ಯಾದಗಿರಿ | ಜಿಲ್ಲೆಯಲ್ಲಿ ಶೇ.96.05ರಷ್ಟು ಗ್ಯಾರಂಟಿ ಯೋಜನೆಗಳು ಜಾರಿ : ಮೈರೋಝ್ ಖಾನ್
ಯಾದಗಿರಿ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಡಿ ಜಿಲ್ಲೆಯಲ್ಲಿ ಶೇ 96.05 ರಷ್ಟು ಫಲಪ್ರದವಾಗಿ ಜಾರಿಯಾಗಿವೆ ಎಂದು ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೈರೋಝ್ ಖಾನ್ ತಿಳಿಸಿದ್ದಾರೆ.
ಬುಧವಾರ ಸಂಜೆ ಇಲ್ಲಿನ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಎಲ್ಲ ಯೋಜನೆಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುತ್ತಿದ್ದಾರೆ. ಜಿಲ್ಲಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಡಿಸಿ, ಜಿಪಂ ಸಿಇಓ ಅವರು ಮಾಸಿಕ ಸಭೆ ನಡೆಸಿ, ಪರಿಶೀಲನೆ ಮಾಡುತ್ತಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಯಶಸ್ವಿಯಾಗಿ ಯೋಜನೆಗಳು ಕಾರ್ಯಗತವಾಗುತ್ತಿವೆ ಎಂದು ಅವರು ಹೇಳಿದರು.
ಪದವಿ ಪಡೆದ ಯುವಕರಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕೌಶಲ್ಯ ತರಬೇತಿ ನೀಡುವ ಮೂಲಕ ಅವರಿಗೆ ಕೆಲಸದ ಭದ್ರತೆಗೆ ಅನುಕೂಲ ಮಾಡಿಕೊಡಲಾಗುವುದೆಂದರು.
ಜಿಲ್ಲಾ ಸಮಿತಿ ಅಧ್ಯಕ್ಷ ಶ್ರೇಣಿಕುಮಾರ ದೋಖಾ, ಉಪಾಧ್ಯಕ್ಷ ಬಸ್ಸು ಗೌಡ ಬಿಳ್ಹಾರ, ಡಿಸಿ ಡಾ.ಸುಶೀಲಾ ಬಿ., ಜಿಪಂ ಸಿಇಓ ಲವೀಶ್ ಒರಡಿಯಾ ಸೇರಿದಂತೆ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.