾರವು ಸಾಮಾನ್ಯ ಜನರ ಜೀವನಮಟ್ಟ ಸುಧಾರಣೆಗಾಗಿ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಶಕ್ತಿ ಯೋಜನೆ, ಯುವನಿಧಿ, ಗೃಹಜ್ಯೋತಿ, ಅನ್ನಭಾಗ್ಯ ಬಗ್ಗೆ ಎಲ್ಇಡಿ ವಾಹನ ಹಾಗೂ ಬೀದಿ ನಾಟಕ ತಂಡಗಳು ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.
ಸರ್ಕಾರದ ಯೋಜನೆಗಳ ಲಾಭ ನೇರವಾಗಿ ಜನರಿಗೆ ತಲುಪಬೇಕೆಂಬ ಉದ್ದೇಶದಿಂದ ಎಲ್ಇಡಿ ವಾಹನದ ಮೂಲಕ ಅರಿವು ಮೂಡಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆಯುವಂತೆ ಕೋರಲಾಗಿದೆ.
ಈ ವಾಹನಗಳು ಜಿಲ್ಲೆಯ ಯಾದಗಿರಿ ಹಾಗೂ ಗುರುಮಠಕಲ್ ತಾಲೂಕಿನ ತಲಾ 10 ಗ್ರಾಮಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಿದೆ, ಬೀದಿ ನಾಟಕ ತಂಡಗಳು, ದಿನಕ್ಕೆ 2ರಂತೆ ಬೀದಿ ನಾಟಕಗಳ ಮೂಲಕ ಅರಿವು ಮೂಡಿಸಲಿವೆ. ಅದರಂತೆ ಎಲ್ಇಡಿ ಮೂಲಕವು ಜನರಿಗೆ ಯೋಜನೆಗಳ ವನವರಿಕೆ ಮಾಡಲಾಗುತ್ತದೆ.
ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರು (ಪ್ರ) ಸುಲೈಮಾನ್ ಡಿ.ನದಾಫ್, ದತ್ತಾಂಶ ನಮೂದು ಸಹಾಯಕ (ಬೆರಳಚ್ಚುಗಾರರು) ಭೀಮಣ್ಣ ನಾಯಕ, ಸಿಬ್ಬಂದಿ ವಿಜಯಲಕ್ಷ್ಮಿ ಇನ್ನಿತರರು ಉಪಸ್ಥಿತರಿದ್ದರು.