ಯಾದಗಿರಿ: ವಡಿಗೇರ ತಾಲೂಕಿನ ಗುರಸುಣಗಿ ಗ್ರಾಮದ ಬೆಟ್ಟದಲ್ಲಿರುವ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದವರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ತೀವ್ರವಾಗಿ ಖಂಡಿಸಿದೆ.

ಹಲ್ಲೆಯಲ್ಲಿ ಗಾಯಗೊಂಡು ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಸಂಘಟನೆಯ ಪದಾಧಿಕಾರಿಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು.

ಸಾರ್ವಜನಿಕ ಸ್ಥಳವಾಗಿರುವ ದೇವಸ್ಥಾನಕ್ಕೆ ತೆರಳಿದವರ ಮೇಲೆ ಹಲ್ಲೆ ನಡೆಸಿದ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಒತ್ತಾಯಿಸಿದೆ.

ಈ ಕುರಿತು ಮಾತನಾಡಿದ ಮುಖಂಡರು, ದೇವಸ್ಥಾನಗಳು ಯಾವುದೇ ಒಂದು ಸಮುದಾಯದ ಸ್ವತ್ತಲ್ಲ. ಧಾರ್ಮಿಕ ಕೇಂದ್ರಗಳು ಎಲ್ಲರಿಗೂ ಮುಕ್ತವಾಗಿದ್ದು, ದೇವಸ್ಥಾನಕ್ಕೆ ತೆರಳಿದವರ ಮೇಲೆ ಹಲ್ಲೆ ನಡೆಸುವುದು ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದರು.

ಸವರ್ಣ ಸಮುದಾಯದವರು ದೇವಸ್ಥಾನಗಳನ್ನು ತಮ್ಮ ವೈಯಕ್ತಿಕ ಸ್ವತ್ತೆಂಬ ಮನೋಭಾವ ತೊರೆಯಬೇಕು. ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳನ್ನು ಅನುಸರಿಸುವ ದಲಿತ ಸಮುದಾಯ ಶಿಕ್ಷಣ ಮತ್ತು ಮಕ್ಕಳ ಭವಿಷ್ಯ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಂಘಟನೆ ಮನವಿ ಮಾಡಿತು.

ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸಿದರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಎಚ್ಚರಿಕೆ ನೀಡಿದೆ.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ರಾಮಣ್ಣ ಕಲ್ಲದೇವನಹಳ್ಳಿ, ಜಿಲ್ಲಾ ಸಂಚಾಲಕ ಮಾಳಪ್ಪ ಕಿರದಳ್ಳಿ, ಮರುಳಸಿದ್ದಪ್ಪ ನಾಯ್ಕಲ್, ಪರಶುರಾಮ ಮಹಲ್ ರೋಜಾ, ಅಶೋಕ್ ನಾಯ್ಕಲ್, ನಿಂಗಣ್ಣ ಬೀರನಾಳ, ಭೀಮಪ್ಪ ಗುರುಮಿಠಕಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor