ಯಾದಗಿರಿ | ರೈಲ್ವೆ ಬಡ್ತಿ ಪರೀಕ್ಷೆಗಳಲ್ಲಿ ಕನ್ನಡ ನಿರ್ಲಕ್ಷ್ಯ ನಿಲ್ಲಿಸಬೇಕು: ಕರವೇ ಆಗ್ರಹ
ಯಾದಗಿರಿ : 2012ರಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆದು ರೈಲ್ವೆ ಇಲಾಖೆಯಲ್ಲಿ ನೌಕರಿಗೆ ಸೇರಿದ ಸಿಬ್ಬಂದಿಯ ಬಡ್ತಿ ಹುದ್ದೆಗಳಿಗೆ ನಡೆಯುವ ಪರೀಕ್ಷೆಗಳಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದೇ ಘೋರ ಅನ್ಯಾಯ ಮಾಡಲಾಗುತ್ತಿದೆ. ಇದನ್ನು ತಕ್ಷಣ ನಿಲ್ಲಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಟಿ.ಎನ್.ಭೀಮುನಾಯಕ ಒತ್ತಾಯಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಬೇರೆ ಪ್ರಾದೇಶಿಕ ಭಾಷೆಗಳಿಗೆ ಅವಕಾಶ ನೀಡಿದ್ದರೂ ಕನ್ನಡಕ್ಕೆ ಮಾತ್ರ ತಾತ್ಸಾರ ತೋರಿಸಲಾಗುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರವೇ ವತಿಯಿಂದ ಈ ಹಿಂದೆ ಹಲವು ಬಾರಿ ಹೋರಾಟ ನಡೆಸಿದರೂ, ಆಗ ನೀಡಿದ ಭರವಸೆಗಳು ಇನ್ನೂ ಭರವಸೆಯಲ್ಲಿಯೇ ಉಳಿದಿವೆ. ಕನ್ನಡದಲ್ಲಿ ಪರೀಕ್ಷೆ ಬರೆದು ನೌಕರಿ ಪಡೆದ ಸಿಬ್ಬಂದಿಗೆ ಬಡ್ತಿ ಪರೀಕ್ಷೆಯನ್ನು ಮಾತ್ರ ಆಂಗ್ಲ ಅಥವಾ ಹಿಂದಿಯಲ್ಲಿ ಬರೆಯಬೇಕೆಂಬ ಹೇರಿಕೆ ಮಾಡಿರುವುದು ರೈಲ್ವೆ ಇಲಾಖೆಯ ಕುಚೋದ್ಯದ ಕ್ರಮ ಎಂದು ಟೀಕಿಸಿದರು.
ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ನೇಮಕಾತಿ ಅಧಿಸೂಚನೆಯಲ್ಲಿ ಕನ್ನಡದಲ್ಲೂ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಿಸಿ, ನಂತರ ಅದನ್ನು ಹಿಂಪಡೆದು ಪರೀಕ್ಷೆ ನಡೆಸಿರುವುದು ನಾಚಿಕೆಗೇಡು ಸಂಗತಿ ಎಂದು ಅವರು ಹೇಳಿದರು.
ಇದಕ್ಕೆ ಇಲಾಖೆ ನೀಡುತ್ತಿರುವ “ಕಂಪ್ಯೂಟರ್ ವ್ಯವಸ್ಥೆ ಇಲ್ಲ” ಎಂಬ ಕಾರಣ ಬಾಲಿಷ ಹಾಗೂ ಕೇವಲ ಸಬೂಬು ಮಾತ್ರ ಎಂದು ಆರೋಪಿಸಿದರು. ಇಂತಹ ಕಾರಣಗಳನ್ನು ಬಿಟ್ಟು ಕೂಡಲೇ ಕನ್ನಡದಲ್ಲಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪದೇಪದೇ ನಡೆಯುತ್ತಿರುವ ಈ ಅನ್ಯಾಯದ ಬಗ್ಗೆ ರಾಜ್ಯದ ಸಂಸದರು, ಕೇಂದ್ರ ಸಚಿವರು ಗಂಭೀರವಾಗಿ ಗಮನ ಹರಿಸಬೇಕು. ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಬೇಕು ಎಂದು ಮನವಿ ಮಾಡಿದರು.
ಕನ್ನಡದಲ್ಲಿ ಪರೀಕ್ಷೆ ಬರೆದು ಹುದ್ದೆ ಪಡೆದು 14 ವರ್ಷಗಳು ಕಳೆದರೂ ಬಡ್ತಿ ಪರೀಕ್ಷೆಗಳು ಕನ್ನಡದಲ್ಲಿ ನಡೆಯದಿರುವುದು ಅತ್ಯಂತ ನಾಚಿಕೆಗೇಡು ಸಂಗತಿ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಈ ಸಮಸ್ಯೆಯನ್ನು ಕೂಡಲೇ ಇತ್ಯರ್ಥಪಡಿಸದಿದ್ದರೆ ಹೋರಾಟ ತೀವ್ರಗೊಳಿಸಿ ರೈಲ್ವೆ ಇಲಾಖೆ ಪರೀಕ್ಷೆಗಳಿಗೆ ಅಡ್ಡಿಪಡಿಸುವ ಹೋರಾಟ ನಡೆಸಲಾಗುವುದು ಎಂದು ಕರವೇ ಮುಖಂಡರಾದ ಮಲ್ಲು ಮಾಳಿಕೇರಿ, ಸಿದ್ದು ನಾಯಕ ಹತ್ತಿಕುಣಿ, ಅಂಬ್ರೇಷ್ ಹತ್ತಿಮನಿ, ವಿಶ್ವಾರಾಜ ಪಾಟೀಲ್ ಹಾಗೂ ಪ್ರಕಾಶ ಪಾಟೀಲ್ ಜೈಗ್ರಾಮ್ ಎಚ್ಚರಿಕೆ ನೀಡಿದ್ದಾರೆ.